ಬೆಂಗಳೂರು: ಅನಾರೋಗ್ಯದ ಹಿನ್ನೆಲೆ ಐಎಂಎ ಪ್ರಕರಣದ ಆರೋಪಿ ಮಾನ್ಸೂರ್ ಖಾನ್ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಸದ್ಯ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಮನ್ಸೂರ್ ನನ್ನು ವಿಚಾರಣೆ ನಡೆಸುತ್ತಿದ್ದು, ಇಡಿ ಕಚೇರಿಯಲ್ಲಿಯೇ ಆತನನ್ನು ಇರಿಸಲಾಗಿದೆ. ಮನ್ಸೂರ್ ಭಾನುವಾರ ಎದೆ ನೋವು ಎಂದು ಹೇಳಿದ ಹಿನ್ನೆಲೆಯಲ್ಲಿ ಆತನನ್ನು ಜಯದೇವ ಆಸ್ಪತ್ರೆಯಲ್ಲಿ ಇಡಿ ಅಧಿಕಾರಿಗಳು ಚಿಕಿತ್ಸೆ ಕೊಡಿಸಿದ್ದರು. ಬಳಿಕ ಶಾಂತಿನಗರದ ಇಡಿ ಕಚೇರಿಗೆ ವಾಪಸ್ ಕರೆತಂದಿದ್ದರು. ಆದರೆ ಇಡಿ ಕಚೇರಿಗೆ ಬಂದ ಒಂದು ಗಂಟೆ ನಂತರ ಮಾನ್ಸೂರ್ ಗೆ ಮತ್ತೆ ಎದೆನೋವು ಕಾಣಿಸಿಕೊಂಡಿದ್ದು, ತಡರಾತ್ರಿ ವಿಕ್ಟೋರಿಯಾ ಆಸ್ಪತ್ರೆಗೆ ಆತನನ್ನು ದಾಖಲಿಸಲಾಗಿದೆ.
ಈ ಹಿಂದೆ ವಿಚಾರಣೆ ವೇಳೆ ಮನ್ಸೂರ್ 1000ಕ್ಕೂ ಹೆಚ್ಚು ಕೋಟಿ ಮೌಲ್ಯದ ವ್ಯವಹಾರದ ರಹಸ್ಯ ವಿವರವನ್ನು ಇಡಿ ಅಧಿಕಾರಿಗಳಿಗೆ ತಿಳಿಸಿದ್ದನು. ಅಲ್ಲದೆ ಕೆಲ ಪ್ರಭಾವಿಗಳ ಹೆಸರುಗಳನ್ನು ಕೂಡ ಮನ್ಸೂರ್ ಪ್ರಸ್ತಾಪಿಸಿದ್ದಾನೆ ಎಂದು ಮೂಲಗಳಿಂದ ತಿಳಿದು ಬಂದಿತ್ತು.
ಪ್ರಭಾವಿಗಳ ಜೊತೆಗಿನ ನಂಟು ಹಾಗೂ ಪ್ರಭಾವಿಗಳಿಗೆ ಹಂಚಿಕೆಯಾಗಿರುವ ಐಎಂಎನ ಲಾಭಾಂಶದ ಕುರಿತು ಮನ್ಸೂರ್ ಬಾಯ್ಬಿಟ್ಟಿದ್ದನು. ಮನ್ಸೂರ್ ಗೆ ಜೀವ ಬೆದರಿಕೆ ಇರುವ ಹಿನ್ನೆಲೆ ಆತನಿಗೆ ಹೈ ಸೆಕ್ಯುರಿಟಿ ನೀಡಲಾಗಿದ್ದು, ಖಾನ್ ಗೆ ರಾತ್ರಿಯಿಡಿ ಬಿಗಿ ಭದ್ರತೆ ಒದಗಿಸಲಾಗುತ್ತಿದೆ.
ಶನಿವಾರ ಬೆಂಗಳೂರಿನ ಶಾಂತಿ ನಗರದಲ್ಲಿರುವ ಇಡಿ ಕಚೇರಿಗೆ ಕರೆತಂದ ಬಳಿಕ ಸಿವಿಲ್ ಕೋರ್ಟ್ ಗೆ ಇಡಿ ಅಧಿಕಾರಿಗಳು ಹಾಜರುಪಡಿಸಿದ್ದರು. ಹಲವು ವಿಷಯಗಳ ಕುರಿತು ವಿಚಾರಣೆ ನಡೆಸಬೇಕಿದೆ. ಆದ್ದರಿಂದ 15 ದಿನಗಳ ಕಾಲ ವಶಕ್ಕೆ ನೀಡಿ ಅಂತ ಇಡಿ ಕೇಳಿತು. ಆದರೆ, ಕೇವಲ 3 ದಿನಗಳಿಗೆ ಮಾತ್ರ ನೀಡೋದಾಗಿ ಜಡ್ಜ್ ಆದೇಶಿಸಿದರು. ಹೀಗಾಗಿ ಖಾನ್ ನನ್ನು 3 ದಿನಗಳ ಅವಧಿಗೆ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಲಾಗಿದೆ.
ಐಎಂಎ ಕಚೇರಿ ಸೇರಿದಂತೆ ಮನ್ಸೂರ್ ಖಾನ್ ಮನೆ ಮೇಲೆ ದಾಳಿ ನಡೆಸಿದ ವೇಳೆ ಲಭ್ಯವಾದ ಆಸ್ತಿಪಾಸ್ತಿ, ಚಿನ್ನಾಭರಣಗಳು, ದಾಖಲೆಗಳ ಕುರಿತು ಇಡಿ ವಿಚಾರಣೆ ನಡೆಸುತ್ತಿದೆ. ಇನ್ನೊಂದೆಡೆ, ಎಸ್ಐಟಿ ಹಾಗೂ ತೆಲಂಗಾಣ ಪೊಲೀಸರು ಕೂಡ ಮನ್ಸೂರ್ ನನ್ನು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದ್ದಾರೆ.
ವಂಚನೆ ಎಸಗಿ ಮನ್ಸೂರ್ ಖಾನ್ ದುಬೈಗೆ ತೆರಳಿದ್ದ. ಈತನ ಚಲನವಲನಗಳ ಕಣ್ಣಿಟ್ಟಿತ್ತ ಎಸ್ಐಟಿ ಭಾರತಕ್ಕೆ ಬರುವಂತೆ ಹೇಳಿತ್ತು. ಅಲ್ಲದೇ ರಕ್ಷಣೆ ನೀಡಲಾಗುವುದು ಎಂದು ಎಸ್ಐಟಿ ತಿಳಿಸಿತ್ತು. ದುಬೈನಿಂದ ದೆಹಲಿಗೆ ಬಂದಿಳಿದ ಮನ್ಸೂರ್ ಖಾನ್ ನನ್ನು ಗುರುವಾರ ಮಧ್ಯರಾತ್ರಿ 1:50ರ ಸುಮಾರಿಗೆ ಬಂಧಿಸಲಾಗಿತ್ತು. ಮನ್ಸೂರ್ ಖಾನ್ ನನ್ನು ಇ.ಡಿ ಅಧಿಕಾರಿಗಳು ವಿಚಾರಣೆ ಪೂರ್ಣಗೊಳಿಸಿದ ಬಳಿಕ ಎಸ್ಐಟಿ ಅಧಿಕಾರಿಗಳಿಗೆ ಹಸ್ತಾಂತರಿಸಲಿದ್ದಾರೆ.