ತುಮಕೂರು: ಜವರಾಯನ ಜೊತೆಗೆ ಹೋರಾಡುತ್ತಿದ್ದ ನಡೆದಾಡುವ ದೇವರು, ಸಿದ್ದಗಂಗಾ ಮಠದ ಡಾ.ಶಿವಕುಮಾರ ಶ್ರೀಗಳು ಬೆಳಗ್ಗೆ 11.44ಕ್ಕೆ ಲಿಂಗೈಕ್ಯರಾಗಿದ್ದಾರೆ.
ಸಿದ್ದಗಂಗಾ ಮಠದ ಆವರಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿಎಂ, ಪರಮ ಪೂಜ್ಯ ಶ್ರೀಗಳು ಶಿವಕ್ಯೆಯಾಗಿರುವುದನ್ನು ವೈದ್ಯರು ಈಗ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದರು.
ರಾಜ್ಯದ ಎಲ್ಲಾ ಶಾಲೆಗಳಲ್ಲಿ ಇಂದು ಶೋಕಾಚರಣೆ ನಡೆಸಬೇಕು ಹಾಗೂ ನಾಳೆ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಸಿಎಂ ಕುಮಾರಸ್ವಾಮಿ ತಿಳಿಸಿದರು.
ರಾಜ್ಯದ ವಿವಿಧ ಭಾಗಗಳ ಮಠಾಧೀಶರು ಹಾಗೂ ಸಿದ್ದಗಂಗಾ ಮಠದ ಕಿರಿಯ ಶ್ರೀಗಳ ಜೊತೆಗೆ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ, ಶಾಸಕ ಸೋಮಣ್ಣ, ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಮಾತುಕತೆ ನಡೆಸಿದ್ದಾರೆ. ಅದರಂತೆ ವಿಧಿವಿಧಾನ ಅನುಸರಿಸಲಾಗುತ್ತದೆ. ಈ ನಿಟ್ಟಿನಲ್ಲಿ ಭಕ್ತರಿಗೆ ಇಂದು ಹಾಗೂ ನಾಳೆ ಮಧ್ಯಾಹ್ನ 3 ಗಂಟೆಯವರೆಗೆ ಶ್ರೀಗಳ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಸಿದ್ದಗಂಗಾ ಶ್ರೀಗಳ 111 ಸಾಧನೆಗಳು ಹಾಗೂ ವೈಶಿಷ್ಟಗಳು
ಪವಾಡ ಪುರುಷರಾಗಿರುವ ಶ್ರೀಗಳು ದೈವಿ ಶಕ್ತಿಯಾಗಿ ನಮಗೆ ಮಾರ್ಗದರ್ಶನ ನೀಡಿ, ಧಾರ್ಮಿಕ ಕ್ಷೇತಕ್ಕೆ ಅಭೂತಪೂರ್ವ ಕೊಡುಗೆ ನೀಡಿದ್ದಾರೆ. ಶ್ರೀಗಳನ್ನು ಕಳೆದುಕೊಂಡ ನಮಗೆ ನೋವು ತಂದಿದೆ. ಬಡಮಕ್ಕಳಿಗೆ ಶಿಕ್ಷಣ, ಆಶ್ರಯ ನೀಡಿ, ಸ್ವಾಮೀಜಿಗಳು ಸಮಾಜಕ್ಕೆ ಕೊಡುಗೆ ನೀಡಿದ್ದಾರೆ ಎಂದು ಎಚ್ಡಿಕೆ ಸ್ಮರಿಸಿದರು.
ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಶ್ರೀಗಳ ಅಗಲಿಕೆ ನೋವು ತಂದಿದೆ. ಅವರ ಆತ್ಮದ ಬೆಳಕು ಅನೇಕರ ಜೀವನ ಕಟ್ಟಿಕೊಳ್ಳಲು ಮಾರ್ಗದರ್ಶನ ನೀಡುತ್ತದೆ. ಈ ಕಾಲದ ಬಸವಣ್ಣನನ್ನು ನಾವು ಕಳೆದುಕೊಂಡಿದ್ದೇವೆ. ಶ್ರೀಗಳು ಸಾಮಾಜಿಕ ಕಳಕಳಿ ಇಟ್ಟುಕೊಂಡಿದ್ದರು, ಲಕ್ಷಾಂತರ ವಿದ್ಯಾರ್ಥಿಗಳಿಗೆ ಜೀವನ ಕಟ್ಟಿಕೊಳ್ಳುವ ಶಿಕ್ಷಣವನ್ನು ಸಿದ್ದಗಂಗಾ ಮಠದಿಂದ ಮೂಲಕ ನೀಡಿದ್ದಾರೆ ಎಂದು ಹೇಳಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv