ಭೋಪಾಲ್: ಮಹಾತ್ಮ ಗಾಂಧಿಯನ್ನು ಅವಮಾನಿಸಿ, ನಾಥೂರಾಮ್ ಗೋಡ್ಸೆಯನ್ನು ಹೊಗಳಿದ ಹಿನ್ನೆಲೆ ಮಹಾರಾಷ್ಟ್ರದ ಹಿಂದೂ ಧಾರ್ಮಿಕ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ.
ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್ ಬಂಧಿತ ಆರೋಪಿ. ಈತ ಛತ್ತೀಸ್ಗಢದ ರಾಯ್ಪುರದಲ್ಲಿ ನಡೆದ ಧರ್ಮ ಸಂಸದ್ ಸಭೆಯಲ್ಲಿ ಪಾಲ್ಗೊಂಡು ವಿವಾದಾತ್ಮಕ ಭಾಷಣ ಮಾಡಿದ್ದ.
ಭಾಷಣದಲ್ಲಿ ಏನು ಹೇಳಿದ್ದಾರೆ?
ಮೋಹನ್ದಾಸ್ ಕರಮಚಂದ್ ಗಾಂಧಿಯವರು ಭಾರತ ದೇಶವನ್ನು ನಾಶಪಡಿಸಿದ್ದಾರೆ. ಅವರನ್ನು ಕೊಂದ ನಾಥೂರಾಮ್ ಗೋಡ್ಸೆಗೆ ನಮಸ್ಕಾರಗಳು. ಹಿಂದೂ ಧರ್ಮವನ್ನು ರಕ್ಷಿಸಲು ಜನರು ಒಳ್ಳೆಯ ಹಿಂದೂ ನಾಯಕನನ್ನು ಆಯ್ಕೆ ಮಾಡಬೇಕೆಂದು ಭಾಷಣದಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ಕ್ಷೀರಭಾಗ್ಯ ಯೋಜನೆಯಡಿ ಮಕ್ಕಳಿಗೆ ನೀಡುವ ಹಾಲಿನ ಪುಡಿಗೇ ಕನ್ನ
ಭಾಷಣದ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕ ಪ್ರಮೋದ್ ದುಬೆ ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಕಾಳಿಚರಣ್ ಭಾಷಣದ ವೀಡಿಯೋವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪೊಲೀಸರ ಟ್ರ್ಯಾಕಿಂಗ್ನಿಂದ ತಪ್ಪಿಸಿಕೊಳ್ಳಲು, ಕಾಳಿಚರಣ್ ಆಪ್ತ ಸಹಾಯಕರು ತಮ್ಮ ಫೋನ್ಗಳನ್ನು ಸ್ವಿಚ್ ಆಫ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಂದು ಬೆಳಗ್ಗೆ 10 ಗಂಟೆಗೆ ಪೊಲೀಸರ ತಂಡ ಅವರನ್ನು ಅರೆಸ್ಟ್ ಮಾಡಿದೆ. ನಂತರ ಅವರನ್ನು ಛತ್ತೀಸ್ಗಢದ ರಾಜಧಾನಿ ರಾಯ್ಪುರಕ್ಕೆ ಕರೆದೊಯ್ದಿದ್ದಾರೆ. ಸಂಜೆ ವೇಳೆಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಹೊಸ ವರ್ಷ ಸಂಭ್ರಮಾಚರಣೆ ತಡೆಯಲು ಚೆನ್ನೈನಲ್ಲಿ ವಾಹನ ಸಂಚಾರ ಬ್ಯಾನ್