ಕೋಲಾರ: ಬಹು ಕೋಟಿ ಐಎಂಎ ವಂಚನೆ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸದ್ಯ ಸಂಸ್ಥೆಗೆ ಸೇರಿದ ಜಮೀನುಗಳನ್ನು ಕೋಲಾರ ಜಿಲ್ಲಾಡಳಿತ ವಶಕ್ಕೆ ನೀಡಲಾಗಿದೆ.
ಜಿಲ್ಲೆಯ ಮಾಲೂರು ತಾಲೂಕಿನ ಪುರ ಮತ್ತು ಬೈರತನಹಳ್ಳಿ ಗ್ರಾಮದಲ್ಲಿ ಐಎಂಐ ಜಮೀನುಗಳನ್ನು ವಶಕ್ಕೆ ಪಡೆಯಲಾಗಿದೆ. ಪುರ ಗ್ರಾಮದ ಸರ್ವೆ ನಂ.6ರ 0.20 ಗುಂಟೆ ಮತ್ತು ಸರ್ವೆ ನಂ.5 ರ ಗುಂಟೆ ಜಮೀನನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಬೈರತನಹಳ್ಳಿಯ ಪಾರಂ ಹೌಸನ್ನು ಕೂಡ ಜಿಲ್ಲಾಡಳಿತ ವಶಕ್ಕೆ ನೀಡಲಾಗಿದೆ.
ಇಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ನೇತೃತ್ವದಲ್ಲಿ ಅಧಿಕಾರಿಗಳು ಪ್ರದೇಶಗಳಿಗೆ ಭೇಟಿ ನೀಡಿ ಜಮೀನು ವಶಕ್ಕೆ ಪಡೆದಿದ್ದು, ವಶಪಡಿಸಿಕೊಂಡಿರುವ ಜಮೀನುಗಳ ಅತಿಕ್ರಮ ಪ್ರವೇಶ ನಿಷೇಧಿಸಲಾಗಿದೆ.
ಬಹುಕೋಟಿ ವಂಚನೆ ಪ್ರಕರಣದ ಆರೋಪಿ ಐಎಂಎ ಸಂಸ್ಥಾಪಕ ಮನ್ಸೂರ್ ಖಾನ್ ಪ್ರಾಥಮಿಕ ತನಿಖೆ ನಡೆಸಲಾಗಿತ್ತು. ಜಾರಿ ನಿದೇಶನಾಲಯ(ಇಡಿ) ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಪ್ರಕರಣದ ಕುರಿತು ಸ್ಫೋಟಕ ಮಾಹಿತಿಯನ್ನು ಮನ್ಸೂರ್ ಬಾಯ್ಬಿಟ್ಟಿದ್ದ. 1000ಕ್ಕೂ ಹೆಚ್ಚು ಕೋಟಿ ಮೌಲ್ಯದ ವ್ಯವಹಾರದ ರಹಸ್ಯ ವಿವರವನ್ನು ಇಡಿ ಅಧಿಕಾರಿಗಳು ಪಡೆದಿದ್ದಾರೆ ಎನ್ನಲಾಗಿತ್ತು. ಅಲ್ಲದೆ ಕೆಲ ಪ್ರಭಾವಿಗಳ ಹೆಸರುಗಳನ್ನು ಕೂಡ ಮನ್ಸೂರ್ ಪ್ರಸ್ತಾಪಿಸಿದ್ದಾನೆ ಎಂದು ಮೂಲಗಳಿಂದ ತಿಳಿದು ಬಂದಿತ್ತು.