ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಆರಂಭ

Public TV
1 Min Read
BSY dasara

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ವಿಜಯದಶಮಿಯಂದು ನಡೆಯುವ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ಸಿಕ್ಕಿದೆ. 750 ಕೆಜಿ ತೂಕದ ಅಂಬಾರಿಯಲ್ಲಿ ಚಾಮುಂಡಿದೇವಿಯನ್ನು ಹೊತ್ತುಕೊಂಡು ಅರ್ಜುನ ಬನ್ನಿ ಮಂಟಪದತ್ತ ಹೆಜ್ಜೆ ಹಾಕುತ್ತಿದ್ದಾನೆ.

ಅರಮನೆ ಉತ್ತರ ದ್ವಾರವಾದ ಬಲರಾಮ ದ್ವಾರದಲ್ಲಿ ಮಧ್ಯಾಹ್ನ 2.09ಕ್ಕೆ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ ಸಂಜೆ 4.17ರ ಶುಭ ಕುಂಬ ಲಗ್ನದಲ್ಲಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿ ಮೆರವಣಿಗೆಗೆ ಸಿಎಂ ಯಡಿಯೂರಪ್ಪ ಚಾಲನೆ ನೀಡಿದರು.

ಜಂಬೂ ಸವಾರಿಯಲ್ಲಿ 8ನೇ ಬಾರಿಗೆ ಅರ್ಜುನ 750 ಕೆಜಿ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಿರುವ ನಾಡದೇವತೆ ಚಾಮುಂಡೇಶ್ವರಿಯನ್ನು ಹೊತ್ತು ರಾಜ ಗಾಂಭೀರ್ಯದಿಂದ ಸಾಗುತ್ತಿದ್ದಾನೆ. ಈ ಜಂಬೂಸವಾರಿಯಲ್ಲಿ 39 ಸ್ತಬ್ಧ ಚಿತ್ರಗಳು, ವಿವಿಧ ಜಾನಪದ ಕಲಾತಂಡಗಳು, 100ಕ್ಕೂ ಹೆಚ್ಚು ಕಲಾ ತಂಡಗಳು, ಉತ್ತರ ಭಾರತದ ವಿವಿಧ ರಾಜ್ಯಗಳ 5 ಕಲಾ ತಂಡ, 1,675 ಕಲಾವಿದರು ಸೇರಿದಂತೆ ಒಟ್ಟು 2 ಸಾವಿರ ಮಂದಿ ಭಾಗಿಯಾಗಿದ್ದಾರೆ.

ಸಂಜೆ 4.30ಕ್ಕೆ ಹೊರಟ ಅಂಬಾರಿ ಸಂಜೆ 7 ಗಂಟೆಗೆ ಬನ್ನಿ ಮಂಟಪ ತಲುಪುತ್ತದೆ. ಇತ್ತ ರಾತ್ರಿ 7.30ಕ್ಕೆ ಬನ್ನಿಮಂಟಪದಲ್ಲಿ ಪಂಜಿನ ಕವಾಯತು ಆರಂಭವಾಗುತ್ತದೆ. ನೂರಾರು ಮಂದಿ ಪಂಜನ್ನು ಹಿಡಿದು ಸಾಹಸ ಪ್ರದರ್ಶಿಸುತ್ತಾರೆ. ಈ ಪಂಜಿನ ಕವಾಯತಿನ ಬಳಿಕ ರಾತ್ರಿ 10 ಗಂಟೆಗೆ ಪಟಾಕಿ ಸಿಡಿಸೋ ಮೂಲಕ ದಸರಾಕ್ಕೆ ತೆರೆ ಬೀಳುತ್ತದೆ.

Share This Article
Leave a Comment

Leave a Reply

Your email address will not be published. Required fields are marked *