ಬಾಗಲಕೋಟೆ: ಸುಳ್ವಾಡಿ ವಿಷಪ್ರಾಶನ ಪ್ರಕರಣ ಅತ್ಯಂತ ವಿಷಾದಕರ ಸಂಗತಿಯಾಗಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆಯೆಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ಸುಳ್ವಾಡಿ ವಿಷಪ್ರಾಶನ ಪ್ರಕರಣ ಅತ್ಯಂತ ವಿಷಾದಕರ ಸಂಗತಿಯಾಗಿದೆ. ಈ ರೀತಿಯ ಘಟನೆ ನಡೆಯಬಾರದಿತ್ತು. ಆದರೆ ದುರದೃಷ್ಟವಶಾತ್ ನಡೆದಿದೆ. ಈ ಬಗ್ಗೆ ಸಮರ್ಪಕ ತನಿಖೆ ನಡೆಯುತ್ತಿದೆ. ತನಿಖೆ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಇಂದು ಸಂಜೆ ಮೈಸೂರು ಆಸ್ಪತ್ರೆಗೆ ಭೇಟಿ ನೀಡುತ್ತೇನೆ. ಶುಕ್ರವಾರವೇ ಆಸ್ಪತ್ರೆಗೆ ಹೋಗಬೇಕಾಗಿತ್ತು. ಆದರೆ ನಿಗದಿತ ಸಭೆಯಿದ್ದ ಕಾರಣ ಹೋಗಲು ಸಾಧ್ಯವಾಗಿರಲಿಲ್ಲ. ಇಲಾಖೆಯಿಂದ ಎಲ್ಲಾ ಪ್ರಯತ್ನ ಮಾಡಲಾಗಿದೆ. ಈ ಬಗ್ಗೆ ಸಮರ್ಪಕ ತನಿಖೆ ನಡೆಯುತ್ತಿದೆ. ತನಿಖೆ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದು.
ಸಮ್ಮಿಶ್ರ ಸರ್ಕಾರದಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಉತ್ತರ ಕರ್ನಾಟಕ ಭಾಗದ ಶಾಸಕರ ಸಭೆ ಬಗ್ಗೆ ನನಗೆ ಗೊತ್ತಿಲ್ಲ. ಬಸವರಾಜ ಹೊರಟ್ಟಿ ಅಥವಾ ಎಸ್ ಆರ್ ಪಾಟೀಲ್ ಗೆ ಸಭಾಪತಿ ಸ್ಥಾನ ನೀಡಬೇಕಾಗಿತ್ತು. ಇಬ್ಬರೂ ಮುಖಂಡರು ಸಭಾಪತಿ ಸ್ಥಾನಕ್ಕಾಗಿ ಮುಂಚೂಣಿಯಲ್ಲಿದ್ದರು. ಆದರೆ ಹೈಕಮಾಂಡ್ ಮಟ್ಟದಲ್ಲಿ ಏನಾಗಿದೆ ಎಂಬುದು ಗೊತ್ತಿಲ್ಲ. ಸಭಾಪತಿ ಆಯ್ಕೆಯ ವಿಚಾರದಲ್ಲಿ ಸಿದ್ದರಾಮಯ್ಯನವರು ಅಸಮಾಧಾನವಾಗಿಲ್ಲವೆಂದು ಸಮರ್ಥಿಸಿಕೊಂಡರು.
ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದಲ್ಲಿ ಹೆಬ್ಬೆಟ್ಟಿನ ಮುಖ್ಯಮಂತ್ರಿ ಆಗಿದ್ದಾರೆಂಬ ಹೊರಟ್ಟಿ ಹೇಳಿಕೆಗೆ ಪ್ರತಿಕ್ರಿಯಿಸಿ, ಹೊರಟ್ಟಿ ಅವರದ್ದು ವೈಯಕ್ತಿಕ ಹೇಳಿಕೆ, ಆ ರೀತಿ ಮಾತನಾಡಬಾರದಿತ್ತು. ಅಲ್ಲದೇ ಉತ್ತರ ಕರ್ನಾಟಕ ಅನ್ಯಾಯ ಸರಿಪಡಿಸಲು ಸಂಪುಟದಲ್ಲಿ ಪ್ರಾಧಾನ್ಯತೆ ಕೊಡಲು ತಿಳಿಸಿದ್ದೇವೆ. ಅದು ನೆರವೇರುವ ನಿರೀಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಭಾಗದ ಕೃಷ್ಣಾ ಮೇಲ್ದಂಡೆ ಯೋಜನೆ ಪುನರ್ವಸತಿ ಮತ್ತು ಪುನರ್ ನಿರ್ಮಾಣದ ಸಮಸ್ಯೆ ಯಾವಾಗಲೂ ಇರುತ್ತದೆ. ಆ ಸಮಸ್ಯೆ ನಿರಂತರವಾಗಿದ್ದು, ಜಲಾಶಯದ ಮಟ್ಟ ಹೆಚ್ಚಿಸೋದು ನಮ್ಮ ಮುಂದಿರುವ ಕಾರ್ಯವಾಗಿದೆ. ಅಲ್ಲದೇ ಈ ಬಗ್ಗೆ ಸದನದಲ್ಲಿಯೂ ಚರ್ಚೆ ನಡೆದಿದೆ. ಇನ್ನೂ ನಡೆಯಲಿದೆ ಎಂದು ಹೇಳಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com