ರಾಯಚೂರು: ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಸಿಡಿಲು ಬಡಿದು ನಸ್9 ಸಾವನ್ನಪ್ಪಿರುವ ಘಟನೆ ದೇವದುರ್ಗ ಪಟ್ಟಣದಲ್ಲಿ ನಡೆದಿದೆ.
ಮಾನ್ವಿಯ ವಟಗಲ್ ಮೂಲದ 28 ವರ್ಷದ ನೀಲಮ್ಮ ಮೃತ ದುರ್ದೈವಿ. ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದಾಗ ಆಸ್ಪತ್ರೆ ಕಾಂಪೌಂಡ್ ಪಕ್ಕದಲ್ಲೇ ಸಿಡಿಲು ಬಡಿದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ದೇವದುರ್ಗ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಘಟನೆ ಹಿನ್ನೆಲೆ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೂ ದೇವದುರ್ಗ ತಾಲೂಕಿನ ಜಾಲಹಳ್ಳಿಯಲ್ಲಿ ಭಾರೀ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ವಿದ್ಯುತ್ ವಿತರಣಾ ಕೇಂದ್ರಕ್ಕೂ ನೀರು ನುಗ್ಗಿ ಸುತ್ತಮುತ್ತಲ ಗ್ರಾಮಗಳ ವಿದ್ಯುತ್ ಕಡಿತವಾಗಿದೆ.
ಮಾನ್ವಿ ತಾಲೂಕಿನಲ್ಲೂ ಭಾರಿ ಮಳೆ ಸುರಿದಿದ್ದು ಹಳ್ಳಗಳು ತುಂಬಿ ಹರಿಯುತ್ತಿವೆ. ತಾಲೂಕಿನ ಗವಿಗಟ್ಟು, ಅಮರಾವತಿ ಗ್ರಾಮದ ಹಳ್ಳ ತುಂಬಿ ಹರಿಯುತ್ತಿರುವ ಪರಿಣಾಮ ಅಲ್ದಾಳ, ಗವಿಗಟ್ಟು, ಬಲ್ಲಟಗಿ ಗ್ರಾಮಗಳ ರಸ್ತೆ ಸಂಪರ್ಕ ಸಂಪೂರ್ಣ ಖಡಿತವಾಗಿದೆ. ಹಳ್ಳದ ಪಕ್ಕದ ಹೊಲಗಳಿಗೆ ನೀರು ನುಗ್ಗಿದ್ದು ಹತ್ತಿ, ಮೆಣಸಿನಕಾಯಿ ಬೆಳೆ ಹಾಳಾಗಿದೆ.