ಬೆಳಗಾವಿ/ಹಾವೇರಿ: ಅಥಣಿ ಮತ್ತು ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ. ನಾಮಪತ್ರ ಸಲ್ಲಿಸುವ ಕೊನೆಯ ದಿನದಂದು ಇಬ್ಬರನ್ನು ಕಣಕ್ಕಿಳಿಸಿ ಬಿಜೆಪಿಗೆ ಮಾಜಿ ಸಿಎಂ ಕುಮಾರಸ್ವಾಮಿ ಶಾಕ್ ನೀಡಿದ್ದರು. ಇಂದು ಬಿಜೆಪಿ ಕೊನೆಯ ಹಂತದ ತಂತ್ರ ಫಲಿಸಿದ್ದು, ಅಭ್ಯರ್ಥಿಗಳು ಚುನಾವಣೆಯಿಂದ ಹಿಂದೆ ಸರಿದಿದ್ದಾರೆ.
ಹಿರೇಕೆರೂರು ಜೆಡಿಎಸ್ ಅಭ್ಯರ್ಥಿ ಶಿವಾಚಾರ್ಯ ಸ್ವಾಮೀಜಿ ಮತ್ತು ಅಥಣಿಯಲ್ಲಿ ಗುರು ದಾಶ್ಯಾಳ್ ನಾಮಪತ್ರ ಹಿಂಪಡೆದುಕೊಂಡಿದ್ದಾರೆ. ಇದೀಗ ಎರಡು ಕ್ಷೇತ್ರಗಳಲ್ಲಿ ಜೆಡಿಎಸ್ ಗೆ ಅಭ್ಯರ್ಥಿಗಳೇ ಇಲ್ಲದಂತಾಗಿದೆ. ಇನ್ನು ಹೊಸಕೋಟೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಪಕ್ಷೇತರ ಶರತ್ ಬಚ್ಚೇಗೌಡರಿಗೆ ಬೆಂಬಲ ಸೂಚಿಸಿದೆ. 15ರಲ್ಲಿ 12 ಕ್ಷೇತ್ರಗಳಲ್ಲಿ ಮಾತ್ರ ಜೆಡಿಎಸ್ ಅಭ್ಯರ್ಥಿಗಳು ಚುನವಣಾ ಕಣದಲ್ಲಿದ್ದಾರೆ.
ಹಿರೇಕೆರೂರಿನಲ್ಲಿ ಸಂಸದ ಬಿ.ವೈ.ರಾಘವೇಂದ್ರ ಸ್ವಾಮೀಜಿಗಳ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಥಣಿಯಲ್ಲಿ ಬಿಜೆಪಿ ವಿರುದ್ಧ ಬಂಡಾಯ ಸಾರಿ ಜೆಡಿಎಸ್ ಸೇರ್ಪಡೆಗೊಂಡು ಗುರು ದಾಶ್ಯಾಳ ನಾಮಪತ್ರ ಸಲ್ಲಿದಿದ್ದರು. ಡಿಸಿಎಂ ಲಕ್ಷ್ಮಣ ಸವದಿ ಅವರ ಆಪ್ತ ವಲಯದಲ್ಲಿ ಗುರು ದಾಶ್ಯಾಳ ಗುರುತಿಸಿಕೊಂಡಿದ್ದಾರೆ.