ಹುಬ್ಬಳ್ಳಿ: ಮೂವರಿಗೆ ಚಾಕುವಿನಿಂದ ಇರಿದು ಹಲ್ಲೆ ನಡೆಸಿದ ಆರೋಪಿಗೆ ಎರಡೂವರೆ ವರ್ಷ ಕಠಿಣ ಶಿಕ್ಷೆ ಮತ್ತು 25 ಸಾವಿರ ರೂಪಾಯಿ ದಂಡ ವಿಧಿಸಿ ಹುಬ್ಬಳ್ಳಿಯ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ಕೇಶ್ವಾಪುರದ ನಿವಾಸಿ ಮಂಜುನಾಥ ಮ್ಯಾಗೇರಿ ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಬಿರಾದಾರ ದೇವೇಂದ್ರಪ್ಪ ಎಸ್ ಅವರು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಏನಿದು ಪ್ರಕರಣ?
ಅಪರಾಧಿ ಮಂಜುನಾಥ ಮ್ಯಾಗೇರಿ. 2015ರ ಆಗಸ್ಟ್ 7ರಂದು ವಿದ್ಯಾನಗರದ ಪಾಟೀಲ ಕಾಲೋನಿಯ ಬಳಿ ಮೂವರನ್ನು ಕೊಲೆ ಮಾಡುವ ಉದ್ದೇಶದಿಂದ ಸುಪ್ರೀತ ಶೆಟ್ಟಿ, ಬಸವರಾಜ ಮೊರಬದ ಮತ್ತು ಅಭಿಷೇಕ ಪರಾಂಜಪೆಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದನು. ಈ ಕುರಿತು ವಿದ್ಯಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಇದೀಗ ಅಪರಾಧಿಗೆ ಎರಡೂವರೆ ವರ್ಷ ಕಠಿಣ ಶಿಕ್ಷೆ ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ.