ಬೆಂಗಳೂರು: ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಸದ್ಯ ಸಂಗೊಳ್ಳಿರಾಯಣ್ಣ ಬ್ರಿಗೇಡ್ ಸಭೆ ಕರೆದಿದ್ದು, ಕಮಲ ಪಾಳಯದಲ್ಲಿ ಸಂಚಲನವನ್ನು ಸೃಷ್ಟಿಸಿದೆ.
ಜೂನ್ 25ರಂದು ಬಾಗಲಕೋಟೆ ನಗರದಲ್ಲಿ ಊಟದ ನೆಪದಲ್ಲಿ ಸಂಗೊಳ್ಳಿರಾಯಣ್ಣ ಸದಸ್ಯರನ್ನು ಕೆ.ಎಸ್.ಈಶ್ವರಪ್ಪ ಅವರು ಸಭೆಗೆ ಆಹ್ವಾನಿಸಿದ್ದಾರೆ. ಈ ಮೂಲಕ ಬ್ರಿಗೇಡ್ ಸದಸ್ಯರನ್ನು ವಿಶ್ವಾಸಕ್ಕೆ ತಗೆದುಕೊಳ್ಳಲು ಮುಂದಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ವಿಧಾನ ಪರಿಷತ್ ಚುನಾವಣೆಯಲ್ಲಿ ಸಂಗೊಳ್ಳಿರಾಯಣ್ಣ ಬ್ರಿಗೇಡ್ ಸದಸ್ಯರ ಹೆಸರನ್ನು ಪರಿಗಣಿಸದ ಕಾರಣ ಸದಸ್ಯರು ಭಾರೀ ಅಸಮಾಧಾನ ಹೊರಹಾಕಿದ್ದರು. ಹೀಗಾಗಿ ಅವರ ಮನವೊಲಿಕೆಗಾಗಿ ಕೆ.ಎಸ್.ಈಶ್ವರಪ್ಪ ಅವರು ಸಭೆಯ ನಿರ್ಧಾರ ಕೈಗೊಂಡಿದ್ದಾರಂತೆ. ಈ ಮೂಲಕ ತಣ್ಣಗಾಗಿದ್ದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮತ್ತೆ ಚುರುಕಾಗಲಿದೆಯೇ ಎನ್ನುವ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಮೂಡಿದೆ.
ಸಭೆಯಲ್ಲಿ ಪರಿಷತ್ ಚುನಾವಣೆ ಮತ್ತು ವಿಧಾನ ಪರಿಷತ್ ಚುನಾವಣೆಯ ಅಸಮಾಧನವನ್ನು ಸದಸ್ಯರು ಹೊರ ಹಾಕುವ ಸಾಧ್ಯತೆಗಳಿವೆ. ಅಲ್ಲದೇ ವಿಧಾನ ಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಯಾವ ಕಾರಣಕ್ಕೆ ಕೆ.ಎಸ್.ಈಶ್ವರಪ್ಪ ಅವರನ್ನು ಕಡೆಗಣಿಸುತ್ತಿದ್ದಾರೆ ಎನ್ನುವ ಕುರಿತು ಚರ್ಚೆ ನಡೆಯಲಿದೆ ಎಂದು ಬ್ರಿಗೇಡ್ ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.