ಹುಬ್ಬಳ್ಳಿ: ರಾಜ್ಯದ ಎರಡನೇಯ ಬಹುದೊಡ್ಡ ಮಹಾನಗರ ಪಾಲಿಕೆಯಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಪ್ರಮುಖ ಕಡತಗಳು ಬೆಂಕಿಗೆ ಆಹುತಿಯಾಗಿವೆ.
ಸ್ಮಾರ್ಟ್ ಸಿಟಿ ಯೋಜನೆ, ಸೇರಿದಂತೆ ಅವಳಿ ನಗರದಲ್ಲಿ ರಸ್ತೆಯಲ್ಲಿನ ಗುಂಡಿ ಮುಚ್ಚುವುದು ಸೇರಿದ ಹಲವು ಕಾಮಗಾರಿಗಳ ಕಡತಗಳು ಬೆಂಕಿಗೆ ಆಹುತಿಯಾಗಿವೆ. ಈ ಪ್ರಮುಖ ಕಡತಗಳು ಬೆಂಕಿಗೆ ಆಹುತಿಯಾಗಿದ್ದರ ಹಿಂದೆ ಕಾಣದ ಕೈಗಳ ಕೈವಾಡ ಇದೆ ಎನ್ನುವ ಶಂಕೆ ವ್ಯಕ್ತವಾಗಿದೆ.
ಆರ್ಟಿಐ ಕಾಯ್ದೆ ಅಡಿಯಲ್ಲಿ ಮಾಹಿತಿ ಕೇಳಬಹುದು ಅಥವಾ ಜನಪ್ರತಿನಿಧಿಗಳು ಮಾಹಿತಿ ಕೇಳಬಹುದು ಎನ್ನುವ ಉದ್ದೇಶದಿಂದ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಸೇರಿ ಕಡತಗಳು ಬೆಂಕಿ ಹಚ್ಚಿದ್ದಾರಾ ಎನ್ನುವ ಪ್ರಶ್ನೆ ಎದ್ದಿದೆ.
ಅವಳಿ ನಗರದಲ್ಲಿ ಗುಂಡಿ ಮುಚ್ಚುವ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎನ್ನುವ ಆರೋಪ ಕೇಳಿಬಂದಿತ್ತು. ಈ ಮಧ್ಯೆ ಹುಬ್ಬಳ್ಳಿ- ಧಾರವಾಡ ಅವಳಿ ನಗರದ ಬಹುತೇಕ ಕಾಮಗಾರಿಗಳ ಟೆಂಡರ್ ಮತ್ತು ಗುತ್ತಿಗೆದಾರರಿಗೆ ಸೇರಿದ ದಾಖಲೆಗಳು ಬೆಂಕಿಗೆ ಆಹುತಿಯಾಗಿದ್ದು, ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ಕಾರ್ಯನಿರ್ವಾಹಕ ದಕ್ಷಿಣ ಹಾಗೂ ಅಧೀಕ್ಷಕ ಅಭಿಯಂತರರ ಕಚೇರಿಯ ಕಡತಗಳು ಬೆಂಕಿಗೆ ಆಹುತಿಯಾಗಿವೆ. ಕಳೆದ ವಾರ ನಡೆದ ಅವಳಿ ನಗರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ ಜನಪ್ರತಿನಿಧಿಗಳು ಕೆಲಸವನ್ನು ಸರಿಯಾಗಿ ಮಾಡದಕ್ಕೆ ಅಧಿಕಾರಿಗಳನ್ನು ಸಾಕಷ್ಟು ತರಾಟೆಗೆ ತೆಗೆದುಕೊಂಡಿದ್ದರು.
ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಕಡತಗಳು ಬೆಂಕಿಗೆ ಆಹುತಿಯಾಗಿದ್ದನ್ನು ನೋಡಿದರೆ ಸಾಕಷ್ಟು ಅನುಮಾನಗಳು ಎದ್ದಿದೆ. ಪಾಲಿಕೆಯ ಜಂಟಿ ಆಯುಕ್ತ ಅಜೀಜ್ ದೇಸಾಯಿ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಉಪ ನಗರ ಪೊಲೀಸರು ಹಾಗೂ ವಿದ್ಯುತ್ ಇಲಾಖೆಗೆ ಯಾವ ಕಾರಣಕ್ಕೆ ಅಗ್ನಿ ಅವಘಡ ಸಂಭವಿಸಿದೆ ಎನ್ನುವ ಬಗ್ಗೆ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
https://www.youtube.com/watch?v=-doEdFRq2iI