ಭ್ರಷ್ಟಾಚಾರ, ಕಮಿಷನ್ ದಂಧೆ ನಿಲ್ಲಿಸಿದ್ರೆ ಗ್ಯಾರಂಟಿ ಯೋಜನೆಗಳಿಗೂ ಮಿಕ್ಕಿ ಹಣ ಉಳಿಯುತ್ತೆ: ಎಎಪಿ

Public TV
2 Min Read
Mohan Dasari AAP

ಬೆಂಗಳೂರು: ಗ್ಯಾರಂಟಿ ಯೋಜನೆಗಳ (Guarantee Scheme) ಹೆಸರಲ್ಲಿ ರಾಜ್ಯ ಸರ್ಕಾರವು ಒಂದು ಕೈಯಲ್ಲಿ ಕೊಟ್ಟಂತೆ ನಟಿಸಿ ಇನ್ನೊಂದು ಕೈಯಲ್ಲಿ ಜನಸಾಮಾನ್ಯರ ಹಣವನ್ನು ತೆರಿಗೆ ರೂಪದಲ್ಲಿ ಕಿತ್ತುಕೊಳ್ಳುತ್ತಿದೆ. ಸಮರ್ಪಕವಾಗಿ ಸಂಪನ್ಮೂಲ ಕ್ರೋಡಿಕರಣ ಮಾಡಿದರೆ ಭ್ರಷ್ಟಾಚಾರ ಮತ್ತು ಕಮಿಷನ್ ದಂಧೆಯನ್ನು ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಮಿಕ್ಕಿ ಇತರೆ ಎಲ್ಲಾ ರೀತಿಯ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ಹಣ ಉಳಿಯುತ್ತದೆ ಎಂದು ಎಎಪಿ ಪಕ್ಷದ ನಾಯಕ ಮೋಹನ್ ದಾಸರಿ (Mohan Dasari) ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

ತೈಲ ಬೆಲೆ ಏರಿಸಿರುವ (Price Hike) ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಮುಖಂಡರು, ಸ್ವಾತಂತ್ರ‍್ಯ ಉದ್ಯಾನವನ ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದರು. ದ್ವಿಚಕ್ರ ವಾಹನಗಳಿಗೆ ಹೂವಿನ ಹಾರಗಳನ್ನು ಹಾಕಿ ಅಣುಕು ಅಂತ್ಯಕ್ರಿಯೆ ನಡೆಸುವ ಮೂಲಕ ಗಮನ ಸೆಳೆದರು. ಸೈಕಲ್‌ಗಳನ್ನು ಏರಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರಗಳನ್ನು ಕೂಗಿದರು. ಇದನ್ನೂ ಓದಿ: ಠಾಣೆಯಲ್ಲಿ ಪವಿತ್ರಾ ಗೌಡ ಕುಸಿದು ಬಿದ್ದಿದ್ದು ಲೋ ಬಿಪಿಯಿಂದ: ವೈದ್ಯೆ

AAP Protest

ಈ ಸಂದರ್ಭ ಮಾತನಾಡಿದ ಪಕ್ಷದ ಪ್ರಧಾನಕಾರ್ಯದರ್ಶಿ ಮೋಹನ್ ದಾಸರಿ, ಮೇ 2023ರಲ್ಲಿ ನೂತನ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೇವಲ 1 ವರ್ಷದ ಅವಧಿಯೊಳಗೆ ಅಬಕಾರಿ ತೆರಿಗೆಯನ್ನು ಮೂರು ಬಾರಿ ಹೆಚ್ಚಿಸಿದ್ದಾರೆ. ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಗರಿಷ್ಠ 25% ರವರೆಗೆ ಏರಿಕೆ ಮಾಡಿದ್ದಾರೆ. ನಾನಾ ಹಂತದ ವಾಹನಗಳಿಗೆ ವಿಧಿಸುವ ತೆರಿಗೆಯನ್ನು ಹೆಚ್ಚಳ ಮಾಡಿದ್ದಾರೆ. ಬೇರೆ ಯಾವೆಲ್ಲ ಮೂಲಗಳಿಂದ ತೆರಿಗೆ ಹೆಸರಲ್ಲಿ ಜನಸಾಮಾನ್ಯರನ್ನು ಹಿಂಡಬಹುದು ಎಂದು ಹುಡುಕುತ್ತಿದ್ದಾರೆ. ಇದರರ್ಥ, ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕವಾಗಿ ಸುರಿಯುತ್ತಿರುವ 52 ಸಾವಿರ ಕೋಟಿ ರೂ.ಗಳನ್ನು ಒದಗಿಸಲಾಗದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಒದ್ದಾಡುತ್ತಿದ್ದಾರೆ ಎಂಬುದಾಗಿದೆ. ಅಧಿಕಾರಕ್ಕೆ ಬರಬೇಕು ಎಂಬ ಹಪಾಹಪಿಯಲ್ಲಿ ಅಧ್ಯಯನ ರಹಿತವಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿರುವುದೇ ಇದಕ್ಕೆಲ್ಲ ಮೂಲ ಕಾರಣ ಎಂದು ಆರೋಪಿಸಿದರು. ಇದನ್ನೂ ಓದಿ: ಜನರ ದುಡ್ಡು ತಗೊಂಡು ಜನರಿಗೆ ಕೊಡೋಕೆ ನೀವೇ ಆಡಳಿತ ಮಾಡಬೇಕಾ?- ಸಿಎಂ ವಿರುದ್ಧ ಹೆಚ್‌ಡಿಕೆ ಕಿಡಿ 

ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನೇತೃತ್ವದಲ್ಲಿ ಅನುಷ್ಠಾನಕ್ಕೆ ತಂದಿರುವ ಉಚಿತ ಯೋಜನೆಗಳು ಭಾರಿ ಯಶಸ್ಸು ಕಂಡಿವೆ. ಕಾರಣ ಸಮರ್ಪಕ ಸಂಪನ್ಮೂಲ ಕ್ರೋಡೀಕರಣ, ಭ್ರಷ್ಟಾಚಾರ ರಹಿತ ಆಡಳಿತ, ಅಧ್ಯಯನಶೀಲ ಉಚಿತ ಯೋಜನೆಗಳ ಅನುಷ್ಠಾನಗಳಾಗಿವೆ. ಆದರೆ ಈ ಯೋಜನೆಗಳನ್ನು ಕಾಪಿ ಮಾಡಿದ ಕಾಂಗ್ರೆಸ್ ಸರ್ಕಾರ ತರಾತುರಿಯಲ್ಲಿ ನುಡಿದಂತೆ ನಡೆದಿದ್ದೇವೆ ಎಂದು ಹೇಳಿಕೊಳ್ಳುವ ಸಲುವಾಗಿ ಉಚಿತ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಭ್ರಷ್ಟಾಚಾರ, ಕಮಿಷನ್ ದಂಧೆ ಎಂದಿನಂತೆ ಎಗ್ಗಿಲ್ಲದೆ ಮುಂದುವರಿದಿದೆ. ಮೊದಲು ಭ್ರಷ್ಟಾಚಾರ, ಕಮಿಷನ್‌ಗಿರಿಯನ್ನು ನಿಲ್ಲಿಸಿ. ಗ್ಯಾರಂಟಿ ಯೋಜನೆಗಳು ಸುಗಮವಾಗಿ ಸಾಗುತ್ತವೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಕಿಸಾನ್ ಸಮ್ಮಾನ್ ಯೋಜನೆಯಡಿ 20 ಸಾವಿರ ಕೋಟಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

Share This Article