ಬೆಂಗಳೂರು: ಬೆಳಗಾವಿಯಲ್ಲಿ (Belagavi) ಜೈನಮುನಿ (Jain Muni) ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಜೈನಮುನಿಗಳ ಹತ್ಯೆ ಖಂಡನೀಯ. ಇದನ್ನು ಸರ್ಕಾರ ಸಹಿಸುವುದಿಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಯಾರೊಬ್ಬರೂ ಪ್ರಚೋದನೆಗೆ ಒಳಗಾಗಬಾರದು. ಬೇರೆಯವರನ್ನು ಪ್ರಚೋದಿಸಬಾರದು. ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದಿದ್ದಾರೆ. ಇದನ್ನೂ ಓದಿ: ಖಟಕಬಾವಿ ಗದ್ದೆಯ ಕೊಳವೆಬಾವಿಯಲ್ಲಿ ಜೈನಮುನಿ ಮೃತದೇಹ ಪತ್ತೆ – ಪೀಸ್ ಪೀಸ್ ಮಾಡಿ ಎಸೆದ ಹಂತಕರು
ಹುಬ್ಬಳ್ಳಿ ಬಳಿಯ ವರೂರು ಶ್ರೀ ಗುಣಧರ ನಂದಿ ಮಹಾರಾಜ ಸ್ವಾಮೀಜಿಗಳು, ಎಲ್ಲಾ ಸ್ವಾಮೀಜಿಗಳಿಗೆ ಭದ್ರತೆ ನೀಡಬೇಕು ಎಂದು ಅನ್ನ, ನೀರು ತ್ಯಜಿಸಿ ಪ್ರತಿಭಟನೆಗೆ ಮುಂದಾಗಿರುವ ಮಾಹಿತಿ ಬಂದಿದೆ. ಸ್ವಾಮೀಜಿಗಳಿಗೆ ಭದ್ರತೆ ನೀಡುವ ಕೆಲಸ ಮಾಡುತ್ತೇವೆ. ಕೂಡಲೇ ಅವರು ತಮ್ಮ ಪ್ರತಿಭಟನೆ ಕೈಬಿಡಬೇಕು ಎಂದು ಮನವಿ ಮಾಡಿದ್ದಾರೆ.
ಸ್ವಾಮೀಜಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಲು ಪ್ರಯತ್ನಿಸುತ್ತಿದ್ದೇನೆ. ಆದರೆ ಸಂಪರ್ಕ ಸಾಧ್ಯವಾಗಿಲ್ಲ. ಹೀಗಾಗಿ ಸ್ಥಳೀಯ ಶಾಸಕರು, ಮಂತ್ರಿಗಳ ಜೊತೆಯೂ ಈ ವಿಚಾರವಾಗಿ ಮಾತನಾಡಿದ್ದೇನೆ ಎಂದಿದ್ದಾರೆ.
ಜುಲೈ 6ರಿಂದ ನಂದಿ ಪರ್ವತ ಆಶ್ರಮದ ಜೈನಮುನಿಗಳು ನಾಪತ್ತೆಯಾಗಿದ್ದರು. ಸ್ವಾಮೀಜಿಯ ನಾಪತ್ತೆಯ ಕುರಿತು ಭಕ್ತರು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರು ಅನುಮಾನದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ ಸ್ವಾಮೀಜಿಯನ್ನು ಹತ್ಯೆ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದರು. ಬಳಿಕ ಜೈನಮುನಿಗಳ ಮೃತದೇಹವನ್ನು ಖಟಕಬಾವಿಯ ಗದ್ದೆಯಲ್ಲಿದ್ದ ತೆರೆದ ಕೊಳವೆಬಾವಿಯಲ್ಲಿ ಪೊಲೀಸರು ಪತ್ತೆ ಹಚ್ಚಿದ್ದರು. ಇದನ್ನೂ ಓದಿ: ಕರೆಂಟ್ ಶಾಕ್ ಕೊಟ್ಟು, ಕತ್ತು ಹಿಸುಕಿ ಜೈನಮುನಿ ಹತ್ಯೆ – ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ?
Web Stories