ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಅವರು ನಗರದ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶುಕ್ರವಾರವಷ್ಟೇ ಎದೆನೋವು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಹೈದರಾಬಾದ್ ನ ಆಸ್ಪತ್ರೆಗೆ ದಾಖಲಾಗಿದ್ದರು. ಆ ಬಳಿಕ ಚಿಕಿತ್ಸೆ ಪಡೆದು ಅಲ್ಲಿಂದ ಬೆಂಗಳೂರಿಗೆ ತೆರಳಿದ್ದರು. ನಂತರ ನಗರದ ಜಯದೇವ ಆಸ್ಪತ್ರೆಗೆ ದಾಖಲಾಗಿದ್ರು. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಶ್ವನಾಥ್ ಅವರಿಗೆ ಮೂರು ದಿನಗಳ ಕಾಲ ಆಸ್ಪತ್ರೆಯಲ್ಲೆ ಇರುವಂತೆ ವೈದ್ಯ ಡಾ. ಮಂಜುನಾಥ್ ಸೂಚನೆ ನೀಡಿದ್ದಾರೆ.
ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ವಿಶ್ವನಾಥ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ವಿಶ್ವನಾಥ್ ಆರೋಗ್ಯವಾಗಿದ್ದು, ಕೆಲ ದಿನ ವಿಶ್ರಾಂತಿ ಬೇಕಿದೆ ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.
Just met H. Vishwanath Sir at Jaideva, Bengaluru. He is fit n fine. Just need few days rest. pic.twitter.com/kYBsOKsZj7
— Pratap Simha (@mepratap) March 17, 2019
ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ಅವರಿಗೆ ಶುಕ್ರವಾರ ಸಂಜೆ ಹೈದರಾಬಾದ್ ನಲ್ಲಿ ಲಘು ಹೃದಯಾಘಾತವಾಗಿತ್ತು. ವಿಮಾನ ನಿಲ್ದಾಣದಲ್ಲಿ ಎದೆ ನೋವು ಕಾಣಿಸಿಕೊಂಡು ಅಸ್ವಸ್ಥರಾದ ವಿಶ್ವನಾಥ್ ಅವರನ್ನು ಕೂಡಲೇ ಹೈದರಾಬಾದ್ ನ ಲಾಲ್ಬಹುದ್ದೂರ್ ಶಾಸ್ತ್ರಿ ನಗರದ ಓಜೋನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಅಲ್ಲಿನ ವೈದ್ಯರೊಂದಿಗೆ ಜಯದೇವ ಆಸ್ಪತ್ರೆಯ ವೈದ್ಯ ಡಾ.ಮಂಜುನಾಥ್ ನಿರಂತರ ಸಂಪರ್ಕದಲ್ಲಿದ್ದು, ಆರೋಗ್ಯದ ಮಾಹಿತಿಯನ್ನು ಪಡೆದುಕೊಂಡಿದ್ದರು.
ಈ ಹಿಂದೆ ವಿಶ್ವನಾಥ್ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಿ ಮೂರು ಸ್ಟಂಟ್ ಗಳನ್ನು ಅಳವಡಿಸಲಾಗಿತ್ತು. ಮೂರು ಸ್ಟಂಟ್ ಗಳ ಪೈಕಿ ಒಂದರಲ್ಲಿ ತೊಂದರೆ ಕಾಣಿಸಿಕೊಂಡಿದ್ದರಿಂದ ಲಘು ಹೃದಯಾಘಾತ ಸಂಭವಿಸಿದೆ ಎಂದು ಹೇಳಲಾಗಿತ್ತು. ಕುರುಬ ಸಮಾಜದ ಕಾರ್ಯಕ್ರಮದಲ್ಲಿ ಭಾಗಿಯಾಗಲು ವಿಶ್ವನಾಥ್ ಹೈದರಾಬಾದ್ ಗೆ ತೆರಳಿದ್ದರು. ವಿಮಾನ ನಿಲ್ದಾಣದಲ್ಲಿ ಮಾಜಿ ಸಚಿವ ಹೆಚ್.ಎಂ.ರೇವಣ್ಣ ಸಹ ವಿಶ್ವನಾಥ್ ಅವರ ಜೊತೆಯಲ್ಲಿದ್ದರು.