ನವದೆಹಲಿ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅತ್ಯಂತ ಕೆಟ್ಟ ದುರಾಡಳಿತ ನಡೆಯುತ್ತಿದ್ದು, ಎಲ್ಲ ರಂಗದಲ್ಲೂ ವೈಫಲ್ಯವಾಗಿದೆ. ಜನ ಸಾಮಾನ್ಯರು, ರೈತರು, ಮಹಿಳೆಯರು ಸಂಕಷ್ಟದಲ್ಲಿದ್ದು, ದಿನನಿತ್ಯ ಹಿಂಸೆ ಮತ್ತು ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಇದರ ವಿರುದ್ಧ ಸಮರ ಸಾರಬೇಕಾಗಿರುವ ಬಿಜೆಪಿಯಲ್ಲಿ ಆಂತರಿಕ ಭಿನ್ನಾಭಿಪ್ರಾಯದ ಮಾತಿನ ಸಮರ ನಡೆಯುತ್ತಿರುವುದು ಅತ್ಯಂತ ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದರು.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಇಡೀ ದೇಶಕ್ಕೆ ಸಮರ್ಥ ಆಡಳಿತ ಕೊಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಈ ಪಕ್ಷ ಮತ್ತು ವರಿಷ್ಠರ ತೀರ್ಮಾನವೇ ಅಂತಿಮವಾಗಿದ್ದು, ನಾನು ಯಾವುದೇ ಗುಂಪುಗಾರಿಕೆಯಲ್ಲಿ ನಂಬಿಕೆ ಇಟ್ಟವನಲ್ಲ. ಆದುದರಿಂದ ನಾನು ಯಾವುದೇ ಒಂದು ಗುಂಪಿನ ಸಭೆಯನ್ನು ಕರೆಯುವ ಪ್ರಶ್ನೆಯೇ ಬರುವುದಿಲ್ಲ ಎಂದರು.ಇದನ್ನೂ ಓದಿ: ಬೆಂಗಳೂರಿನಲ್ಲಿ ದುರಂತ| ಮೂರಂತಸ್ತಿನ ಕಟ್ಟಡಕ್ಕೆ ಬೆಂಕಿ, ಇಬ್ಬರು ಬಲಿ
ಎಲ್ಲರನ್ನೂ ಒಂದುಗೂಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ಹಲವಾರು ಮುಖಂಡರಲ್ಲಿ ನಾನೂ ಒಬ್ಬ. ಎರಡೂ ಕಡೆ ತಾಳ್ಮೆಯನ್ನು ಕಳೆದುಕೊಳ್ಳದೇ ಕರ್ನಾಟಕ ಬಿಜೆಪಿಯ ಸರ್ವೋಚ್ಛ ನಾಯಕ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಇತರ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಒಟ್ಟಿಗೆ ಕುಳಿತು ಮಾತುಕತೆಯ ಮೂಲಕ ಇದನ್ನು ಬಗೆಹರಿಸಬೇಕು. ಇಲ್ಲದಿದ್ದರೆ ವರಿಷ್ಠರ ತೀರ್ಮಾನಕ್ಕೆ ನಾವೆಲ್ಲರೂ ಬದ್ದರಾಗಬೇಕು.
ವರಿಷ್ಠರು ಕೂಡಲೇ ಕರ್ನಾಟಕದ ಪಕ್ಷದ ಬೆಳವಣಿಗೆಯ ಬಗ್ಗೆ ಗಮನವನ್ನು ಹರಿಸಿ, ಎಲ್ಲ ಪ್ರಮುಖರ ಜೊತೆಗೆ ಚರ್ಚೆ ಮಾಡಿ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳುತ್ತಾರೆ ಎನ್ನುವ ನಂಬಿಕೆ ನನಗಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ವಾಲ್ಮೀಕಿ ಹಗರಣ | ಸಿಬಿಐ ತನಿಖೆ ಚುರುಕು ಮೂವರು ಆರೋಪಿಗಳಿಗೆ ನೋಟಿಸ್