ಮಂಡ್ಯ: ಮಾಜಿ ಸಂಸದ ರೆಬೆಲ್ ಸ್ಟಾರ್ ಅಂಬರೀಶ್ ಅವರನ್ನು ಜೆಡಿಎಸ್ ಪಕ್ಷದ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಭೇಟಿ ಮಾಡಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದಾರೆ.
ಉಪಚುನಾವಣೆಗೆ ನಾಮಪತ್ರ ಸಲ್ಲಿಸುತ್ತಿದ್ದಂತೆ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಪ್ರಚಾರವನ್ನು ಆರಂಭಿಸಿದ್ದಾರೆ. ಆದರೆ ಮಂಡ್ಯ ಲೋಕಸಭೆ ಉಪಚುನಾವಣೆ ಜೆಡಿಎಸ್ ಪಕ್ಷದ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಅವರು ಬೆಂಬಲ ಕೋರಿದ ಅಂಬರೀಶ್ ಅವರನ್ನು ಭೇಟಿ ಮಾಡಿದ್ದಾರೆ.
ಶಿವರಾಮೇಗೌಡ ಅವರು ಇಂದು ಬೆಂಗಳೂರಿನ ಅಪಾರ್ಟ್ ಮೆಂಟ್ ನಲ್ಲಿ ಅಂಬರೀಶ್ ಅವರನ್ನು ಭೇಟಿ ಮಾಡಿದ್ದು, ಚುನಾವಣೆಯಲ್ಲಿ ತಮಗೆ ಸಹಕಾರ ನೀಡುವಂತೆ ಹಾಗೂ ಮಂಡ್ಯಕ್ಕೆ ಆಗಮಿಸಿ ತಮ್ಮ ಪರ ಪ್ರಚಾರ ಮಾಡುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಅಂಬರೀಶ್ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ವೇಳೆ ಶಿವರಾಮೇಗೌಡ ಅವರು ಅಂಬರೀಶ್ ಅವರಿಗೆ ಶಾಲು, ಹಾರ ಹಾಕಿ ಸನ್ಮಾನ ಮಾಡಿದ್ದಾರೆ. ಈ ಸಂದರ್ಭದಲ್ಲಿ ಅವರ ಕಾಲಿಗೆ ಬಿದ್ದು, ಆಶೀರ್ವಾದವನ್ನು ಪಡೆದುಕೊಂಡಿದ್ದಾರೆ. ಈ ಹಿಂದೆ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಜೆಡಿಎಸ್ಗೆ ಬೆಂಬಲ ನೀಡುವಂತೆ ಪಕ್ಷದ ಅಭ್ಯರ್ಥಿಗಳು, ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೂಡ ಅಂಬರೀಶ್ ಬಳಿ ಮನವಿ ಮಾಡಿದ್ದರು. ಈಗ ಉಪಚುನಾವಣೆಯಲ್ಲಿಯೂ ಜೆಡಿಎಸ್ ಅಭ್ಯರ್ಥಿ ಶಿವರಾಮೇಗೌಡ ಅವರು ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಜಿಲ್ಲೆಯ ಲೋಕಸಭೆ ಉಪಚುನಾವಣೆಗೆ ಜೆಡಿಎಸ್ ಪಕ್ಷದಿಂದ ಲಕ್ಷ್ಮಿ ಅಶ್ವಿನಿಗೌಡ ಅವರು ಸ್ಪರ್ಧೆ ಮಾಡುತ್ತಾರೆ ಎಂದು ಹೇಳಲಾಗುತ್ತಿತ್ತು. ಆದರೆ ಕೊನೆಯ ಕ್ಷಣದಲ್ಲಿ ಎಲ್.ಆರ್.ಶಿವರಾಮೇಗೌಡ ಅವರಿಗೆ ಟಿಕೆಟ್ ಸಿಕ್ಕಿದ್ದು, ಸೋಮವಾರ ಮೊದಲಿಗೆ ಕಾಲಬೈರವೇಶ್ವರ ಸ್ವಾಮಿಯ ದೇಗುಲಕ್ಕೆ ಹೋಗಿ ಪೂಜೆ ಮಾಡಿಸಿ ನಂತರ ನಾಲ್ಕು ನಾಮಪತ್ರವನ್ನು ಸಲ್ಲಿಸಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv