– ಸೂಕ್ತ ಕಾಲದಲ್ಲಿ ಎಲ್ಲದಕ್ಕೂ ಉತ್ತರ
ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪಿನ ಬಗ್ಗೆ ನನಗೆ ಮಾಹಿತಿ ಇಲ್ಲ. ನ್ಯಾಯಾಲಯದ ವಿಚಾರದಲ್ಲಿ ವಕೀಲರಿಂದ ಸರಿಯಾದ ಮಾಹಿತಿ ಇಲ್ಲದೆ ಈ ವಿಚಾರವಾಗಿ ಮಾತನಾಡುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.
ಕೋರ್ಟ್ ತೀರ್ಪಿನ ನಂತರ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ವಿಚಾರವಾಗಿ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಸದ್ಯಕ್ಕೆ ನಾನು ಟೆಕ್ ಸಮ್ಮಿಟ್ನಲ್ಲಿ ಭಾಗವಹಿಸಲು ಬಂದಿದ್ದೇನೆ. ನಮ್ಮ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಎಂಬಿ ಪಾಟೀಲ್ ಅವರು ರಾಜ್ಯದಲ್ಲಿ ಬಂಡವಾಳ ಆಕರ್ಷಿಸಿ ರಾಜ್ಯದ ಯುವಕರಿಗೆ ಉದ್ಯೋಗ ಸೃಷ್ಟಿಸಲು, ರಾಜ್ಯವನ್ನು ಸಮೃದ್ಧಿಗೊಳಿಸಲು ಈ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಅವರಿಗೆ ಬೆಂಬಲವಾಗಿ ನಾನು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ ಎಂದು ಹೇಳಿದರು.
ನಮ್ಮ ಸರ್ಕಾರ ನೂತನ ಬಿಟಿ ನೀತಿ ಹಾಗೂ ಅನ್ವೇಷಣಾ ನೀತಿಗಳನ್ನು ಇಂದು ಪರಿಚಯಿಸಿದೆ. ಇಂದು ಸಾವಿರಾರು ಮಂದಿ ವಿದೇಶಿ ಬಂಡವಾಳ ಹೂಡಿಕೆದಾರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ನ್ಯಾಯಾಲಯದಲ್ಲಿ ಆಗಿರುವ ಬೆಳವಣಿಗೆ ಬಗ್ಗೆ ತಿಳಿಯದೆ ಮಾತನಾಡುವುದು ಸರಿಯಲ್ಲ. ವಕೀಲರು ನಮಗೆ ಮಾಹಿತಿ ನೀಡದ ಹೊರತಾಗಿ ನಾನು ಮಾತನಾಡುವುದಿಲ್ಲ ಎಂದರು. ಇದನ್ನೂ ಓದಿ: ಸಿದ್ದು, ಡಿಕೆಶಿಯನ್ನ ಪೊಲೀಸ್ ಠಾಣೆಗೆ ಕರೆಸಿ ಮುಚ್ಚಳಿಕೆ ಬರೆಸಿಕೊಳ್ಳಿ: ಪ್ರತಾಪ್ ಸಿಂಹ
ನಾನೇನು ತಪ್ಪು ಮಾಡಿಲ್ಲ. ಎಲ್ಲಾ ಬೆಳವಣಿಗೆಗಳನ್ನು ನೀವು (ಮಾಧ್ಯಮದವರು), ಜನರು ನೋಡಿದ್ದಾರೆ. ನಾನು ಕೇವಲ ಪಕ್ಷದ ಕೆಲಸ ಮಾತ್ರ ಮಾಡಿದ್ದೇನೆ. ಪಕ್ಷದ ಕೆಲಸ ಮಾಡಿದ ಕಾರಣ ಸಾಕಷ್ಟು ತೊಂದರೆ ಅನುಭವಿಸಿದ್ದೇನೆ. ಮುಂದಕ್ಕೂ ತೊಂದರೆ ಕೊಟ್ಟರೆ ಕಾಪಾಡಲು ಆ ಭಗವಂತನಿದ್ದಾನೆ, ಈ ನಾಡಿನ ಜನರಿದ್ದಾರೆ. ನನಗೆ ತೊಂದರೆ ಕೊಟ್ಟ ಕಾರಣಕ್ಕೆ ಈ ರಾಜ್ಯದಲ್ಲಿ ಏನಾಯಿತು ಎಂದು ತಿಳಿದಿದೆ. ನನ್ನ ಪರವಾಗಿ ನಿಂತವರು ಹಾಗೂ ಪ್ರಾರ್ಥನೆ ಮಾಡಿದ ಜನರಿಗೆ ಕೋಟಿ ನಮಸ್ಕಾರ ಎಂದರು.
ಯತ್ನಾಳ್ ಅವರ ಆಚಾರ ವಿಚಾರ, ಭಾವನೆ ಮತ್ತು ಅವರ ಮನಸ್ಸಿನಲ್ಲಿ ಏನಿದೆ ಎಂಬುದನ್ನು ಬಹಳ ನಮ್ರತೆಯಿಂದ ಗಮನಿಸಿದ್ದೇನೆ. ಸೂಕ್ತ ಕಾಲದಲ್ಲಿ ಇದಕ್ಕೆಲ್ಲಾ ಉತ್ತರ ಕೊಡುತ್ತೇನೆ ಎಂದು ಡಿಕೆಶಿ ಉತ್ತರಿಸಿದ್ದಾರೆ. ಇದನ್ನೂ ಓದಿ: 41 ಕಾರ್ಮಿಕರ ರಕ್ಷಣೆ ಬೆನ್ನಲ್ಲೇ ಭಾವುಕರಾಗಿದ್ದ ಪ್ರಧಾನಿ ಮೋದಿ