ಬೆಂಗಳೂರು: ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿರುವ ಬಿಎಸ್ ಯಡಿಯೂರಪ್ಪ ಅವರು ಇಂದು ವಿಶ್ವಾಸ ಮತ ಯಾಚನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರದಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಈ ಮಧ್ಯೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರ ಮನೆಗೂ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಮನೆಯ ಸುತ್ತಮುತ್ತ ಪೊಲೀಸರು ಕಣ್ಗಾವಲು ಇರಿಸಿದ್ದಾರೆ. ಇದನ್ನೂ ಓದಿ: ಮಂಗ್ಳೂರು, ಬೆಂಗ್ಳೂರಲ್ಲಿ 144 ಸೆಕ್ಷನ್ ಜಾರಿ
ಒಂದು ಕೆಎಸ್ಆರ್ಪಿ ತುಕಡಿ, ಸ್ಥಳೀಯ ಪೊಲೀಸರ ನೇತೃತ್ವದಲ್ಲಿ ದೇವೇಗೌಡ ಅವರ ಮನೆಗೆ ಭದ್ರತೆ ಒದಗಿಸಲಾಗಿದೆ. ಇನ್ನು ಕಾಂಗ್ರೆಸ್, ಜೆಡಿಎಸ್ ಶಾಸಕರ ಕ್ಷಣ ಕ್ಷಣದ ಮಾಹಿತಿ ಪಡೆದುಕೊಳ್ಳುತ್ತಿರುವ ಮಾಜಿ ಪ್ರಧಾನಿ ಅವರು ಶಾಸಕರಿಗೆ ಒಗ್ಗಾಟ್ಟಿನಲ್ಲಿರಲು ಮನದಟ್ಟು ಮಾಡುವಂತೆ ಫೋನ್ ಮೂಲಕ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡುತ್ತಿದ್ದಾರೆ ಎಂಬುದಾಗಿ ಮೂಲಗಳಿಂದ ತಿಳಿದುಬಂದಿದೆ.
ಚುನಾವಣಾ ಫಲಿತಾಂಶಕ್ಕೂ ಮೊದಲೇ ನಾನೇ ಸಿಎಂ ಎಂದು ಹೇಳಿಕೊಂಡು ಬಂದಿದ್ದ ಬಿಎಸ್ ಯಡಿಯೂರಪ್ಪ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮಧ್ಯೆ ಕಾಂಗ್ರೆಸ್, ಜೆಡಿಎಸ್ ನಾಯಕರು ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಬಿಎಸ್ವೈ ಪ್ರಮಾಣ ವಚನ ಕುರಿತು ಸುಪ್ರೀಂ ವಿಚಾರಣೆ ನಡೆಸಿದ್ದು, ಇಂದು ಸಂಜೆ ವಿಶ್ವಾಸಮತ ಯಾಚನೆ ಮಾಡುವಂತೆ ಆದೇಶಿಸಿತ್ತು.