ಹೈದರಾಬಾದ್: ವಿವಾಹಿತ ಮಹಿಳೆಯೊಬ್ಬಳು ಅನುಮಾನಾಸ್ಪದವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಮಹೇಶ್ವರಿ (28) ಮೃತ ಮಹಿಳೆ. ಈಕೆಯ ಪೋಷಕರು ಪತಿಯೇ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ನಲ್ಗೊಂಡ ಜಿಲ್ಲೆಯ ಮಹೇಶ್ವರಿ, ಜಗದ್ಗಿರಿಗುಟ್ಟ ನಗರದ ವೆಂಕಟೇಶ್ಗೌಡನ ಜೊತೆಗೆ 10 ವರ್ಷಗಳ ಹಿಂದೆ ಮದುವೆಯಾಗಿದ್ದರು.
ದಂಪತಿ ಮಧ್ಯೆ ಆಗಾಗ ಜಗಳ ಮಾಡುತ್ತಿದ್ದರು. ಇತ್ತೀಚೆಗೆ ಇಬ್ಬರ ಮಧ್ಯೆ ಪ್ರತಿದಿನ ಜಗಳ ನಡೆಯುತ್ತಿತ್ತು. ಆದರೆ ಶನಿವಾರ ಬೆಳಗ್ಗೆ ಮಹೇಶ್ವರಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಹೇಶ್ವರಿ ಮನೆಯವರು ಪತಿಯೇ ಕೊಲೆ ಮಾಡಿ ಯಾರಿಗೂ ಅನುಮಾನ ಬರಬಾರದೆಂದು ನೇಣು ಹಾಕಿದ್ದಾನೆ ಎಂದು ಆರೋಪಿಸಿದ್ದಾರೆ.
ಪತಿ ವೆಂಕಟೇಶ್ಗೌಡ ಬೇರೆ ಮಹಿಳೆಯ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದನು. ಇದರಿಂದ ಪ್ರತಿದಿನ ಮಹೇಶ್ವರಿಗೆ ಕಿರುಕುಳ ನೀಡುತ್ತಿದ್ದನು ಎಂದು ತಿಳಿದು ಬಂದಿದೆ. ಈ ಹಿಂದೆಯೇ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿತ್ತು.
ಸದ್ಯಕ್ಕೆ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತ ಮಹೇಶ್ವರಿಯ ಪೋಷಕರು ನೀಡಿದ ದೂರಿನ ಆಧಾರದ ಮೇರೆಗೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.