ಮೈಸೂರು: ನನ್ನ ಸೋಲಿಗೆ ಕೆಲ ಬಿಜೆಪಿ ನಾಯಕರೂ ಕಾರಣ ಎಂದು ಹುಣಸೂರು ಉಪ ಚುನಾವಣೆಯ ಪರಾಜಿತ ಅಭ್ಯರ್ಥಿ ಎಚ್.ವಿಶ್ವನಾಥ್ ಬಹಿರಂಗ ಹೇಳಿಕೆ ನೀಡಿದ್ದಾರೆ.
ಹುಣಸೂರಿನಲ್ಲಿ ನಡೆದ ಬಿಜೆಪಿ ಕೃತಜ್ಞತಾ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು, ಜೆಡಿಎಸ್ ನಾಯಕರು ನನ್ನ ಸೋಲಿಸಲು ಒಟ್ಟಾಗಿ ಸೇರಿಕೊಂಡರು. ಇವರ ಜೊತೆಗೆ ಕೆಲ ಬಿಜೆಪಿ ನಾಯಕರೂ ಕೈ ಜೋಡಿಸಿದರು. ಇದೆಲ್ಲವನ್ನೂ ಅನಿವಾರ್ಯವಾಗಿ ಈಗ ಹೇಳಲೇಬೇಕಿದೆ ಎಂದು ಅಸಮಾಧಾನ ಹೊರ ಹಾಕಿದರು.
ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯೇ ಇಲ್ಲಿ ಮಾರಾಟವಾದರು. ನನ್ನನ್ನು ಮಾರಿಕೊಂಡವನು ಎನ್ನುತ್ತಾರೆ. ಪಾಪ, ಜೆಡಿಎಸ್ ಅಭ್ಯರ್ಥಿ ಸೋಮಶೇಖರ್ ಅವರನ್ನು ಕಾಂಗ್ರೆಸ್ಗೆ ಮಾರಾಟ ಮಾಡಿದವರು ಯಾರು? ಪ್ರಶ್ನಿಸಿದ ಎಚ್. ವಿಶ್ವನಾಥ್ ಅವರು, ಸೋಮಶೇಖರ್ ತಮ್ಮ ಮನೆ ದುಡ್ಡು ತಂದು ಚುನಾವಣೆ ಮಾಡಿದರು. ಅವರನ್ನು ಕಾಂಗ್ರೆಸ್ಗೆ ಮಾರಾಟ ಮಾಡಿದರು. ನನ್ನನ್ನು ನಾನು ಮಾರಿಕೊಂಡಿಲ್ಲ. ನೀವು ರಾಜ್ಯ ಮಾರಿದ್ದೀರಿ, ಜಾತಿಯನ್ನೂ ಮಾರಿದ್ದೀರಿ ಒಕ್ಕಲಿಗ ವಿರೋಧಿ ನಾನೋ, ನೀವೋ ಈಗ ಹೇಳಿ ಎಂದು ಜೆಡಿಎಸ್ ನಾಯಕರ ವಿರುದ್ಧ ಹರಿಹಾಯ್ದರು.
ಉಪಚುನಾವಣೆಯಲ್ಲಿ ನನ್ನ ವಿರುದ್ಧ ಅಪಪ್ರಚಾರ ನಡೆಯಿತು. ಮಾರಿಕೊಂಡವರು ಅಂತ ಹೇಳಿದರು. ನಾವು ಮಾರಿಕೊಳ್ಳಲಿಲ್ಲ. ಕರ್ನಾಟಕವನ್ನು ಮಾರಾಟ ಮಾಡುವವರನ್ನು ಕಿತ್ತೊಗೆಯಲು ರಾಜೀನಾಮೆ ನೀಡಿದ್ದೆವು ಎಂದರು.
ಮೈತ್ರಿ ಸರ್ಕಾರದಲ್ಲಿ ಲೋಕೋಪಯೋಗಿ ಸಚಿವರಾಗಿದ್ದ ಎಚ್.ಡಿ.ರೇವಣ್ಣ ಅವರು 700 ಇಂಜಿನಿಯರ್ ಗಳನ್ನು ಅಕ್ರಮವಾಗಿ ನೇಮಿಸಲು ಮುಂದಾಗಿದ್ದರು. 1,750 ಇಂಜಿನಿಯರ್ ಗಳ ವರ್ಗಾವಣೆ ಮಾಡಲು ಸಿದ್ಧತೆ ನಡೆದಿತ್ತು. ಮೈಮುಲ್ನಲ್ಲಿರುವ 170 ಸೀಟುಗಳನ್ನು ತಲಾ 50 ಲಕ್ಷ ರೂ.ಗಳಿಗೆ ಮಾರಾಟ ಮಾಡುತ್ತಿದ್ದರು. ಇದನ್ನು ತಪ್ಪಿಸುವ ಸಲುವಾಗಿ ನಾವು ರಾಜೀನಾಮೆ ನೀಡಿದೆವು ಎಂದು ದೂರಿದರು.