ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಕಳೆದ ಮೂರು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಇಂದು ಸಹ ಗುಡುಗು ಸಿಡಿಲು ಸಹಿತ ಮಳೆಯಾಗಿದೆ.
ಮಲೆನಾಡಿನ ಭಾಗದಲ್ಲಿ ಮಳೆ ಹೆಚ್ಚಾದ ಕಾರಣ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಸಹ ಹೆಚ್ಚಾಗಿದ್ದು, 9 ಕ್ರಸ್ಟ್ ಗೇಟ್ ಗಳ ಮೂಲಕ ಸುಮಾರು 19 ಸಾವಿರ ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಇತ್ತ ಜಲಾಶಯದ ಪಾತ್ರದಲ್ಲಿ ಮಳೆ ಹೆಚ್ಚಾದ ಪರಿಣಾಮ ಜೋಗ ಜಲಪಾತ ಕಂಗೊಳಿಸುತ್ತಿದ್ದು, ಜೋಗದ ಸೊಬಗು ಪ್ರವಾಸಿಗರನ್ನು ತನ್ನತ್ತ ಕೈ ಬೀಸಿ ಕರೆಯುತ್ತಿದೆ.
ಇತ್ತ ಕೊಡಗು ಜಿಲ್ಲೆಯಲ್ಲೂ ಭಾರೀ ಮಳೆಯಾಗುವ ಆತಂಕ ಮೂಡಿದ್ದು, ಅ.20 ರಿಂದ 23 ವರೆಗೆ ಕೊಡಗಿನಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಸುಮಾರು 204 ಮಿಲಿ ಮೀಟರ್ ಮಳೆಯಾಗುವ ಸಾಧ್ಯತೆ ಇದ್ದು, ಮುಂದಿನ 5 ದಿನಗಳ ಕಾಲ ಪ್ರವಾಸಿಗರು, ಜಿಲ್ಲೆಯ ಜನರು ಎಚ್ಚರದಿಂದ ಇರುವಂತೆ ಸೂಚನೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಿಂಗಾರು ಮಳೆಯ ಅಬ್ಬರ ಜೋರಾಗಿದ್ದು, ಇನ್ನೂ 5 ದಿನ ಭಾರೀ ಮಳೆಯಾಗುವ ಮುನ್ನೆಚ್ಚರಿಕೆಯಿಂದ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದಲ್ಲಿ ಹಿಂಗಾರು ಮಳೆ ಅಬ್ಬರಕ್ಕೆ ಕೊಪ್ಪಳದ ಹಿರೇಹಳ್ಳ ಜಲಾಶಯ ತುಂಬಿದ್ದು, 3 ಕ್ರಸ್ಟ್ ಗೇಟ್ ಮೂಲಕ ಹಳ್ಳಕ್ಕೆ ನೀರು ಬಿಡಲಾಗಿದೆ. ಪರಿಣಾಮ ಕೋಳೂರಿನ ಬ್ರಿಡ್ಜ್ ಕಮ್ ಬ್ಯಾರೇಜ್ನ ತಡೆಗೋಡೆ ಕುಸಿಯುತ್ತಿದೆ. ಇಂಡಿ ತಾಲೂಕಿನ ತಾಂಬಾ-ಕೆಂಗನಾಳ ರಸ್ತೆ ಮೇಲೆ ನೀರು ಹರಿಯುತ್ತಿದೆ. ರಾಯಚೂರಿನ ತುರ್ವಿಹಾಳದಲ್ಲಿ ಕಾಲೇಜಿಗೆ ನೀರುನುಗ್ಗಿದ್ದು, ಬಾಗಲಕೋಟೆಯ ಇಳಕಲ್ನಲ್ಲಿ ಹೊಲಗದ್ದೆಗಳು ಜಲಾವೃತವಾಗಿವೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನಲ್ಲಿ ವ್ಯಾಪಕ ಮಳೆಯಾಗಿ ಹಳ್ಳಕೊಳ್ಳಗಳು ತುಂಬಿ ಹರಿದಿದೆ.