– ತಾಯಿ, ಪ್ರಿಯಕರನ್ನು ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು
ಚಿಕ್ಕೋಡಿ: ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಮಗನನ್ನು ಕೊಲೆ ಮಾಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿ ತಾಯಿ ಮತ್ತು ಪ್ರಿಯಕರನನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ಅಥಣಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ನಡೆದಿದೆ.
ಕಿರಣ ಕೆಂಗೇರಿ(14) ಶವ ಇಂದು ಮಧ್ಯಾಹ್ನ ನೇಣು ಬಿಗಿದ ಸ್ಥಿತಿಯಲ್ಲಿ ಜಮೀನಿನಲ್ಲಿ ಪತ್ತೆಯಾಗಿತ್ತು. ಈತನ ಶವದ ಬಳಿ ತಾಯಿ ರೇಶ್ಮಾ ಕೆಂಗೇರಿ ಮತ್ತು ಪ್ರಿಯಕರ ದಿಲೀಪ್ ಜೋಗೆ ಇರುವುದನ್ನು ನೋಡಿದ ಗ್ರಾಮಸ್ಥರು ಇವರೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ.
ಇವರಿಬ್ಬರು ನಾವು ಕಿರಣನನ್ನು ಕೊಲೆ ಮಾಡಿಲ್ಲ ಎಂದು ಹೇಳುತ್ತಿದ್ದು, ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ.
ಕಳೆದ ಹಲವು ವರ್ಷಗಳಿಂದ ಇವರಿಬ್ಬರು ಅಕ್ರಮ ಸಂಬಂಧ ಹೊಂದಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ತಾಯಿ ರೇಷ್ಮಾ, ಪ್ರಿಯಕರ ಜೊತೆ ಸೇರಿ ಕೊಲೆ ಮಾಡಿದ್ದಾಳೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಸ್ಥಳಕ್ಕೆ ಕಾಗವಾಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತಾಯಿ ಮತ್ತು ಪ್ರಿಯಕರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಇದೀಗ ಪೊಲೀಸ್ ಠಾಣೆಗೆ ರೇಷ್ಮಾಳ ಗಂಡ ಆಗಮಿಸಿದ್ದು ಪಿಎಸ್ಐ ಸಮೀರ್ ಮುಲ್ಲಾ ವಿಚಾರಣೆ ನಡೆಸುತ್ತಿದ್ದಾರೆ.