ಹುಬ್ಬಳ್ಳಿ: ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಕಾಶ್ಮೀರ ಮೂಲದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನ ಕಾಲೇಜು ಆಡಳಿತ ಮಂಡಳಿ ಅಮಾನತು ಮಾಡಿ ಆದೇಶ ಹೊರಡಿಸಿದೆ.
ಪುಲ್ವಾಮಾ ದಾಳಿಯಾಗಿ ಶುಕ್ರವಾರಕ್ಕೆ ಒಂದು ವರ್ಷವಾದ ಬೆನ್ನಲ್ಲೇ ಕಾಶ್ಮೀರ ಮೂಲದ ಅಮೀರ್, ತಾಲೀಬ್ ಮತ್ತು ಬಸೀತ್ ಪಾಕಿಸ್ತಾನ ಸೇನೆಯ ಹಾಡಿಗೆ ಧ್ವನಿಗೂಡಿಸಿ ಪಾಕಿಸ್ತಾನ ಜಿಂದಾಬಾದ್ ಎನ್ನುವ ವಿಡಿಯೋ ಮಾಡಿ ಮೊಬೈಲ್ ಸ್ಟೇಟಸ್ ಹಾಕಿಕೊಂಡಿದ್ದರು. ಇಂದು ವಿಡಿಯೋ ವೈರಲ್ ಆಗುತ್ತಿದ್ದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕಾಲೇಜಿಗೆ ಮುತ್ತಿಗೆ ಹಾಕಿ ವಿದ್ಯಾರ್ಥಿಗಳನ್ನು ಬಂಧಿಸಿ ದೇಶದ್ರೋಹದ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನೆ ಮಾಡಿದಲ್ಲದೇ ವಿದ್ಯಾರ್ಥಿಗಳನ್ನ ಥಳಿಸಿದ್ದರು.
ಬಂಧಿತ ಅಮೀರ್ ಸಿವಿಲ್ ಇಂಜಿನಿಯರಿಂಗ್ನ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದು, ದಕ್ಷಿಣ ಕಾಶ್ಮೀರದ ಅನಂತನಾಗ್ ಭಾಗದವನು ಎಂದು ತಿಳಿದು ಬಂದಿದೆ. ಅಲ್ಲದೇ ತಾಲೀಬ್ ಹಾಗೂ ಬಸೀತ್ ಇಬ್ಬರು ಸಿವಿಲ್ ಇಂಜಿನಿಯರಿಂಗ್ ಮೊದಲ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು. ತಾಲೀಬ್ ದಕ್ಷಿಣ ಕಾಶ್ಮೀರದ ಅನಂತನಾಗ್ ಭಾಗದ ವಿದ್ಯಾರ್ಥಿಯಾದರೆ, ಬಸೀತ್ ಉತ್ತರ ಕಾಶ್ಮೀರದ ಸಂಪೂರೆಯವನು ಎಂದು ತಿಳಿದು ಬಂದಿದೆ.
ಈ ಮೂವರು ವಿದ್ಯಾರ್ಥಿಗಳನ್ನು ಹುಬ್ಬಳ್ಳಿಯ ಗೋಕುಲ್ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿ ತನಿಖೆ ಕೈಗೊಳ್ಳುತ್ತಿದ್ದಂತೆ ಕಾಲೇಜು ಆಡಳಿತ ಮಂಡಳಿ ಮೂವರು ಕಾಶ್ಮೀರ ಮೂಲದ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತು ಮಾಡಿ ಆದೇಶ ಹೊರಡಿಸಿದೆ.