ಹಾವೇರಿ: ಕಳೆದ ಎರಡು ದಿನಗಳ ಹಿಂದೆ ಚುನಾವಣೆಗೆ ನಿಲ್ಲದಿರಲು ನಿರ್ಧರಿಸಿದ್ದ ಸ್ವಾಮೀಜಿ ಈಗ ರಾತ್ರೋರಾತ್ರಿ ಹಿರೇಕೆರೂರು ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ.
ಹಾವೇರಿ ಜಿಲ್ಲೆ ರಟ್ಟೀಹಳ್ಳಿಯ ಪಟ್ಟಣದ ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಜೆಡಿಎಸ್ ಪಕ್ಷದಿಂದ ರಾಜಕೀಯ ಅಕಾಡಕ್ಕೆ ಎಂಟ್ರಿ ಕೊಡಲಿದ್ದಾರೆ. ರಾತ್ರೋರಾತ್ರಿ ಜೆಡಿಎಸ್ನಿಂದ ಚುನಾವಣೆಗೆ ನಿಲ್ಲುವ ನಿರ್ಧಾರ ಮಾಡಿದ್ದಾರೆ.
ಎರಡು ದಿನಗಳ ಹಿಂದೆ ಭಕ್ತರ ಸಭೆ ನಡೆಸಿ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಒಲ್ಲೆ ಎಂದಿದ್ದಾರೆ. ಈಗ ರಾತ್ರೋರಾತ್ರಿ ಜೆಡಿಎಸ್ ಟಿಕೆಟ್ ಫೈನಲ್ ಆಗಿದೆ. ಸ್ವಾಮೀಜಿ ಜೆಡಿಎಸ್ನಿಂದ ಎಂಟ್ರಿ ಕೊಟ್ಟಿದ್ದು, ಎಲ್ಲರಿಗೂ ಅಚ್ಚರಿ ಮೂಡಿಸಿದೆ.
ಇಂದು ಮಧ್ಯಾಹ್ನ ಮೂರು ಗಂಟೆಯೊಳಗೆ ನಾಮಪತ್ರ ಸಲ್ಲಿಸಲು ಸ್ವಾಮೀಜಿ ನಿರ್ಧಾರ ಮಾಡಿದ್ದಾರೆ. ಜೆಡಿಎಸ್ ಪಕ್ಷ ಉಜಿನೆಪ್ಪ ಕೋಡಿಹಳ್ಳಿ ಎಂಬವರಿಗೆ ಈಗಾಗಲೇ ಟಿಕೆಟ್ ಘೋಷಿಸಿದ್ದು, ಆದರೆ ಈಗ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದನ್ನು ಸ್ವಾಮೀಜಿ ಖಚಿತಪಡಿಸಿದ್ದಾರೆ.
ಇತ್ತೀಚೆಗೆ ಹಿರೇಕೆರೂರು ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸುವಂತೆ ರಟ್ಟೀಹಳ್ಳಿ ಪಟ್ಟಣದಲ್ಲಿರುವ ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿಗೆ ಭಕ್ತರು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯ ಮಾಡಿದ್ದರು. ಹಿರೇಕೆರೂರು ಕ್ಷೇತ್ರದ ರಾಜಕಾರಣ ಅಪಮೌಲ್ಯ ಆಗಿದೆ. ಕ್ಷೇತ್ರದ ರಾಜಕೀಯ ವ್ಯವಸ್ಥೆ ಸರಿಪಡಿಸಲು ಚುನಾವಣೆಗೆ ಸ್ಪರ್ಧಿಸಿ ಎಂದು ಒತ್ತಡ ಹಾಕಿದ್ದರು.