ಬೆಂಗಳೂರು: ಇಂದು ನಾಡಿನೆಲ್ಲೆಡೆ ನವರಾತ್ರಿ ಸಂಭ್ರಮ ಜೋರಾಗಿದೆ. ಈ ಸಂಭ್ರಮಕ್ಕೆ ವರುಣ ದೇವ ಅಡ್ಡಿಪಡಿಸುವ ಸಾಧ್ಯತೆಯಿದೆ.
ಬೆಂಗಳೂರು ಸೇರಿದಂತೆ ರಾಜ್ಯದ 23 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಚಿತ್ರದುರ್ಗ, ಬಳ್ಳಾರಿ, ಚಾಮರಾಜನಗರ, ದಾವಣಗೆರೆ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ 7 ಜಿಲ್ಲೆಗಳನ್ನು ಹೊರತುಪಡಿಸಿ, ಉಳಿದ 23 ಜಿಲ್ಲೆಗಳಿಗೆ ಹವಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ.
ಬೆಂಗಳೂರಿಗೂ ಸಹ ಹಳದಿ ಅಲರ್ಟ್ ಘೋಷಿಸಿದ್ದು, ಸಂಜೆಯಿಂದ ರಾತ್ರಿಯವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸುಮಾರು 7 ರಿಂದ 11 ಸೆಂ.ಮೀ. ಮಳೆಯಾಗುವ ನಿರೀಕ್ಷೆಯಿದ್ದು, ಮಧ್ಯಾಹ್ನದ ವೇಳೆಗೆ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆಯಿಂದ ರಾತ್ರಿವರೆಗೂ ವ್ಯಾಪಕ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ತೆಲಂಗಾಣದಲ್ಲಿ ಸೈಕ್ಲೋನ್ ಸಕ್ರ್ಯೂಲೇಷನ್ ಇರುವುದರಿಂದ ಹಾಗೂ ಕೇರಳದ ಕಡಿಮೆ ಒತ್ತಡ ರೇಖೆ ತನ್ನ ದಿಕ್ಕು ಬದಲಿಸುತ್ತಿರುವುದರಿಂದ ಮಳೆ ಹೆಚ್ಚಾಗಲಿದೆ ಎಂದು ಮಾಹಿತಿ ನೀಡಿದೆ.
ನಿನ್ನೆಯೂ ಸಹ ಹವಾಮಾನ ಇಲಾಖೆ ರಾಜ್ಯದ 26 ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಿತ್ತು. ಚಿತ್ರದುರ್ಗ, ಚಾಮರಾಜನಗರ, ಬಳ್ಳಾರಿ, ದಾವಣಗೆರೆ ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಿಗೂ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿತ್ತು. ಇಂದು 23 ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಿದೆ.