– ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ ಗೂಳಿಗೌಡರಿಂದ ಮನವಿ
ಬೆಂಗಳೂರು: ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ (Gruhalakshmi) ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ (Life Certificate) ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ ಕೂಡಲೇ ಕ್ರಮ ವಹಿಸಿ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.
ರಾಜ್ಯ ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ (Dinesh Gooligowda) ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಈ ವಿಚಾರವಾಗಿ ಮನವಿ ಸಲ್ಲಿಸಿದ್ದರು. ಅದಕ್ಕೆ ಸಿಎಂ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಈ ಬಗ್ಗೆ ಪರಿಶೀಲನೆ ಮಾಡಿ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ
ಮನವಿಯಲ್ಲೇನಿತ್ತು?
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳನ್ನು ಈಗಾಗಲೇ ರಾಜ್ಯಾದ್ಯಂತ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯಡಿ 2023 ರ ಜೂನ್ ತಿಂಗಳಿನಿಂದ ಸರ್ಕಾರದ ಆದೇಶದನ್ವಯ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಮಾಸಿಕ 2 ಸಾವಿರ ರೂ. ಪಾವತಿಸಲಾಗುತ್ತಿದೆ. ಇದನ್ನೂ ಓದಿ: ಫೈಲ್ಗಳನ್ನು ಹೊಸ ಅಧಿಕಾರಿಗಳಿಗೆ ಕೊಡ್ಬೇಡಿ – ವರ್ಗಾವಣೆಯಾದ್ರೂ ಅಧಿಕಾರಿಗಳಿಗೆ ವರ್ತಿಕಾ ಕರೆ
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಯೋಜನೆಯ ಫಲಾನುಭವಿ ಮಹಿಳೆಯಾಗಿರುತ್ತಾರೆ.
ಗೃಹಲಕ್ಷ್ಮಿ ಯೋಜನೆಯಡಿ 1,24,12,543 ಅರ್ಹ ಫಲಾನುಭವಿಗಳಿಗೆ ಈವರೆಗೂ ಸುಮಾರು 57,300 ಕೋಟಿ ರೂ.ಗಳ ಆರ್ಥಿಕ ಸಹಾಯವನ್ನು ಪಾವತಿ ಮಾಡಲಾಗಿದೆ.
ಈ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಲ್ಲಿ ಮರಣ ಹೊಂದಿರುವವರ ಮಾಹಿತಿಗಳು ಕಾಲಕಾಲಕ್ಕೆ ಪರಿಶೀಲನೆ ನಡೆಸಿ , ಮರಣ ಹೊಂದಿರುವ ಫಲಾನುಭವಿಗಳಗೆ ಧನಸಹಾಯ ಪಾವತಿಯಾಗುವದನ್ನು ತಪ್ಪಿಸಲು ಕುಟುಂಬದ ಜೀವನ ನಿರ್ವಹಣೆಗೆ ಹೆಚ್ಚು ಉಪಯೋಗವಾಗುತ್ತಿರುವ ಗೃಹಲಕ್ಷ್ಮಿ ಯೋಜನೆಯಡಿ ಪಾವತಿಯಾಗುವ ಮೊತ್ತವು ಮರಣ ಹೊಂದಿರುವ ಫಲಾನುಭವಿಗಳಿಗೆ ಕೆಲವು ಕಡೆ ಪಾವತಿಯಾಗುದನ್ನು ತಡೆಗಟ್ಟುವುದು ಅವಶ್ಯವಾಗಿರುತ್ತದೆ. ಇದರಿಂದ ಸರ್ಕಾರವು ಪಾವತಿಸುವ ಮೊತ್ತವು ಸದ್ವಿನಿಯೋಗವಾಗಲು ಹಾಗೂ ಸರ್ಕಾರದ ಹಣ ಇತರೆ ಅರ್ಹ ಫಲಾನುಭವಿಗಳಿಗೆ ವಿತರಿಸಲು ಅನುಕೂಲವಾಗವ ನಿಟ್ಟಿನಲ್ಲಿ ಸರ್ಕಾರವು ಕ್ರಮ ವಹಿಸಬೇಕು ಎಂದು ಮನವಿ ಮಾಡಿದ್ದರು
ನಿವೃತ್ತ ಸರ್ಕಾರಿ ನೌಕರರುಗಳಿಗೆ ಪಾವತಿಸುವ ಪಿಂಚಣಿ ಮೊತ್ತವನ್ನು ಪಡೆಯಲು ಅವರು ಪ್ರತಿ ವರ್ಷ ಸಂಬಂಧಪಟ್ಟ ಬ್ಯಾಂಕ್ʼಗಳಿಗೆ ತಮ್ಮ ಜೀವಿತ ಪ್ರಮಾಣ (Life Certificate) ಸಲ್ಲಿಸುವುದನ್ನು ಕಡ್ಡಾಯಗೊಳಿಸಿರುವ ಮಾದರಿಯಲ್ಲಿ, ಗೃಹಲಕ್ಷ್ಮಿ ಯೋಜನೆಯಡಿಯ ಅರ್ಹ ಫಲಾನುಭವಿಗಳು ಸಹ ಪ್ರತಿ ವರ್ಷ ಸಂಬಂಧಪಟ್ಟ ಬ್ಯಾಂಕ್ʼಗಳಿಗೆ ತಮ್ಮ ಜೀವಿತ ಪ್ರಮಾಣ ಸಲ್ಲಿಸುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಹಾಗೂ ಇತರೆ ಮಾರ್ಗೋಪಾಯಗಳ ಬಗ್ಗೆ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ದಿನೇಶ ಗೂಳಿಗೌಡ ಅವರು ಮನವಿ ಮಾಡಿದ್ದರು.

