ವಿಜಯಪುರ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಮ್ಮ ಸಹೋದರಿ, ಅವರು ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇವೆ ಎಂದು ಅಥಣಿಯಲ್ಲಿ ಡಿಸಿಎಂ ಲಕ್ಷ್ಮಣ್ ಸವದಿ ಹೇಳಿಕೆ ಕೊಟ್ಟಿದ್ದಾರೆ.
ಬೆಳಗಾವಿ ರಾಜಕೀಯ ಬದಲಿಸಬಲ್ಲೇ ಎಂಬ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಸಿಎಂ, ಅವರು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬರುವ ವಿಚಾರದಲ್ಲಿ ಹಾಗೆ ಹೇಳಿರಬಹುದು. ಅವರು ಸಿಕ್ಕರೆ ಈ ಬಗ್ಗೆ ಮಾತನಾಡುತ್ತೇನೆ. ರಾಜಕೀಯ ದೃವೀಕರಣ ಹಿನ್ನೆಲೆ ಅವರು ತಮ್ಮ ಪಕ್ಷ ಬಿಟ್ಟು ನಮ್ಮಲ್ಲಿ ಬರಬಹುದು. ಅವರು ನಮ್ಮ ಸಹೋದರಿ, ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತಿಸಿಕೊಳ್ಳುತ್ತೇವೆ ಎಂದು ಹೇಳಿದರು. ಇದನ್ನೂ ಓದಿ:ಬೆಳಗಾವಿ ರಾಜಕೀಯ ಬದಲಿಸ್ತೀನಿ- ಲಕ್ಷ್ಮೀ ಹೆಬ್ಬಾಳ್ಕರ್
ಉಪಚುನಾವಣೆ ಬಳಿಕ ಇನ್ನಷ್ಟು ಜನ ಕಾಂಗ್ರೆಸ್ಸಿನಿಂದ ಬಿಜೆಪಿಗೆ ಬರಬಹುದು. ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲವಿಲ್ಲ ಎಂದು ಬಹುತೇಕರಿಗೆ ಮನವರಿಕೆ ಆಗಿದೆ. ಅಲ್ಲಿನ ವಾತಾವರಣ ನೋಡಿ ಬಿಜೆಪಿಗೆ ಬಂದರೆ ಒಳ್ಳೆ ಭವಿಷ್ಯ ಇದೆ ಎಂದು ಅನೇಕರು ತಿಳಿದಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನು ಬಹಳಷ್ಟು ಜನ ಬಿಜೆಪಿಗೆ ಬರಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಶನಿವಾರ ಸಿಎಂ ಯಡಿಯೂರಪ್ಪ ನನ್ನ ಭಾಷಣದ ಬಳಿಕ ಭಾವುಕರಾಗಿದ್ದಾರೆ. ನಾನೇ ಅಭ್ಯರ್ಥಿ ಆಗಬೇಕು ಎಂದು ಕಾರ್ಯಕರ್ತರು ಬಯಸಿದ್ದರು. ಹೀಗಾಗಿ ಕಾರ್ಯಕರ್ತರಲ್ಲಿ ಗೊಂದಲಗಳಿದ್ದವು. ಶನಿವಾರ ಸಿಎಂ ಬಂದ ಮೇಲೆ ಆ ಗೊಂದಲಗಳಿಗೆಲ್ಲಾ ತೆರೆ ಬಿದ್ದಿದೆ. ನಾನು ಬಿಚ್ಚು ಮನಸ್ಸಿನಿಂದ ಎಲೆಕ್ಷನ್ ಮಾಡ್ತೇನೋ ಇಲ್ಲೋ ಅನ್ನೋ ಸಂಶಯ ಯಡಿಯೂರಪ್ಪ ಅವರಿಗೆ ಇತ್ತು. ಆದರೆ ಶನಿವಾರ ಅವರಿಗೆ ಎಲ್ಲವೂ ಸ್ಪಷ್ಟವಾಗಿ ಭಾವುಕರಾಗಿದ್ದರು ಎಂದು ಸಿಎಂ ಬಗ್ಗೆ ಮಾತನಾಡಿದರು.
ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು?
ಶನಿವಾರ ರಾತ್ರಿ ಅಥಣಿ ಕ್ಷೇತ್ರದ ಕಕಮರಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಡೆದ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ನಾನು ಬೆಳಗಾವಿ ರಾಜಕಾರಣ ಬದಲು ಮಾಡಬಲ್ಲೆ. ಕೊಟ್ಟ ಕುದುರೆ ಏರಲು ಆಗದವನು ಇನ್ನೊಂದು ಕುದುರೆ ಏರುತ್ತೇನೆ ಅನ್ನೋನು ವೀರನೂ ಅಲ್ಲ ಶೂರನೂ ಅಲ್ಲ ಎಂದು ಅನರ್ಹರ ವಿರುದ್ಧ ಗುಡುಗಿದ್ದರು.