ಬೆಂಗಳೂರು: ರಾಜ್ಯದ ಹಲವೆಡೆ ಮಳೆಯ ಅಬ್ಬರ ಮುಂದುವರೆದಿದೆ. ಮಡಿಕೇರಿಯ ಕಾವೇರಿ ನದಿಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಹಳ್ಳ-ಕೊಳ್ಳ ನದಿ ತೊರೆಗಳು ಹರಿಯುವ ತಟಗಳಲ್ಲಿರುವ ಗದ್ದೆ-ತೋಟಗಳಿಗೆ ನೀರು ನುಗ್ಗಿದೆ. ಕರ್ನಾಟಕ-ಕೇರಳ ಸಂಪರ್ಕ ಕಲ್ಪಿಸುವ ವಿರಾಜಪೇಟೆ ತಾಲೂಕಿನ ಪೆರುಂಬಾಡಿ ಬಳಿ ರಸ್ತೆಯೇ ಕುಸಿದು ಸಂಪರ್ಕ ಕಡಿತಗೊಂಡಿದೆ. ತಾತ್ಕಾಲಿಕವಾಗಿ ರಸ್ತೆ ರಿಪೇರಿ ಕೆಲಸ ನಡೆಯುತ್ತಿದೆ.
ಮಹಾರಾಷ್ಟ್ರದಲ್ಲಿ ಭೀಕರ ಮಳೆಯಾಗುತ್ತಿದ್ದು ಬೆಳಗಾವಿ, ಚಿಕ್ಕೋಡಿ ಭಾಗದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಕಳೆದ ಎರಡು ದಿನಗಳಿಂದ ರಾಯಭಾಗ ಹಾಗೂ ಅಥಣಿ ತಾಲೂಕಿನಲ್ಲಿ ಪ್ರವಾಹ ಭೀತಿ ಎದುರಾಗಿದೆ. 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡಲಾಗ್ತಿದೆ. ದೂದಗಂಗಾ, ವೇದಗಂಗಾ ಕೃಷ್ಣಾ ನದಿ ಮೇಲಿರುವ ಕೆಳ ಹಂತದ 6 ಸೇತುವೆಗಳು ಜಲಾವೃತಗೊಂಡಿವೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನದಿ ಪಾತ್ರದಲ್ಲಿ ಜನರ ಸಂಚಾರ ಅಸ್ತವ್ಯಸ್ಥವಾಗಿದೆ. ಪ್ರವಾಹದ ಆತಂಕವಿಲ್ಲ, 2 ಲಕ್ಷ ಕ್ಯೂಸೆಕ್ ಮೇಲೆ ನೀರು ಬಂದರೆ ಮಾತ್ರ ಸಮಸ್ಯೆ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
ಚಿಕ್ಕಮಗಳೂರು, ಶಿವಮೊಗ್ಗ ಭಾಗದಲ್ಲಿ ಮಳೆ ಸ್ವಲ್ಪಮಟ್ಟಿಗೆ ತಗ್ಗಿದೆ. ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಕಳಸ, ಕುದುರೆಮುಖದಲ್ಲಿ ಮಳೆಯಾಗ್ತಿದ್ದು, ತುಂಬಾ, ಭದ್ರಾ ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ.