ನವದೆಹಲಿ: ಮಹಾರಾಷ್ಟ್ರ ಉಸ್ತುವಾರಿಯಾಗಿ ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಮಹಾರಾಷ್ಟ್ರ ಉಸ್ತುವಾರಿಯಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಖರ್ಗೆ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಜವಾಬ್ದಾರಿ ವಹಿಸಿದ್ದಾರೆ. ನಾನು ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಅಂದ್ರು. ನನಗೆ ವಹಿಸಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೆನೆ. ಅವರು ನೀಡಿರುವ ಪರೀಕ್ಷೆಯಲ್ಲಿ ಪಾಸ್ ಆಗುವ ಭರವಸೆ ಇದೆ ಎಂದರು.
ಮಹಾರಾಷ್ಟ್ರದಲ್ಲಿ ಪಕ್ಷವನ್ನು ಬಲಪಡಿಸಿ ಚುನಾವಣಾ ದೃಷ್ಟಿಯಿಂದ ಸಂಘಟನೆಯತ್ತೆ ಗಮನ ಹರಿಸಲಾಗುವುದು. ಹೈಕಮಾಂಡ್ ಕೆಲವು ಸೂಚನೆಗಳನ್ನು ನೀಡಿದ್ದು, ಅವುಗಳನ್ನು ಪಾಲಿಸ್ತಿನಿ. ಈ ಹಿಂದೆ ನಾಲ್ಕು ಬಾರಿ ಮಹಾರಾಷ್ಟ್ರದಲ್ಲಿ ಕಾರ್ಯ ನಿರ್ವಹಿಸಿದ್ದೀನಿ. ಎಲ್ಲ ನಾಯಕರನ್ನು ಒಗ್ಗೂಡಿಸಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಪ್ರಯತ್ನ ಮಾಡಲಾಗುವುದು ಅಂತ ಹೇಳಿದರು.
ಸಮ್ಮಿಶ್ರ ಸರ್ಕಾರದ ಭವಿಷ್ಯದ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾಳೆ ಅಥವಾ ನಾಡಿದ್ದು ಸಿದ್ದರಾಮಯ್ಯರನ್ನು ಭೇಟಿಯಾಗಲಿದ್ದೇನೆ. ಭೇಟಿಯಾಗಿ ಅವರ ಜತೆ ಮಾತಕತೆ ನಡೆಸುತ್ತೇನೆ. ವಿಡಿಯೋ ಬಗ್ಗೆ ವಿಶೇಷ ಮಾಹಿತಿ ಇಲ್ಲ. ನಾನೂ ಟಿವಿಯಲ್ಲಿ ನೋಡಿದ್ದೇನೆ ಅಷ್ಟೇ. ಯಾವ ಸಂದರ್ಭದಲ್ಲಿ ಹೇಳಿದ್ದಾರೆ ಅನ್ನೋದು ಗೊತ್ತಿಲ್ಲ. ವಿಡಿಯೋವನ್ನು ತಿರುಚಿರುವ ಸಾಧ್ಯತೆ ಇದೆ. ನಿಜವಾಗಿಯೂ ಸಿದ್ದರಾಮಯ್ಯ ಹೇಳಿದ್ದಾರೋ ಅವರನ್ನೇ ಕೇಳಬೇಕಿದೆ. ಕಾಂಗ್ರೆಸ್ ಹೈಕಮಾಂಡ್ ಕೂಡ ಗಮನಿಸುತ್ತಿದೆ ಅಂತ ಅವರು ತಿಳಿಸಿದ್ರು.