– ಸತ್ಯ ಮುಚ್ಚಿಟ್ಟರೆ ಶಿವ ಮೆಚ್ಟುತ್ತಾನೆಯೇ?
– ಸಿಕ್ಕಿಬಿದ್ದಿರುವ ಕನಕ ಮಹಾಲಕ್ಷ್ಮೀ ಬಗ್ಗೆ ಸತ್ಯ ಹೇಳಬೇಕಲ್ಲವೇ?
ಬೆಂಗಳೂರು: ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡನಂತೆ. ಕಳ್ಳನ ಮನಸ್ಸು ಹುಳ್ಳುಳ್ಳಗೆ. ಈ ಗಾದೆಮಾತುಗಳು ಯಾರಿಗೆ ಅನ್ವಯ ಆಗುತ್ತವೋ ಇಲ್ಲವೋ ಗೊತ್ತಿಲ್ಲ. ಡಿಕೆ ಸಹೋದರರಿಗಂತೂ ಕರಾರುವಕ್ಕಾಗಿ ಅನ್ವಯಿಸುತ್ತವೆ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ (HD Kumaraswamy) ವ್ಯಂಗ್ಯವಾಡಿದ್ದಾರೆ.
ಕುಮಾರಸ್ವಾಮಿ ಅವರು ಆದಾಯ ತೆರಿಗೆ (Income Tax) ಇಲಾಖೆಯ ಪ್ರತಿನಿಧಿಯೇನೂ ಅಲ್ಲ ಎಂದಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರ ಹೇಳಿಕೆ ಹತಾಶೆಯ ಹೇಳಿಕೆಯಷ್ಟೇ. ಗುತ್ತಿಗೆದಾರನ ಮನೆಯಲ್ಲಿ ಸಿಕ್ಕಿದ ಇಡುಗಂಟು ಡಿಕೆಶಿ ಅವರದ್ದು ಎಂದು ನಾನು ಹೇಳಿದ್ದೇನೆಯೇ? ನಗದು ಅಭಿವೃದ್ಧಿ ಇಲಾಖೆ ಎಂದರೆ ಅವರದ್ದೇನಾ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಅಂಬಿಕಾಪತಿ, ಸಂತೋಷ್ ಕೃಷ್ಣಪ್ಪ ರಾಜ್ಯದ ನಂ 1, ನಂ 2 ಅವರ ಬೇನಾಮಿಗಳು: ಸಿಟಿ ರವಿ
ಹೆಚ್ಡಿಕೆ ಹೇಳಿದ್ದೇನು?
ಶಿವಕುಮಾರ್ ತಿಹಾರ್ ಜೈಲಿನ ವಿಷಯವನ್ನೂ ಪ್ರಸ್ತಾಪ ಮಾಡಿದ್ದಾರೆ. ಆದರೆ ತಿಹಾರಿಗೆ ಹೋಗುವ ಭಯ ಅಥವಾ ಗ್ಯಾರಂಟಿ ಸ್ವತಃ ಅವರಿಗೇ ಇದೆ ಎನ್ನುವುದು ನನ್ನ ಸ್ಪಷ್ಟ ಅನುಮಾನ. ಇಲ್ಲದಿದ್ದರೆ ಅವರು ಇಷ್ಟು ತೀವ್ರವಾಗಿ ನನ್ನ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡುವ ಅಗತ್ಯವಿರಲಿಲ್ಲ. ಅಂದಹಾಗೆ ನಾನು ಐಟಿ ಪ್ರತಿನಿಧಿಯೂ ಅಲ್ಲ, ಇಡಿ ಉದ್ಯೋಗಿಯೂ ಅಲ್ಲ. ಒಬ್ಬ ಹುಲು ಮಾನವನಷ್ಟೇ. ಕೆಲವರ ಭ್ರಮೆಗಳಿಗೆ ನಾನೇನು ಮಾಡಲಿ?
40% ಕಮೀಷನ್ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದವರು ಇವರಲ್ಲವೇ? ಆದರೆ, ಇವರ ಪರ್ಸಂಟೇಜ್ ಬಗ್ಗೆಯೇ ಹೇಳಿದರೆ ಕೋಪ ಬರುತ್ತದೆ. ಗುತ್ತಿಗೆದಾರನ ಮನೆಯಲ್ಲಿ ಸಿಕ್ಕಿದ ಆ ಕಪ್ಪು ಹಣ ಯಾರದ್ದು? ಆ ಗುತ್ತಿಗೆದಾರ ಯಾರ ಪರಮಾಪ್ತ ಎನ್ನುವುದು ಜಗಜ್ಜಾಹೀರು. ಹೀಗಿದ್ದ ಮೇಲೆ ಸತ್ಯ ಮುಚ್ಚಿಟ್ಟರೆ ಶಿವ ಮೆಚ್ಟುತ್ತಾನೆಯೇ?
ಮಾತೆತ್ತಿದರೆ ತನಿಖೆ, ಆಯೋಗ ಎಂದು ಜಪಿಸುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಈಗ ಗುತ್ತಿಗೆದಾರರ ಮನೆಗಳಲ್ಲಿ ಕಂತೆಕಂತೆಯಾಗಿ ಸಿಕ್ಕಿಬಿದ್ದಿರುವ ಕನಕ ಮಹಾಲಕ್ಷ್ಮೀ ಬಗ್ಗೆ ಸತ್ಯ ಹೇಳಬೇಕಲ್ಲವೇ? ಎಷ್ಟೇ ಆಗಲಿ, ಒಬ್ಬರು ಸಿದ್ದಪುರುಷರು! ಇನ್ನೊಬ್ಬರು ಸತ್ಯಪುರುಷರು! ಸತ್ಯಕ್ಕೆ ಸಮಾಧಿ ಕಟ್ಟುವ ಬದಲು ತನಿಖೆ ಮಾಡಿಸಲಿ. ಅದು ಯಾವ ತನಿಖೆ ಎಂದು ಅವರೇ ಬಾಯಿ ಬಿಟ್ಟು ಹೇಳಲಿ. #ಪರ್ಸಂಟೇಜ್_ಪಟಾಲಂ
Web Stories