ಚಾಮರಾಜನಗರ: ಕಬಿನಿ ಹಾಗೂ ಕೆಆರ್ಎಸ್ ಜಲಾಶಯಗಳಿಂದ ಅಧಿಕ ಪ್ರಮಾಣದಲ್ಲಿ ನೀರು ಹರಿಸುತ್ತಿರುವುದರಿಂದ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ನದಿ ಪಾತ್ರದ ಗ್ರಾಮಗಳಿಗೆ ಮುಳುಗಡೆಯ ಭೀತಿ ಎದುರಾಗಿದೆ.
ಕೊಳ್ಳೇಗಾಲ ತಾಲೂಕಿನ ಎಡಕೂರಿಯ, ಹಳೆಹಂಪಾಪುರ, ದಾಸನಪುರ, ಹಣೆಗಳ್ಳಿ, ಮುಳ್ಳುರು ಸೇರಿದಂತೆ ಇನ್ನಿತರ ಗ್ರಾಮಗಳ ಜಮೀನುಗಳು ಈಗಾಗಲೇ ಜಲಾವೃತಗೊಂಡಿವೆ. ಇದರಿಂದ ಜಮೀನಿನಲ್ಲಿ ಬೆಳೆದಿದ್ದ ಭತ್ತ, ರಾಗಿ, ಕಬ್ಬು, ಬಾಳೆ, ತೆಂಗು ಸೇರಿದಂತೆ ಮುಂತಾದ ಬೆಳೆಗಳಿಗೆ ಹಾನಿಯುಂಟಾಗಿದ್ದು, ನದಿ ಪಾತ್ರದ ಜನರು ಆತಂಕದಲ್ಲಿದ್ದಾರೆ. ಹೀಗಾಗಿ ಜಿಲ್ಲಾಧಿಕಾರಿ ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ಹೋಗಲು ಆದೇಶವನ್ನು ಸಹ ನೀಡಿದ್ದಾರೆ. ಅಲ್ಲದೇ ನದಿಯ ದಂಡೆ ಹಾಗೂ ತಗ್ಗು ಪ್ರದೇಶದಲ್ಲಿರುವ ಜನರು ತಮ್ಮ ರಕ್ಷಣೆಗೆ ಮೊದಲು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದ್ದಾರೆ.
ಇನ್ನು ಕೇರಳದಲ್ಲಿ ಸುರಿಯುತ್ತಿರುವ ಮಳೆಯ ಪ್ರಮಾಣವು ಹೆಚ್ಚಳವಾಗಿದ್ದು, ಅನಿವಾರ್ಯವಾಗಿ ನದಿಗೆ ಹೆಚ್ಚಿನ ನೀರು ಹರಿದು ಬಿಡಲಾಗಿದೆ. ಕಬಿನಿ ಜಲಾಶಯದ ಇತಿಹಾಸದಲ್ಲಿ ಮೊದಲ ಬಾರಿಗೆ 80 ಸಾವಿರ ಕ್ಯೂಸೆಕ್ ನೀರನ್ನು ನದಿ ನೀರನ್ನು ಹೊರಗೆ ಬಿಡಲಾಗಿತ್ತು. ಹಾಗೆಯೇ ಕೆಆರ್ ಎಸ್ ಅಣೆಕಟ್ಟಿನಿಂದಲೂ 40 ಸಾವಿರ ಕ್ಯೂಸೆಕ್ ನೀರನ್ನು ಕ್ರಸ್ಟ್ ಗೇಟ್ ಮೂಲಕ ಹೊರಕ್ಕೆ ಬಿಡಲಾಗಿತ್ತು. ಈ ಮೂಲಕ ಕಾವೇರಿ ಕೊಳ್ಳದ ಕೇವಲ 2 ಜಲಾಶಯಗಳಿಂದಲೇ 1 ಲಕ್ಷ ಕ್ಯೂಸೆಕ್ ಅಧಿಕ ಪ್ರಮಾಣದ ನೀರು ನದಿಗೆ ಹರಿಸಲಾಗುತ್ತಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews