– ಮಳೆ ಮುನ್ಸೂಚನೆಯಿದ್ದರೂ ಗರಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆಯಿಲ್ಲ
ಬೆಂಗಳೂರು: ಮುಂದಿನ 3 ದಿನ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನ ಮುಂದುವರಿಯಲಿದೆ. ಬೆಂಗಳೂರಿನಲ್ಲೂ ಮಳೆಯಾಗುವ ಸಾಧ್ಯತೆಯಿದ್ದು, ತಾಪಮಾನದಲ್ಲಿ ಅಲ್ಪ ಇಳಿಕೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಇನ್ನೊಂದು ವಾರ ತಾಪಮಾನದಲ್ಲಿ ಏರುಪೇರು – ಉತ್ತರ ಕರ್ನಾಟಕಕ್ಕೆ ಅಪ್ಪಳಿಸಲಿದೆ 42° ತಾಪಮಾನ
ಹವಾಮಾನ ಇಲಾಖೆಯ ವರದಿಯ ಪ್ರಕಾರ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮೇ 8 ಮತ್ತು 9ರಂದು ಗುಡುಗು ಸಹಿತ ಮಳೆಯಾಗಲಿದೆ ಹಾಗೂ ಉತ್ತರ ಒಳನಾಡಿನ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮೇ 8ರಂದು ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.
ಮುಂದಿನ 3 ದಿನಗಳವರೆಗೆ ಮೋಡ, ಸಾಪೇಕ್ಷ ಆರ್ದ್ರತೆ, ಮಳೆ, ತಾಪಮಾನ ಮತ್ತು ಗಾಳಿಯ ಧಿಕ್ಕು ಹಾಗೂ ವೇಗದಂತಹ ಗ್ರಾಮ ಪಂಚಾಯತ್ ಮಟ್ಟದ ಮುನ್ಸೂಚನೆ.
Gram Panchayat level Forecast -Cloudiness, Relative Humidity, Rainfall, Temperature & Wind speed & direction for the next 3 days. #KSNDMC pic.twitter.com/A7Hzc0k6i2— Karnataka State Natural Disaster Monitoring Centre (@KarnatakaSNDMC) May 7, 2026
ಮಳೆಯ ಸಮಯದಲ್ಲಿ ಕೆಲವು ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಮುಂದಿನ 24 ರಿಂದ 48 ಗಂಟೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಗರದ ಗರಿಷ್ಠ ತಾಪಮಾನ 33 ಡಿಗ್ರಿ ಮತ್ತು ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ ಎಂದು ಐಎಂಡಿಯ ಬೆಂಗಳೂರು ಕೇಂದ್ರದ ಮುಖ್ಯಸ್ಥರು ಮಾಹಿತಿ ನೀಡಿದ್ದಾರೆ.
ಮಳೆಯ ಮುನ್ಸೂಚನೆಯಿದ್ದರೂ ರಾಜ್ಯದ ಗರಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆಯಾಗುವ ಸಾಧ್ಯತೆಯಿಲ್ಲ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು 38 ರಿಂದ 40 ಡಿಗ್ರಿ ಸೆಲ್ಸಿಯಸ್ವರೆಗೆ ಮುಂದುವರಿಯಲಿದೆ.ಇದನ್ನೂ ಓದಿ: ಶಿವಮೊಗ್ಗ, ಹಾವೇರಿಯಲ್ಲಿ ಧಾರಾಕಾರ ಮಳೆ

