ಚಾಮರಾಜನಗರ: ಮುಖ್ಯ ಶಿಕ್ಷಕ ವಿದ್ಯಾರ್ಥಿಗೆ ಸ್ಕೇಲ್ನಿಂದ ಹೊಡೆದ ಪರಿಣಾಮ ವಿದ್ಯಾರ್ಥಿ ಕಣ್ಣಿನ ದೃಷ್ಟಿ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಶಿಕ್ಷಕನ್ನು ಅಮಾನತು ಮಾಡಿರುವ ಘಟನೆ ಚಾಮರಾಜನಗರದಲ್ಲಿ ಜರುಗಿದೆ.
ಚಾಮರಾಜನಗರದ ರಾಮಸಮುದ್ರದ ಬಾಲರ ಪಟ್ಟಣ ಶಾಲೆಯ ಮುಖ್ಯ ಶಿಕ್ಷಕ ಯುಸೇಫ್, ಗಿರಿಮಲ್ಲೇಶ್ ಎಂಬ ವಿದ್ಯಾರ್ಥಿಗೆ ಸ್ಕೇಲ್ನಿಂದ ಹೊಡೆದಿರುವ ಪ್ರಕರಣ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಶಾಲೆಯ ಆಡಳಿತ ಮಂಡಳಿ ಮುಖ್ಯಶಿಕ್ಷಕನನ್ನು ಅಮಾನತು ಮಾಡಿದೆ. ಸ್ಕೇಲ್ ನಿಂದ ಹೊಡೆದ ಪರಿಣಾಮ ವಿದ್ಯಾರ್ಥಿ ಎಡಗಣ್ಣಿನ ದೃಷ್ಟಿ ಕಳೆದುಕೊಂಡಿದ್ದಾನೆ.
ಏನಿದು ಘಟನೆ?;
ಜನವರಿಯಲ್ಲಿ ಶಾಲೆಯ ಸಮಯದಲ್ಲಿ ಗಿರಿಮಲ್ಲೇಶ್ ಗಲಾಟೆ ಮಾಡುತ್ತಿದ್ದ ಎಂದು ಶಿಕ್ಷಕ ಸ್ಕೇಲ್ ಮೂಲಕ ಹೊಡೆದಿದ್ದಾನೆ. ಈ ವೇಳೆ ವಿದ್ಯಾರ್ಥಿ ಕಣ್ಣಿಗೆ ಸ್ಕೇಲ್ ಬಿದ್ದ ಕಾರಣ ವಿದ್ಯಾರ್ಥಿಯ ಕಣ್ಣಿಗೆ ಪೆಟ್ಟು ಬಿದ್ದಿದೆ. ಇದಾದ ನಂತರ ವಿದ್ಯಾರ್ಥಿ ತನಗೆ ಯಾವುದೇ ನೋವಾಗಿಲ್ಲ ಎಂದು ತಿಳಿದುಕೊಂಡಿದ್ದಾನೆ. ಇದೀಗ ವಿದ್ಯಾರ್ಥಿಗೆ ಕಣ್ಣಿನ ನೋವು ಕಾಡುತ್ತಿದ್ದ ಕಾರಣ ತಂದೆ ಸೋಮೇಶ್ ಮೈಸೂರಿನ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ಮಾಡಿದ್ದಾರೆ. ಈ ವೇಳೆ ಕಣ್ಣಿಗೆ ಬಲವಾದ ಪೆಟ್ಟು ಬಿದ್ದಿದೆ. ಹೀಗಾಗಿ ಈತನ ದೃಷ್ಟಿ ಹೋಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ನಂತರ ಗಿರಿಮಲ್ಲೇಶ್ನನ್ನು ಪೋಷಕರು ವಿಚಾರಿಸಿದಾಗ ಐದು ತಿಂಗಳ ಹಿಂದೆ ಶಾಲೆಯಲ್ಲಿ ಹೀಗೆ ಆಗಿದೆ ಎಂದು ಹೇಳಿದ್ದಾನೆ. ಈ ಬಗ್ಗೆ ಗಿರಿಮಲ್ಲೇಶ್ ಪೋಷಕರು ಶಾಲೆಯ ಆಡಳಿತ ಮಂಡಳಿಯನ್ನು ಪ್ರಶ್ನಿಸಿದ್ದಾರೆ. ಇದ್ದನ್ನು ಒಪ್ಪಿಕೊಳ್ಳದ ಶಾಲಾ ಆಡಳಿತ ಮಂಡಳಿ ಮುಖ್ಯ ಶಿಕ್ಷಕ ಯುಸೇಫ್ರನ್ನು 10 ದಿನಗಳ ರಜೆ ಮೇಲೆ ಕಳುಹಿಸಿತ್ತು. ಆದರೆ ಇದೀಗ ಪ್ರಕರಣ ವ್ಯಾಪಕ ಚರ್ಚೆ ಆದ ಕಾರಣ ಶಾಲೆಯ ಆಡಳಿತ ಮಂಡಳಿ ಯುಸೇಫ್ ನನ್ನು ಅಮಾನತುಗೊಳಿಸಿದೆ. ಸದ್ಯ ಗಿರಿಮಲ್ಲೇಶ್ ತಮಿಳುನಾಡಿನ ಕೊಯಮತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.