ಬೆಂಗಳೂರು: ರಾಜ್ಯದಲ್ಲಿ ಲೋಕಸಭೆಯ ಮೊದಲ ಹಂತದ ಮತದಾನಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು ಒಟ್ಟು 14 ಕ್ಷೇತ್ರಗಳಲ್ಲಿ ಗುರುವಾರ ಮತದಾನ ನಡೆಯಲಿದೆ.
ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯ ತನಕ ಮತದಾನ ನಡೆಯಲಿದೆ. ಉಡುಪಿ- ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
ಒಟ್ಟು 3 ಕೋಟಿಗೂ ಹೆಚ್ಚು ಜನ ಮೊದಲ ಹಂತದಲ್ಲಿ ಮತದಾನ ಮಾಡಲಿದ್ದಾರೆ. ಅದರಲ್ಲಿ ಬೆಂಗಳೂರು ದಕ್ಷಿಣ ಲೋಕಾಸಭಾ ಕ್ಷೇತ್ರ 28,48,705 ಮತದಾರರ ಹೊಂದಿದ್ದು, ಅತಿ ದೊಡ್ಡ ಕ್ಷೇತ್ರ ಅನಿಸಿದರೆ, 15,13,333ರ ಮತದಾರರನ್ನು ಹೊಂದಿರುವ ಉಡುಪಿ ಚಿಕ್ಕಮಗಳೂರು ಸಣ್ಣ ಕ್ಷೇತ್ರವಾಗಿದೆ. ಇದೇ ಪ್ರಥಮ ಬಾರಿಗೆ ಒಟ್ಟು 25 ಲಕ್ಷಕ್ಕೂ ಹೆಚ್ಚು ಮತದಾರರು ಪ್ರಪ್ರಥಮ ಬಾರಿಗೆ ಮತದಾನ ಮಾಡಲಿದ್ದಾರೆ. ಒಟ್ಟು 3 ಸಾವಿರಕ್ಕೂ ಹೆಚ್ಚು ಕೆಎಸ್ಆರ್ ಟಿಸಿ ಬಸ್ಗಳನ್ನು ಚುನಾವಣೆಗಾಗಿ ಬಳಸಿಕೊಳ್ಳಲಿದ್ದಾರೆ.
ಈ ಬಾರಿಯ ಚುನಾವಣೆ ಭಾರೀ ಕುತೂಹಲದಿಂದ ಕೂಡಿದ್ದು ಅದರಲ್ಲೂ ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ದೇಶದ ಗಮನ ಸೆಳೆದಿದೆ. ಇಲ್ಲಿ ಹಾಲಿ ಮುಖ್ಯಮಂತ್ರಿ ಮಗ ನಿಖಿಲ್ ಕುಮಾರಸ್ವಾಮಿಗೆ ಎದುರಾಳಿಯಾಗಿ ಮಾಜಿ ಸಚಿವ ಹಾಗೂ ರೆಬೆಲ್ ಸ್ಟಾರ್ ಅಂಬರೀಶ್ ಅವರ ಪತ್ನಿ ಸುಮಲತಾ ಅವರು ನಿಂತಿದ್ದಾರೆ. ಸುಮಲತಾ ಅವರ ಬೆಂಬಲಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗು ರಾಕಿಂಗ್ ಸ್ಟಾರ್ ಯಶ್ ಸಹ ಎಡೆಬಿಡದೆ ಪ್ರಚಾರ ನಡೆಸಿದ್ದಾರೆ.