ಬೆಂಗಳೂರು: ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಗೃಹಿಣಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರಿನ ಮಲ್ಲೇಶ್ವರಂ ನಿವಾಸಿ ರಶ್ಮಿ(30) ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ಗೃಹಿಣಿ. ಮೂರು ವರ್ಷಗಳ ಹಿಂದೆ ಸತೀಶ್ ಎಂಬಾತನೊಂದಿಗೆ ಮದುವೆಯಾಗಿದ್ದ ರಶ್ಮಿ, ರಾಮಮೂರ್ತಿನಗರದ ಕೆಂಪೆಗೌಡ ರಸ್ತೆಯ ಸಫೈರ್ ಅಪಾರ್ಟ್ಮೆಂಟ್ನ ಮನೆಯಲ್ಲಿ ವಾಸವಾಗಿದ್ದರು.
ರಶ್ಮಿ ಶನಿವಾರ ರಾತ್ರಿ ಮನೆಯಲ್ಲಿನ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ರಶ್ಮಿಯ ಪೋಷಕರು ತಮ್ಮ ಮಗಳ ಸಾವಿಗೆ ವರದಕ್ಷಿಣೆ ಕಿರುಕುಳ ಕಾರಣ ಎಂದು ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ರಾಮಮೂರ್ತಿನಗರ ಪೊಲೀಸರು ಗಂಡ ಸತೀಶ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.