ಮಡಿಕೇರಿ: ಐಟಿ ಕಂಪನಿ ಉದ್ಯೋಗಿಗಳು ಇಂದು ಗದ್ದೆಯಲ್ಲಿ ನಾಟಿ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ಸೋಮವಾರಪೇಟೆ ನಗರದ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಸಮೀಪದ ಕಿರಗಂದೂರು ಗ್ರಾ.ಪಂ. ವ್ಯಾಪ್ತಿಯ ತಾಕೇರಿ ಗ್ರಾಮದಲ್ಲಿ 3ನೇ ವರ್ಷದ ಗದ್ದೆ ನಾಟಿ ಕಾರ್ಯಕ್ರಮ ನಡೆಯಿತು. ಐಟಿ ಕಂಪನಿಯ ಉದ್ಯೋಗಿಗಳು ಸಂತಸದಿಂದ ಭಾಗವಹಿಸಿ ಭತ್ತ ನಾಟಿ ಮಾಡಿದರು. ನಾಟಿ ಮಾಡುವ ಕುರಿತು ಮಾಹಿತಿ ನೀಡುವ ಮೂಲಕ ಕೃಷಿ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸ್ಥಳೀಯವಾಗಿ ವರ್ಕ್ ಫ್ರಂ ಹೋಮ್ನಲ್ಲಿರುವ ಐಟಿ ಕಂಪನಿಗಳ ಉದ್ಯೋಗಿಗಳು, ವೈದ್ಯರು, ವಕೀಲರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ತಾಕೇರಿಯ ಜಿ.ಎಂ.ರಾಣಿ ಪಾಪಯ್ಯ ಅವರ ಗದ್ದೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಎಸ್.ಪಿ. ಪೊನ್ನಪ್ಪ, ಹೊರಭಾಗದಲ್ಲಿರುವ ಉದ್ಯೋಗಿಗಳು ಕೃಷಿ ಸಮಯದಲ್ಲಾರೂ ತಮ್ಮ ಗ್ರಾಮಕ್ಕೆ ಬಂದು ಗದ್ದೆ ಕೃಷಿ ಮಾಡಬೇಕು. ಹಾಗಾದಾಗ ಮಾತ್ರ ಕೃಷಿಯ ಬಗ್ಗೆ ಅರಿವು ಹಾಗೂ ಕೃಷಿಯ ಮಹತ್ವದ ಬಗ್ಗೆ ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ 82 ಲಕ್ಷ ರೂ. ಹವಾಲಾ ಹಣ ಜಪ್ತಿ
ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ಅಧ್ಯಕ್ಷ ಶ್ರೀನಿಧಿ ಲಿಂಗಪ್ಪ ಮಾತನಾಡಿ, ಸ್ಥಳೀಯ ಯುವ ಜನಾಂಗ ಕೃಷಿ ಕಾರ್ಯಗಳಲ್ಲಿ ಮನಸು ಮಾಡಿದರೆ ಕಾರ್ಮಿಕರ ಸಮಸ್ಯೆ ದೂರಾಗಲಿದೆ. ಗದ್ದೆ ಕೃಷಿಯ ಬಗ್ಗೆ ಬಹುತೇಕ ಐಟಿ ಉದ್ಯೋಗಿಗಳಿಗೆ ಮಾಹಿತಿ ಇರುವುದಿಲ್ಲ. ಭತ್ತ ಬೆಳೆಯುವ ವಿಧಾನವೂ ತಿಳಿದಿರುವುದಿಲ್ಲ. ಅಂತಹವರಿಗೆ ಗದ್ದೆ ನಾಟಿಯ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಜಿ.ಪಂ. ಮಾಜಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ, ಕಾಫಿ ಮಂಡಳಿಯ ಅಧಿಕಾರಿ ಲಕ್ಷ್ಮೀಕಾಂತ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.