ನವದೆಹಲಿ: ಯಾರ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಮುಂದಿನ ಚುನಾವಣೆ ಎದುರಿಸಲಿದೆ ಎಂಬ ಗೊಂದಲಕ್ಕೆ ಖುದ್ದು ಸಿಎಂ ಬಸವರಾಜ ಬೊಮ್ಮಾಯಿ ತೆರೆ ಎಳೆದಿದ್ದಾರೆ. 2023ರ ವಿಧಾನಸಭಾ ಚುನಾವಣೆಯನ್ನು ತಮ್ಮದೇ ನೇತೃತ್ವದಲ್ಲಿ ಎದುರಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಇಂಡಿಯಾ ಟುಡೇ ಕಾನ್ಕ್ಲೇವ್ನಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಷ್ಟು ಅವಧಿಗೆ ಸಿಎಂ ಆಗಿರುತ್ತೇವೆ ಎನ್ನುವುದು ಮುಖ್ಯವಲ್ಲ. ಇರುವ ಅವಧಿಯಲ್ಲಿ ಏನು ಮಾಡುತ್ತೇವೆ ಎನ್ನುವುದು ಮುಖ್ಯ ಎಂದಿದ್ದಾರೆ. ಇದನ್ನೂ ಓದಿ: ನನಗೆ ಅಕ್ರಮ ಸಂಬಂಧ ಇಲ್ಲ- ಟ್ರೋಲಿಗರ ವಿರುದ್ಧ ಕುಟುಕಿದ ಸಮಂತಾ
ನನ್ನ ಸರ್ಕಾರದ ಸ್ಥಿರತೆ ಬಗ್ಗೆ ಯೋಚಿಸುವುದಿಲ್ಲ. ನಾನು ಈ ಅವಧಿಗೆ ಮಾತ್ರ ಸಿಎಂ ಆಗಿರುವುದಿಲ್ಲ. ಮುಂದಿನ ಅವಧಿಗೂ ಬಿಜೆಪಿಯನ್ನು ಅಧಿಕಾರಕ್ಕೆ ತರಲಿದ್ದೇನೆ. ರಾಷ್ಟ್ರೀಯ ನಾಯಕರ ಮಾರ್ಗದರ್ಶನದಲ್ಲಿ ಚುನಾವಣಾ ಎದುರಿಸಲಿದ್ದೇವೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆಗೆ ಹೋಗುತ್ತೇವೆ ಎಂದು ಈ ಹಿಂದೆ ಅಮಿತ್ ಶಾ ಹೇಳಿದ್ದರು. ಆದರೆ ಇದಕ್ಕೆ ಕೆಲವರು ಪರೋಕ್ಷವಾಗಿ ಅಸಮಾಧಾನ ಹೊರಹಾಕಿ ಸಾಮೂಹಿಕ ನಾಯಕತ್ವದ ಮಂತ್ರ ಜಪಿಸಿದ್ದರು. ಈಗ ಬೊಮ್ಮಾಯಿ ಅವರೇ ನನ್ನ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುತ್ತದೆ ಎಂದು ಹೇಳುವ ಮೂಲಕ ಅಧಿಕೃತವಾಗಿ ಸ್ಪಷ್ಟಪಡಿಸಿದ್ದಾರೆ.