ಮಂಡ್ಯ: ಶ್ರೀಲಂಕಾ ದೇಶದಲ್ಲಿ ನಡೆದಿರುವ ಬಾಂಬ್ ಬ್ಲಾಸ್ಟ್ ನಿಂದ ಎಚ್ಚೆತ್ತುಕೊಂಡಿರುವ ಮಂಡ್ಯ ಪೊಲೀಸರು ಅಲರ್ಟ್ ಘೋಷಿಸಿಕೊಂಡಿದ್ದಾರೆ.
ಆಯಾಕಟ್ಟಿನ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋ ಬಸ್ತ್ ಏರ್ಪಡಿಸಿದ್ದು, ಮಂಡ್ಯ ಜಿಲ್ಲೆಯ ವಿಶ್ವವಿಖ್ಯಾತ ಕೆ.ಆರ್.ಎಸ್ ಡ್ಯಾಂ ಸೇರಿದಂತೆ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ನಿಗಾವಹಿಸಿದ್ದಾರೆ. ಮಂಡ್ಯದಲ್ಲಿನ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದ ಮಂಡ್ಯ ಎಸ್.ಪಿ ಶಿವಪ್ರಕಾಶ್ ದೇವರಾಜು ಅವರು ರೈಲ್ವೆ ನಿಲ್ದಾಣದಲ್ಲಿ ಭದ್ರತೆ ಪರಿಶೀಲನೆ ನಡೆಸಿದರು.
ಮಂಡ್ಯ ಜಿಲ್ಲೆಯಲ್ಲಿ ಸಾಕಷ್ಟು ಪ್ರವಾಸಿ ತಾಣಗಳಿದ್ದು, ಪ್ರತಿ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿರುತ್ತಾರೆ. ಹೀಗಾಗಿ ಕಳೆದ ಮೂರು ದಿನಗಳ ಹಿಂದೆ ಶ್ರೀಲಂಕಾ ದೇಶದಲ್ಲಿ ನಡೆದ ಉಗ್ರರ ಬಾಂಬ್ ದಾಳಿಯಿಂದ ಎಚ್ಚೆತ್ತುಕೊಂಡಿರುವ ಮಂಡ್ಯ ಜಿಲ್ಲಾ ಪೊಲೀಸರ್ ಹೈ ಅಲರ್ಟ್ ಘೋಷಿಸಿದ್ದಾರೆ. ಕೆ.ಆರ್.ಎಸ್ ಡ್ಯಾಂಗೂ ಸಾಕಷ್ಟು ಭದ್ರತೆ ಒದಗಿಸಲಾಗಿದೆ. ಶ್ರೀಲಂಕಾದಲ್ಲಿ ನಡೆದ ಉಗ್ರರ ದಾಳಿಯಿಂದ ಈಗಾಗಲೇ ಇರುವ ಭದ್ರತೆಯನ್ನ ಮತ್ತಷ್ಟು ಚುರುಕುಗೊಳಿಸಲಾಗಿದ್ದು, ಪ್ರತಿಯೊಬ್ಬರ ಮೇಲೆ ನಿಗಾ ವಹಿಸಲಾಗಿದೆ ಎಂದು ಶಿವಪ್ರಕಾಶ್ ದೇವರಾಜು ಹೇಳಿದ್ದಾರೆ.
ಮಂಡ್ಯ ನಗರದಲ್ಲಿನ ರೈಲ್ವೆ ನಿಲ್ದಾಣ ಸೇರಿದಂತೆ ಜಿಲ್ಲೆಯ ಬಹುತೇಕ ಬಸ್ ನಿಲ್ದಾಣಗಳಲ್ಲೂ ಸಹ ಪೊಲೀಸರನ್ನ ನಿಯೋಜನೆಗೊಳಿಸಲಾಗಿದೆ. ಅಪರಿಚಿತ ವ್ಯಕ್ತಿಗಳೇನಾದರೂ ಓಡಾಡಿದರೆ ನಿಗಾವಹಿಸಲು ಸೂಚಿಸಲಾಗಿದೆ. ಇದಲ್ಲದೆ ಶ್ರೀರಂಗಪಟ್ಟಣದಲ್ಲಿರುವ ಟಿಪ್ಪುವಿನ ಜಾಮೀಯಾ ಮಸೀದಿ, ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ಬಳಿ ಇರುವ ಕಾವೇರಿ ನದಿಯ ಬಲಮುರಿ ಸೇರಿದಂತೆ ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳಲ್ಲೂ ಪೊಲೀಸರನ್ನ ನಿಯೋಜಿಸಲಾಗಿದೆ. ಇಲ್ಲಿಗೆ ಬರುವ ಪ್ರತಿಯೊಬ್ಬ ಪ್ರವಾಸಿಗರ ಮೇಲೆ ನಿಗಾ ವಹಿಸಲಾಗಿದೆ. ಇದು ಸ್ಥಳೀಯರ ಮೆಚ್ಚುಗೆಗೂ ಪಾತ್ರವಾಗಿದ್ದು, ಇಂತಹ ಸಂದರ್ಭದಲ್ಲಿ ಪೊಲೀಸರ ಈ ಕ್ರಮ ಸರಿಯಾಗಿಯೇ ಇದೆ ಎಂದು ಸ್ಥಳೀಯ ನೀಲಕಂಠ ಹೇಳಿದ್ದಾರೆ.
ಶ್ರೀಲಂಕಾದಲ್ಲಿ ನಡೆದಿರುವ ಉಗ್ರರ ದಾಳಿಗೆ ಎಲ್ಲೆಡೆ ಖಂಡನೆ ವ್ಯಕ್ತವಾಗಿರುವುದರ ಜೊತೆಗೆ ಎಲ್ಲೆಡೆ ಭದ್ರತೆಗೆ ಹೆಚ್ಚಿನ ಆದ್ಯತೆಯನ್ನೂ ನೀಡಲಾಗುತ್ತಿದೆ. ಹೀಗಾಗಿ ಮಂಡ್ಯದಲ್ಲೂ ಸಾಕಷ್ಟು ಪ್ರವಾಸಿ ತಾಣಗಳಿದ್ದು, ಎಲ್ಲಾ ಕಡೆಗೂ ಪೊಲೀಸರು ನಿಗಾವಹಿಸಿದ್ದಾರೆ.