ಹುಬ್ಬಳ್ಳಿ: ನಾವು ಅಧಿಕಾರಕ್ಕೆ ಬರುತ್ತೇವೆ ಎಂಬುದಾಗಿ ಎಲ್ಲಿಯೂ ಹೇಳಿಕೊಳ್ಳಬಾರದು ಎಂದು ಬಿಜೆಪಿ ನಾಯಕರಿಗೆ ಈಗಾಗಲೇ ತಿಳಿಸಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು 22 ಸ್ಥಾನ ಗೆದ್ದ ಮೇಲೆ ಜೆಡಿಎಸ್ ಹಾಗೂ ಕಾಂಗ್ರೆಸ್ ಸ್ಥಿತಿ ಏನಾಗಲಿದೆ ಎಂದು ನಿವೇ ಯೋಚನೆ ಮಾಡಿ. ಅಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕರಾಗಿ ನಾನು ಮುಂದುವರೆಯಲು ಸಾಧ್ಯವಿಲ್ಲ. ಹೀಗಾಗಿ ಆ ಬಗ್ಗೆ ನಮ್ಮ ರಾಷ್ಟ್ರೀಯ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.
ಕುಂದಗೋಳ ಚಿಂಚೋಳಿ ಜನ ಸರಿಯಾದ ಉತ್ತರ ಕೊಡುತ್ತಾರೆ. ಈ ವಿಧಾನಸಭಾ ಕ್ಷೇತ್ರದಲ್ಲಿ ಭಾರೀ ಅಂತರದಿಂದ ಗೆಲ್ಲಲಿದ್ದೇವೆ. ಕಾಂಗ್ರೆಸ್ ಹಣ ಬಲದ ಮೇಲೆ ಚುನಾವಣೆ ಗೆಲ್ಲಲು ಹೊರಟಿದೆ. ಬಿಜೆಪಿಯವರನ್ನ ಬಂಧಿಸಿ ಕಿರುಕುಳ ನೀಡುವ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ಮಾಡಲಿದೆ. ಗೃಹ ಸಚಿವರಾಗಿ ಅವರು ಅಧಿಕಾರ ದುರುಪಯೋಗ ಮಾಡಿಕೊಳ್ಳಬಾರದು ಎಂದು ತಿಳಿಸಿದರು.
ಸಿಎಂ ರೈತರ ಸಾಲಮನ್ನ ಮಾಡುವ ಮಾತು ಹೇಳಿದ್ದರು. ಆದರೆ ಇದುವರೆಗೂ ಆಗಿಲ್ಲ. ಋಣಮುಕ್ತ ಪತ್ರ ಬರೆಯುವ ಮಾತು ಹೇಳಿದ್ದರು, ಈಗ ಸಾಂತ್ವನ ಪತ್ರ ಬರೆಯುತ್ತಾರಂತೆ. ಇದು ನಗೆಪಾಟಿಲಿಗೆ ಕಾರಣವಾಗಿದೆ ಎಂದರು.
ಈ ದೇಶದ ಪ್ರಧಾನಿ ಬಗ್ಗೆ ಇಡೀ ಜಗತ್ತೇ ಗೌರವದಿಂದ ಕಾಣುತ್ತಿದೆ. ನಾವು ದೇಶದಲ್ಲಿ 280 ಕ್ಷೇತ್ರಗಳನ್ನು ಗೆಲ್ಲುತ್ತೇವೆ. ರಾಜ್ಯದಲ್ಲಿ 22 ಸ್ಥಾನ ಗೆಲ್ಲುತ್ತೇವೆ. ಮೋದಿ ಅವರ ಬಗ್ಗೆ ಕೇವಲ ಮಾಜಿ ಸಿಎಂ ಸಿದ್ದರಾಮಯ್ಯ ಅಲ್ಲದೆ ಹಲವು ಜನರು ಹಗುರವಾಗಿ ಮಾತನಾಡುತ್ತಾರೆ. ಇದಕ್ಕೆ ಜನರೇ ತಕ್ಕ ಉತ್ತರ ಕೊಡುತ್ತಾರೆ ಎಂದರು.
ಸಾಲಮನ್ನಾ ನಾವು ಮಾಡಿದ್ದೇವೆ. ನಾನು ಈಗಲೇ ಏನೂ ಮಾತನಾಡಲ್ಲ. ಚುನಾವಣೆ ಫಲಿತಾಂಶ ನಂತರ ಮಾತನಾಡುವೆ. ಜನರ ವಿಶ್ವಾಸದಿಂದ ನಾವು ಚುನಾವಣೆಯಲ್ಲೂ ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಬಿಎಸ್ವೈ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸಚಿವ ಅರುಣ್ ಜೇಟ್ಲಿ ಜೇಟ್ಲಿ ಮಾಡಿದ ಆರೋಪಕ್ಕೆ ಉತ್ತರ ನೀಡಲಿ ಎಂದು ಇದೇ ವೇಳೆ ಒತ್ತಾಯಿಸಿದರು.