ವಿಸ್ಮಯ ಸಿನಿಮಾ ಶೂಟಿಂಗ್ ವೇಳೆ ತಮ್ಮ ಮೇಲೆ ಲೈಂಗಿಕ ಕಿರುಕುಳ ಮಾಡಲಾಗಿದೆ ಎಂದು ಹೆಸರಾಂತ ನಟರೊಬ್ಬರ ಮೇಲೆ ನಟಿ ಶ್ರುತಿ ಹರಿಹರನ್ ಆರೋಪ ಮಾಡಿದ್ದರು. ಈ ಆರೋಪಕ್ಕೆ ಸಂಬಂಧಿಸಿದಂತೆ ನಟನ ಪರವಾಗಿ ಪ್ರಶಾಂತ್ ಸಂಬರ್ಗಿ ನಾನಾ ಹೇಳಿಕೆಗಳನ್ನು ನೀಡಿದ್ದರು. ಮಾಧ್ಯಮಗಳ ಜೊತೆ ಈ ಪ್ರಕರಣದ ಬಗ್ಗೆ ಮಾತನಾಡುವಾಗ ಪ್ರಶಾಂತ್ ಸಂಬರ್ಗಿ ತಮ್ಮ ಚಾರಿತ್ರ್ಯ ಹರಣ ಮಾಡುತ್ತಿದ್ದಾರೆ ಎಂದು ನಟಿ ಶ್ರುತಿ ಹರಿಹರನ್ ಆರೋಪಿಸಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್ ನಲ್ಲಿ ನಡೆಯುತ್ತಿರುವ ಈ ಪ್ರಕರಣವನ್ನು ರದ್ದು ಕೋರಿ ಪ್ರಶಾಂತ್ ಸಂಬರಗಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಪೀಠ, ಸಂಬರಗಿ ವಿರುದ್ಧ ಪ್ರಕರಣಕ್ಕೆ ಮುಂದಿನ ವಿಚಾರಣೆವರೆಗೂ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಈ ವಿಚಾರಣೆಯನ್ನು 2023ರ ಫೆಬ್ರುವರಿ 1ಕ್ಕೆ ಮುಂದೂಡಿದೆ. ಇದನ್ನೂ ಓದಿ: IMDB 2022ರ ಜನಪ್ರಿಯ ಭಾರತೀಯ ಸಿನಿಮಾ ಪಟ್ಟಿಯಲ್ಲಿ ಕನ್ನಡದ ಟಾಪ್ 3 ಚಿತ್ರಗಳು
ಶ್ರುತಿ ಹರಿಹರನ್ ಮಾಡಿದ್ದ ಆರೋಪದ ಕುರಿತಂತೆ 2018ರ ಅಕ್ಟೋಬರ್ 25ರಂದು ವಾಣಿಜ್ಯ ಮಂಡಳಿಯಲ್ಲಿ ಸಂಧಾನ ಸಭೆ ನಡೆದಿತ್ತು. ಹಿರಿಯ ನಟ ಅಂಬರೀಶ್ ಅವರ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಶ್ರುತಿ ಹರಿಹರನ್ ಮತ್ತು ನಟನಿಗೆ ಆಪ್ತರಾಗಿದ್ದ ಸಂಬರಗಿ ಹಾಜರಿದ್ದರು. ನಂತರ ತನ್ನ ವಿರುದ್ಧ ಮಾಧ್ಯಮಗಳಲ್ಲಿ ಸಂಬರಗಿ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದು, ಚಾರಿತ್ರ್ಯಕ್ಕೆ ಧಕ್ಕೆ ತರುತ್ತಿದ್ದಾರೆಂದು ಆರೋಪಿಸಿದ್ದರು. ಸಂಬರಗಿ ವಿರುದ್ಧ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.