ಹುಬ್ಬಳ್ಳಿ: ಮಹದಾಯಿ, ಕಳಸಾ ಬಂಡೂರಿ ಯೋಜನೆ ವಿವಾದ ಸುಪ್ರೀಂ ಕೋರ್ಟಿನಲ್ಲಿದ್ದು, ಶೀಘ್ರವೇ ಇತ್ಯರ್ಥಗೊಳ್ಳುವ ವಿಶ್ವಾಸ ಇದೆ. ಈ ಹಿನ್ನಲೆಯಲ್ಲಿ ಮುಂಬರುವ ಬಜೆಟಿನಲ್ಲಿ ಈ ಯೋಜನೆಗೆ ಹಣ ಮೀಸಲಿಡುವುದಾಗಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮಹದಾಯಿ ವಿಚಾರವಾಗಿ ತೀರ್ಪಿನ ಮೇಲ್ಮನವಿ ಸಲ್ಲಿಕೆ ಕುರಿತು ರಾಜ್ಯ ಸರ್ಕಾರ ಅಡ್ವೊಕೇಟ್ ಜನರಲ್ ಜೊತೆ ಚರ್ಚಿಸುತ್ತಿದೆ. ಆದಷ್ಟು ಬೇಗ ಸಮಸ್ಯೆ ಬಗೆಹರಿಸಲಾಗುವುದು ಎಂದು ಸಿಎಂ ಭರವಸೆ ನೀಡಿದರು. ಇದನ್ನೂ ಓದಿ: ಸಹಕಾರಿ ಬ್ಯಾಂಕುಗಳಲ್ಲಿನ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ: ಸಿಎಂ
ಸಂಪುಟ ಸೇರಿರುವ ನೂತನ ಸಚಿವರಿಗೆ ಯಾವ ಖಾತೆ ಕೊಡಬೇಕೆಂಬುದು ತೀರ್ಮಾನ ಮಾಡಲಾಗಿದೆ. ಸೋಮವಾರ ಬೆಳಗ್ಗೆ ಖಾತೆ ಹಂಚಿಕೆ ಮಾಡಲಾಗುವುದು. ಬಜೆಟಿಗಾಗಿ ಎಲ್ಲ ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದೆ. ರೈತರಿಗೆ ಅನುಕೂಲವಾಗುವ ಕೆಲವು, ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು. ಪಿಎಲ್ಡಿ ಬ್ಯಾಂಕ್, ಸಹಕಾರಿ ಸಂಘಗಳು, ಕೆಸಿಸಿ ಬ್ಯಾಂಕುಗಳಲ್ಲಿ ಸಾಲ ಪಡೆದು ಮರುಪಾವತಿಸುವ ರೈತರಿಗೆ ಬಡ್ಡಿ, ಸುಸ್ತಿ ಬಡ್ಡಿಯನ್ನು ಮನ್ನ ಮಾಡಲಾಗುತ್ತಿದೆ. 400 ಕೋಟಿ ರೂಪಾಯಿಗಳಿಗೂ ಅಧಿಕ ಆರ್ಥಿಕ ಹೊರೆಯಾಗುತ್ತದೆ. ಆದರೂ ಸರ್ಕಾರ ರೈತರ ಸಾಲದ ಬಡ್ಡಿ ಮನ್ನಾ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಲಿದೆ. ವಿಜಯನಗರ ಪ್ರತ್ಯೇಕ ಜಿಲ್ಲೆ ಕೂಗಿನ ಬಗ್ಗೆ ಮಾತನಾಡಿ, ಈ ಕುರಿತು ನಾವು ಯಾವುದೇ ತೀರ್ಮಾನ ಮಾಡಿಲ್ಲ ಎಂದರು.