– ಸಚಿವ ಸಂಪುಟ ವಿಸ್ತರಣೆ ವಿಚಾರ ಸಿಎಂಗೆ ಬಿಟ್ಟದ್ದು
ಹುಬ್ಬಳ್ಳಿ: ದೇವೇಗೌಡ ಅಂಡ್ ಕಂಪನಿಯ ಹೇಳಿಕೆಯನ್ನು ಸೀರಿಯಸ್ ಆಗಿ ತೆಗೆದುಕೊಳ್ಳಬೇಡಿ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರ ರಾಜಕೀಯ ನಿವೃತ್ತಿ ಹೇಳಿಕೆ ವಿಚಾರವಾಗಿ ಮಾತನಾಡಿದ ಶೆಟ್ಟರ್, ದೇವೇಗೌಡ ಅಂಡ್ ಕಂಪನಿಯ ಹೇಳಿಕೆಯನ್ನು ಯಾವುದೇ ರೀತಿ ಸೀರಿಯಸ್ ಆಗಿ ತೆಗೆದುಕೊಳ್ಳಲಾಗುವುದಿಲ್ಲ ಎಂದು ಹೇಳಿದರು.
ಸಚಿವ ಸಂಪುಟ ವಿಸ್ತರಣೆ ವಿಚಾರ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಬಿಟ್ಟದ್ದು. ನಾಳೆ ಅಥವಾ ನಾಡಿದ್ದು ಯಡಿಯೂರಪ್ಪ ಅವರು ದೆಹಲಿಗೆ ತೆರಳಲಿದ್ದಾರೆ. ಹೈಕಮಾಂಡ್ನ ನಿರ್ದೇಶನದಂತೆ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ ಎಂದು ತಳಿಸಿದರು.
ಡಿಸಿಎಂ ಸ್ಥಾನ ನೇಮಕ ಮಾಡುವ ವಿಚಾರ ಹೈಕಮಾಂಡ್ ನಿರ್ಧರಿಸಲಿದೆ. ಉತ್ತರ ಕರ್ನಾಟಕ ಭಾಗದವರಿಗೆ ಸಚಿವ ಸ್ಥಾನ ನೀಡುವ ವಿಚಾರ ಸಿಎಂ ವಿವೇಚನೆಗೆ ಬಿಟ್ಟಿದ್ದು. ಉತ್ತರ ದಕ್ಷಿಣ ಎನ್ನುವ ಭೇದ ಭಾವ ಇಲ್ಲ ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಶ್ರಮಿಸಲಿದೆ. ಉತ್ತರ ಕರ್ನಾಟಕ ಭಾಗದಲ್ಲಿನ ನೆರೆ ಹಾವಳಿ ಕುರಿತು ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳ ಜನರಿಗೆ ಬಿಜೆಪಿ ಸರ್ಕಾರ ಸ್ಪಂದಿಸಲಿದೆ ಎಂದು ತಿಳಿಸಿದರು.
ನಾನು ಯಾವುದೇ ಸ್ಥಾನದ ನಿರೀಕ್ಷೆಯಲ್ಲಿಲ್ಲ ಪಕ್ಷ ನನಗೆ ಯಾವುದೇ ಜವಾಬ್ದಾರಿ ಕೊಟ್ಟರೂ ಸಮರ್ಥವಾಗಿ ನಿಭಾಯಿಸುತ್ತೇನೆ. ಅತೃಪ್ತ ಶಾಸಕರು ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳಲು ಸಮರ್ಥರಿದ್ದಾರೆ. ಅವರು ಹೊಸ ಪಕ್ಷವನ್ನು ಬೇಕಾದರೂ ಹುಟ್ಟು ಹಾಕಬಹುದು. ಅವರೊಂದಿಗೆ ನಮ್ಮ ನಾಯಕರು ಮಾತನಾಡಿದ್ದಾರೆ ಆದ್ರೆ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಎನ್ನಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.