ಬೆಂಗಳೂರು: ಐಪಿಎಲ್ ಅಂಕಪಟ್ಟಿಯಲ್ಲಿ ಕೊನೇ ಸ್ಥಾನದಲ್ಲಿರುವ ಆರ್ಸಿಬಿ (IPL 2024) ಮುಂದಿನ ತನ್ನೆಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕೆಂದು ಪಣ ತೊಟ್ಟಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇಂದು (ಏ.4) ತವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ (Gujarat Taitans) ಎದುರು ಸೆಣಸಲು ಸಜ್ಜಾಗಿದ್ದು, ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ.
2024ರ ಐಪಿಎಲ್ ಟೂರ್ನಿಯಲ್ಲಿ ಅಸ್ಥಿರ ಪ್ರದರ್ಶನ ನೀಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಳೆದ 2 ಪಂದ್ಯಗಳಲ್ಲಿ ಭರ್ಜರಿ ಜಯ ದಾಖಲಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಅದರಲ್ಲೂ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ಎದುರು 9 ವಿಕೆಟ್ಗಳ ಭರ್ಜರಿ ಜಯ ದಾಖಲಿಸಿತ್ತು. ಇದೀಗ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಅಂಥದ್ದೇ ಪ್ರದರ್ಶನ ನೀಡಿ ನಾಕ್ಔಟ್ ಹಂತಕ್ಕೆ ಮತ್ತಷ್ಟು ಹತ್ತಿರವಾಗಲು ಆರ್ಸಿಬಿ ಎದುರು ನೋಡುತ್ತಿದೆ. ಇದನ್ನೂ ಓದಿ: ಟಿ20 ವಿಶ್ವಕಪ್ ತಂಡದಿಂದ ರಾಹುಲ್ ಬಿಟ್ಟಿದ್ದೇಕೆ? ಕೊಹ್ಲಿ ಸ್ಟ್ರೈಕ್ರೇಟ್ ಬಗ್ಗೆ ರೋಹಿತ್ ಹೇಳಿದ್ದೇನು?
ಅತ್ತ ಹೊಸ ನಾಯಕ ಶುಭಮನ್ ಗಿಲ್ ಸಾರಥ್ಯದಲ್ಲಿ ಆರಂಭಿಕ ಪಂದ್ಯಗಳನ್ನು ಗೆದ್ದು ಉತ್ತಮ ಪ್ರದರ್ಶನ ನೀಡಿದ್ದ ಗುಜರಾತ್ ಟೈಟಾನ್ಸ್ ತಂಡ ಬಳಿಕ ಸತತ ವೈಫಲ್ಯಗಳೊಂದಿಗೆ ನಿರಾಸೆ ಅನುಭವಿಸಿದೆ. ಕಳೆದ 5 ಪಂದ್ಯಗಳಲ್ಲಿ ಟೈಟಾನ್ಸ್ 3 ಸೋಲು ಕಂಡಿದೆ. ಈವರೆಗೆ ಆಡಿರುವ 10 ಪಂದ್ಯಗಳಲ್ಲಿ 4 ಜಯ ಮತ್ತು 6 ಸೋಲಿನೊಂದಿಗೆ 8 ಅಂಕಗಳನ್ನು ಕಲೆಹಾಕಿದ್ದು 8ನೇ ಸ್ಥಾನ ಅಲಂಕರಿಸಿದೆ. ಹೀಗಾಗಿ ಉಳಿದ 4 ಪಂದ್ಯಗಳಲ್ಲಿ ಎಲ್ಲವನ್ನೂ ಗೆದ್ದು ಸುಲಭವಾಗಿ ಪ್ಲೇ-ಆಫ್ಸ್ ತಲುಪಲು ಗಿಲ್ ಪಡೆ ಎದುರು ನೋಡುತ್ತಿದೆ. ಇತ್ತಂಡಗಳು ಒಟ್ಟು 4 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಉಭಯ ತಂಡಗಳು ತಲಾ ಎರಡರಲ್ಲಿ ಗೆಲುವು ಸಾಧಿಸಿದೆ.
ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್-11
ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್ವೆಲ್, ಕ್ಯಾಮರೂನ್ ಗ್ರೀನ್, ದಿನೇಶ್ ಕಾರ್ತಿಕ್, ಸ್ವಪ್ನಿಲ್ ಸಿಂಗ್, ಕರಣ್ ಶರ್ಮಾ, ಮೊಹಮ್ಮದ್ ಸಿರಾಜ್, ಯಶ್ ದಯಾಳ್. ಇದನ್ನೂ ಓದಿ: ಮುಂಬೈ ವಿರುದ್ಧ 24 ರನ್ಗಳ ಜಯ – ಎರಡನೇ ಸ್ಥಾನಕ್ಕೆ ಜಿಗಿದ ಕೋಲ್ಕತ್ತಾ
ಮಳೆ ಅಡ್ಡಿಯಾಗುತ್ತಾ?
ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಶುಕ್ರವಾರವೂ ಬೆಂಗಳೂರಿನ ಕೆಲವೆಡೆ ಮಳೆಯಾಗಿದ್ದು, ಇಂದಿನ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.