– ಹೆಚ್ಡಿಕೆ, ನಿಖಿಲ್ ನೇತೃತ್ವದಲ್ಲಿ ಪಕ್ಷ ಸೇರ್ಪಡೆ
ಚಿಕ್ಕಮಗಳೂರು: ಮೂಡಿಗೆರೆ ಹಾಗೂ ಚಿಕ್ಕಮಗಳೂರು ತಾಲೂಕಿನ ಹತ್ತಾರು ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ (JDS) ಸೇರ್ಪಡೆಯಾಗುತ್ತಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯಲ್ಲಿ ನಡೆದಿದೆ.
ಚಿಕ್ಕಮಗಳೂರು ಹಾಗೂ ಮೂಡಿಗೆರೆ ತಾಲೂಕಿನರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.
2023ರ ವಿಧಾನಸಭಾ ಚುನಾವಣೆಯ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿಯ ಪ್ರಮುಖ ಮುಖಂಡ ವಿಜಯ್ ಕುಮಾರ್ ಅವರ ನೇತೃತ್ವದಲ್ಲಿ ಈ ಪಕ್ಷಾಂತರ ಪ್ರಕ್ರಿಯೆ ನಡೆದಿದೆ. ಇವರ ಜೊತೆ ಹಿಂದುತ್ವವಾದಿ ಹಾಗೂ ಭಜರಂಗದಳದ ಮಾಜಿ ಜಿಲ್ಲಾ ಸಂಚಾಲಕರಾದ ತುಡುಕೂರು ಮಂಜು, ಯೂತ್ ಕಾಂಗ್ರೆಸ್ (Youth Congress) ಜಿಲ್ಲಾ ಉಪಾಧ್ಯಕ್ಷ ಮಂಜು ಸೇರಿದಂತೆ ಬಿಜೆಪಿ ಯುವ ಮೋರ್ಚಾ ಮಂಡಲದ ಪ್ರಮುಖ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್-ಬಿಜೆಪಿಯ 200ಕ್ಕೂ ಹೆಚ್ಚು ಸಕ್ರಿಯ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ.

ಬುಧವಾರ (ಇಂದು) ಬೆಂಗಳೂರಿನ ಜೆಡಿಎಸ್ ಕೇಂದ್ರ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ (HD Kumaraswamy), ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರ ಸಮ್ಮುಖದಲ್ಲಿ ಕೈ-ಕಮಲದ ಮುಖಂಡರು ಹಾಗೂ ಕಾರ್ಯಕರ್ತರು ಅಧಿಕೃತವಾಗಿ ಪಕ್ಷದ ಶಾಲು ಧರಿಸಿ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ.
ಈ ಬೃಹತ್ ಸೇರ್ಪಡೆ ಕಾರ್ಯಕ್ರಮಕ್ಕಾಗಿ ಚಿಕ್ಕಮಗಳೂರಿನಿಂದ ನೂರಾರು ಕಾರ್ಯಕರ್ತರು ರಾಜಧಾನಿ ಬೆಂಗಳೂರಿಗೆ ತೆರಳಲಿದ್ದು. ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರ ಈ ದಿಢೀರ್ ವಲಸೆ ಮಲೆನಾಡು ಭಾಗದ ಕಾಂಗ್ರೆಸ್ ಮತ್ತು ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಿದ್ದು, ಜೆಡಿಎಸ್ ಪಕ್ಷದ ಸಂಘಟನಾ ಬಲವನ್ನು ಮತ್ತಷ್ಟು ಹೆಚ್ಚಿಸಿದೆ.
ʻಕೈʼ ಹಾಗೂ ಕಮಲ ಪಾಳಯದ ನೂರಾರು ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಗೆ ಜೆಡಿಎಸ್ ಕಾರ್ಯಕರ್ತರು ಕೂಡ ಸ್ವಾಗತ ಕೋರಿದ್ದಾರೆ.
