– ಸೋರಿಕೆಯಾಗಿಲ್ಲ ಸಿಬ್ಬಂದಿಯೇ ವಾಟ್ಸಪ್ನಲ್ಲಿ ಕಳುಹಿಸಿರಬಹುದು
– ಪಬ್ಲಿಕ್ ಟಿವಿಗೆ ನಿರ್ದೇಶಕಿ ಶಿಖಾ ಸ್ಪಷ್ಟನೆ
ರಾಯಚೂರು: ಪಿಯುಸಿ ಪ್ರಶ್ನೆ ಪತ್ರಿಕೆ ಮತ್ತೆ ಸೋರಿಕೆಯಾಗಿದೆಯಾ ಎನ್ನುವ ಶಂಕೆ ಈಗ ಹುಟ್ಟಿಕೊಂಡಿದೆ. ಇಂದು ನಡೆದ ವಾಣಿಜ್ಯ ವಿಭಾಗದ ಅಕೌಂಟಿನ್ಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ನಲ್ಲಿ ಹರಿದಾಡಿರುವುದೇ ಈ ಶಂಕೆ ಮೂಡಲು ಕಾರಣವಾಗಿದೆ.
ರಾಯಚೂರಿನ ಮಾನ್ವಿಯ ಗಾಂಧಿ ಮೆಮೋರಿಯಲ್ ಪಿಯು ಕಾಲೇಜಿನಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ವಾಟ್ಸಪ್ನಲ್ಲಿ ಪ್ರಶ್ನೆ ಪತ್ರಿಕೆ ಸಿಕ್ಕಿದೆ. ಪ್ರಶ್ನೆ ಪತ್ರಿಕೆಯನ್ನು ಬೆಳಗ್ಗೆ 10.15ಕ್ಕೆ ನೀಡಿದರೆ, 10.30ಕ್ಕೆ ಉತ್ತರ ಪತ್ರಿಕೆಯನ್ನು ನೀಡಲಾಗುತ್ತದೆ. ಆದರೆ ಈ ಪ್ರಶ್ನೆಪತ್ರಿಕೆ ಬೆಳಗ್ಗೆ 10.50ಕ್ಕೆ ವಾಟ್ಸಪ್ನಲ್ಲಿ ಹರಿದಾಡಿದೆ.
ಪಿಯು ಪರೀಕ್ಷೆ ಆರಂಭಗೊಂಡ ಬಳಿಕ ವಿದ್ಯಾರ್ಥಿಯೊಬ್ಬ ಮಧ್ಯದಲ್ಲಿ ಪರೀಕ್ಷೆ ಮುಗಿಸಿ ಹೋದರೂ ಪ್ರಶ್ನೆ ಪತ್ರಿಕೆಯನ್ನು ತೆಗೆದುಕೊಂಡು ಹೋಗುವಂತಿಲ್ಲ. 1.30ಕ್ಕೆ ನಿಗದಿತ ಅವಧಿ ಮುಗಿದ ಬಳಿಕವೇ ವಿದ್ಯಾರ್ಥಿ ಪ್ರಶ್ನೆ ಪತ್ರಿಕೆಯನ್ನು ತೆಗೆದುಕೊಂಡು ಹೋಗಬೇಕಾಗುತ್ತದೆ. ಆದರೆ ಪರೀಕ್ಷೆ ಆರಂಭಗೊಂಡ ಕೆಲವೇ ನಿಮಿಷದಲ್ಲಿ ಪ್ರಶ್ನೆ ಪತ್ರಿಕೆ ಹೊರಗಡೆ ಬಂದಿರುವುದು ಈಗ ಹಲವು ಅನುಮಾನಗಳಿಗೆ ಕಾರಣವಾಗಿದೆ.
ಪರೀಕ್ಷಾ ಕೇಂದ್ರದ ಒಳಗಡೆ ವಿದ್ಯಾರ್ಥಿಗಳಿಗೆ ಮೊಬೈಲ್ ತೆಗೆದುಕೊಂಡು ಹೋಗಲು ಅನುಮತಿ ಇಲ್ಲ. ಆದರೆ ಈ ಪ್ರಶ್ನೆ ಪತ್ರಿಕೆ ವಾಟ್ಸಪ್ನಲ್ಲಿ ಹೊರ ಬಂದಿದ್ದು ಹೇಗೆ ಎನ್ನುವ ಪ್ರಶ್ನೆ ಈಗ ಹುಟ್ಟಿಕೊಂಡಿದೆ. ಈ ಕೇಂದ್ರದಲ್ಲಿ ಯಾವುದೇ ಸಿಸಿಟಿವಿ ಇಲ್ಲ. ಹೀಗಾಗಿ ಯಾರು ಈ ಫೋಟೋವನ್ನು ಕ್ಲಿಕ್ಕಿಸಿದ್ದಾರೆ ಎನ್ನುವುದನ್ನು ತಿಳಿಯುವುದು ಕಷ್ಟ. ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಸಿಬ್ಬಂದಿಯಿಂದಲೇ ಈ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎನ್ನಲಾಗಿದೆ.
ಅಕ್ರಮ ನಡೆಯುತ್ತಾ?
ಒಂದು ವೇಳೆ ಪ್ರಶ್ನೆ ಪತ್ರಿಕೆ ವಾಟ್ಸಪ್ನಲ್ಲಿ ಸಿಕ್ಕಿದರೆ ಉತ್ತರವನ್ನು ತಯಾರು ಮಾಡಿ ಚೀಟಿ ಮೂಲಕ ವಿದ್ಯಾರ್ಥಿಗಳಿಗೆ ನೀಡುವ ಸಾಧ್ಯತೆಯನ್ನು ನಾವು ತಳ್ಳಿ ಹಾಕುವಂತಿಲ್ಲ. ವಿದ್ಯಾರ್ಥಿಗಳ ಪೋಷಕರ ಜೊತೆ ಸೇರಿ ಶಿಕ್ಷಕರೇ ಕಾಪಿಗೆ ಸಹಕಾರ ನೀಡುತ್ತಿರುವ ಸಿಸಿಟಿವಿಯಲ್ಲಿ ಸೆರೆಯಾಗಿರುವ ಸುದ್ದಿಯನ್ನು ಪಬ್ಲಿಕ್ ಟಿವಿ ಭಾನುವಾರ ಪ್ರಸಾರ ಮಾಡಿತ್ತು. ಇದರಲ್ಲಿ ವಾಟರ್ ಬಾಯಿ ವಿದ್ಯಾರ್ಥಿಗಳಿಗೆ ಚೀಟಿ ನೀಡಿ ಹೋಗುತ್ತಿರುವುದು ಸೆರೆಯಾಗಿತ್ತು. ಹೀಗಾಗಿ ಈ ಒಂದು ಪ್ರಶ್ನೆ ಪತ್ರಿಕೆಯ ಫೋಟೋ ರಾಜ್ಯದ ಹಲವು ಭಾಗಗಳಿಗೆ ತಲುಪಿರುವ ಸಾಧ್ಯತೆಯು ಇದೆ. ಈ ಒಂದು ಪ್ರಶ್ನೆ ಪತ್ರಿಕೆ ಈಗ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಈ ಹಿಂದಿನ ಪರೀಕ್ಷೆಯ ವೇಳೆಯೂ ಈ ರೀತಿ ನಡೆದಿತ್ತಾ ಎನ್ನುವುದು ತಿಳಿದು ಬಂದಿಲ್ಲ.
ಸೋರಿಕೆಯಾಗಿಲ್ಲ: ರಾಯಚೂರಿನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ. ಸಿಬ್ಬಂದಿ ಅಕ್ರಮದಿಂದಾಗಿ ಪ್ರಶ್ನೆ ಪತ್ರಿಕೆ ವಾಟ್ಸಪ್ನಲ್ಲಿ ಬಂದಿರಬಹುದು. ಆ ಕೇಂದ್ರದಲ್ಲಿ ಏನಾಗಿದೆ ಎನ್ನುವುದನ್ನು ತನಿಖೆ ನಡೆಸುತ್ತೇವೆ ಎಂದು ಪದವಿ ಪೂರ್ವ ಶಿಕ್ಷಣಾ ಇಲಾಖೆಯ ನಿರ್ದೇಶಕಿ ಶಿಖಾ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.
ಬೀದರ್ನಲ್ಲಿ ಏನಾಗಿತ್ತು?
ಮಾರ್ಚ್ 9ರಂದು ನಡೆದ ಜೀವಶಾಸ್ತ್ರ ಪರೀಕ್ಷೆಯಲ್ಲಿ ಬೀದರ್ನ ನೂರ ಕಾಲೇಜಿನಲ್ಲಿ ಪ್ರಾಂಶುಪಾಲರು, ಪರೀಕ್ಷೆ ನಿರ್ವಹಿಸುವ ಅಧಿಕಾರಿಗಳು, ಕಾಲೇಜಿನ ಸಿಬ್ಬಂದಿಗಳು ಪರೀಕ್ಷೆಯಲ್ಲಿ ನಕಲು ಮಾಡಲು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಮಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಕೋಣೆ ನಂಬರ್ 1, ಸಿಸಿ ಕ್ಯಾಮರಾ 10 ರಲ್ಲಿ ನಕಲಿಗೆ ಸಿಬ್ಬಂದಿಗಳು ಪ್ರೋತ್ಸಾಹ ಮಾಡುತ್ತಿರುವ ದೃಶ್ಯಗಳು ಸೆರೆಯಾಗಿವೆ. ವ್ಯಕ್ತಿಯೊಬ್ಬ ರಾಜಾರೋಷವಾಗಿ ವಿದ್ಯಾರ್ಥಿನಿಗೆ ಮೊಬೈಲ್ ನೀಡಿ ನಕಲು ಮಾಡಲು ಸಹಕಾರ ಮಾಡುತ್ತಿದ್ದು ಜೊತೆಗೆ ವಾಟರ್ಬಾಯಿ ಕೂಡ ವಿದ್ಯಾರ್ಥಿಗಳಿಗೆ ಚೀಟಿಗಳನ್ನು ನೀಡಿ ಹೋಗುತ್ತಿರುವ ದೃಶ್ಶ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
First information received by dc Raichur at 12.30 2 hours after exam started. It's not a leak all students enter hall by 10.15
— Tanveer Sait INC (@TanveerSaitINC) March 13, 2017
1 page on watsapp. SP Raichur is investigating into the matter. It's a mischief by some miscreants we will find the culprit.
— Tanveer Sait INC (@TanveerSaitINC) March 13, 2017

