ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡ ಚರ್ಚ್ ಉದ್ಘಾಟನೆಗೆ (Church Inauguration) ತಮಿಳುನಾಡಿನಿಂದ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಶನಿವಾರ ಕೊಡಗಿನಲ್ಲಿ ನಡೆದಿದೆ.
ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರೂರಿನ ಗಿರಿಜನ ಅಕ್ರಮವಾಗಿ ಕಾಡಿನಲ್ಲಿ ಚರ್ಚ್ ನಿರ್ಮಿಸಿದ್ದು, ಇದರ ಉದ್ಘಾಟನೆ ಕಾರ್ಯಕ್ರಮ ಏರ್ಪಾಡು ಮಾಡಿ ತಮಿಳುನಾಡಿನಿಂದ (Tamil Nadu) ಜನರನ್ನು ಕರೆಸಿದ್ದಾರೆ. ಈ ವೇಳೆ ಸ್ಥಳೀಯರು ಕಾರ್ಯಕ್ರಮವನ್ನು ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಹಿನ್ನೆಲೆ ಕುಶಾಲನಗರ (Kushalnagar) ವೃತ್ತ ನಿರೀಕ್ಷಕ ಪ್ರದೀಪ್, ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿಗಳಾದ ಮೋಹನ್ರಾಜ್, ರಾಮಚಂದ್ರ, ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಶ್ರೀಕಾಂತ್, ಪಿಡಿಒ ಆಸ್ಮಾ ಸ್ಥಳಕೆ ಧಾವಿಸಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಮೂಲಕ ಯಾವುದೇ ಅನುಮತಿ ಪಡೆಯದೇ ಕಟ್ಟಡ ನಿರ್ಮಿಸಿರುವುದಾಗಿ ಕಂಡು ಬಂದಿದೆ.
ಈ ವೇಳೆ ಸ್ಥಳೀಯರು ಹಾಗೂ ಹಾಡಿ ನಿವಾಸಿಗಳ ನಡುವೆ ವಾಗ್ವಾದ ನಡೆದಿದ್ದು, ತಮ್ಮಿಷ್ಟದಂತೆ ತಾವು ಪ್ರಾರ್ಥನೆಯಲ್ಲಿ ತೊಡಗಿರುವುದಾಗಿ ಹಾಡಿ ನಿವಾಸಿಗಳು ವಾದಿಸಿದ್ದಾರೆ. ಬಳಿಕ ಪೊಲೀಸರು ತಮಿಳುನಾಡು ಮೂಲದ 40ಕ್ಕೂ ಹೆಚ್ಚು ಜನರನ್ನು ವಾಹನ ಸಮೇತವಾಗಿ ವಶಕ್ಕೆ ಪಡೆದು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

ಈ ಕುರಿತು ಮಾತನಾಡಿರುವ ಬಿಜೆಪಿ ಮುಖಂಡ ಹೇರೂರು ಚಂದ್ರಶೇಖರ್, ಹೇರೂರು ಗಿರಿಜನ ಕಾಡಿನಲ್ಲಿ ಮತಾಂತರ ಚಟುವಟಿಕೆ ನಡೆಸುತ್ತಿದ್ದಾರೆ. ಮತಾಂತರಗೊಂಡ ಆದಿವಾಸಿಗಳು ಸಮಾಜ ಕಲ್ಯಾಣ ಇಲಾಖೆ ಜಾಗದಲ್ಲಿ ಅನಧಿಕೃತವಾಗಿ ಚರ್ಚ್ ನಿರ್ಮಿಸಿ ಪ್ರಾರ್ಥನೆಗೆ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಇದರ ಉದ್ಘಾಟನೆಗೆ ತಮಿಳುನಾಡಿನಿಂದ ಜನ ಬಂದಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಹಾಗಾಗಿ ಅಕ್ರಮ ಮತಾಂತರ ಪ್ರಕ್ರಿಯೆಗಳಿಗೆ ಕಡಿವಾಣ ಹಾಕಬೇಕಿದೆ ಎಂದು ಒತ್ತಾಯಿಸಿದ್ದಾರೆ.

