– ಪ್ರತಿಭಟನಾಕಾರರ ಮನವೊಲಿಸಲು ಸಿಎಂ ಹರಸಾಹಸ
ರಾಂಚಿ: ಜಾರ್ಖಂಡ್ನಲ್ಲಿ(Jharkhand) ವಿದ್ಯಾರ್ಥಿಗಳ ಪ್ರತಿಭಟನೆ (students Protest) ವೇಳೆ ನಡೆದ ಪೊಲೀಸ್ ಕ್ರಮ ಖಂಡಿಸಿ ಬಿಜೆಪಿ ರಾಜ್ಯಾದ್ಯಂತ (BJP) ಬಂದ್ಗೆ ಕರೆ ನೀಡಿದೆ.
ರಾಂಚಿಯಲ್ಲಿ ವಿಧಾನಸಭೆ ಮುತ್ತಿಗೆಗೆ ಯತ್ನಿಸಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ, ಅಶ್ರುವಾಯು ಮತ್ತು ಜಲಫಿರಂಗಿ ಬಳಸಿದ ಕ್ರಮಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಪ್ರತಿಭಟನೆಯ ವೇಳೆ ನೂರಾರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಜಾರ್ಖಂಡ್ ಬಿಜೆಪಿ ಅಧ್ಯಕ್ಷ ಆದಿತ್ಯ ಸಾಹು ಆರೋಪಿಸಿದ್ದಾರೆ. ವಿದ್ಯಾರ್ಥಿಗಳ ಬೇಡಿಕೆಗಳನ್ನು ಹೇಮಂತ್ ಸೊರೇನ್ ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಅವರು ದೂರಿದ್ದಾರೆ.
ಬಿಜೆಪಿ ವಿರೋಧ ಪಕ್ಷದ ನಾಯಕ ಬಾಬುಲಾಲ್ ಮರಾಂಡಿ ಕೂಡ ಪೊಲೀಸ್ ಕ್ರಮವನ್ನು ಖಂಡಿಸಿದ್ದಾರೆ. ಜಾರ್ಖಂಡ್ನಲ್ಲಿ ಹೇಮಂತ್ ಸೊರೇನ್ ಸರ್ಕಾರಕ್ಕೆ ಕಾಂಗ್ರೆಸ್ ನೀಡುತ್ತಿರುವ ಬೆಂಬಲವನ್ನು ಹಿಂಪಡೆಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಪರೀಕ್ಷಾ ಅಕ್ರಮದ ವಿರುದ್ಧ ವಿದ್ಯಾರ್ಥಿಗಳ ಹೋರಾಟ
ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (JSSC) ಪರೀಕ್ಷೆಗಳಲ್ಲಿನ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳು ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.
ಸೋಮವಾರ ಸಾವಿರಾರು ವಿದ್ಯಾರ್ಥಿಗಳು ರಾಂಚಿಯಲ್ಲಿ ವಿಧಾನಸಭೆಯತ್ತ ಮೆರವಣಿಗೆ ನಡೆಸಿದ್ದರು. ಈ ವೇಳೆ ಪೊಲೀಸರು ಬ್ಯಾರಿಕೇಡ್ಗಳನ್ನು ಹಾಕಿ ವಿದ್ಯಾರ್ಥಿಗಳನ್ನು ತಡೆಯಲು ಪ್ರಯತ್ನಿಸಿದ್ದರು. ಪರಿಸ್ಥಿತಿ ಉದ್ವಿಗ್ನಗೊಂಡ ಬಳಿಕ ಲಾಠಿ ಪ್ರಹಾರ, ಅಶ್ರುವಾಯು ಹಾಗೂ ಜಲಫಿರಂಗಿ ಬಳಸಲಾಗಿತ್ತು. ಇದನ್ನೂ ಓದಿ: ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆ ಆ.17ರವರೆಗೆ ವಿಸ್ತರಣೆ
ಇದಕ್ಕೂ ಮುನ್ನ ಸರ್ಕಾರ 14ನೇ JPSC ಸಂಯೋಜಿತ ನಾಗರಿಕ ಸೇವೆಗಳ ಪ್ರಾಥಮಿಕ ಪರೀಕ್ಷೆ ಸೇರಿದಂತೆ ಮೂರು ಪರೀಕ್ಷೆಗಳನ್ನು ರದ್ದುಗೊಳಿಸಲು ಒಪ್ಪಿಕೊಂಡಿತ್ತು. 14ನೇ JPSC ಪರೀಕ್ಷೆಯಲ್ಲಿನ ಆರ್ಥಿಕ ಅಕ್ರಮಗಳ ಬಗ್ಗೆ ಜಾರಿ ನಿರ್ದೇಶನಾಲಯ (ED) ತನಿಖೆ ನಡೆಸುವ ಬೇಡಿಕೆಗೂ ಸರ್ಕಾರ ಒಪ್ಪಿಗೆ ನೀಡಿದೆ.
ಆದರೆ ಪ್ರಕರಣವನ್ನು ರಾಜ್ಯ CIDಯಿಂದ CBIಗೆ ವರ್ಗಾಯಿಸುವ ವಿದ್ಯಾರ್ಥಿಗಳ ಬೇಡಿಕೆಯನ್ನು ಸರ್ಕಾರ ಒಪ್ಪಿಲ್ಲ. ಇದೇ ವೇಳೆ, 14ನೇ ನಾಗರಿಕ ಸೇವಾ ಪರೀಕ್ಷೆಗೆ ಸಂಬಂಧಿಸಿದ ಆರೋಪಗಳ ತನಿಖೆ ನಡೆಸುತ್ತಿರುವ CID, JPSC ಮಾಜಿ ಅಧ್ಯಕ್ಷ ಎಲ್. ಖಿಯಾಂಗ್ಟೆ ಅವರನ್ನು ಬಂಧಿಸಿದೆ.
‘ವಿದ್ಯಾರ್ಥಿಗಳ ಬೇಡಿಕೆ ಆಲಿಸಲು ಸಿದ್ಧ’ ಎಂದ ಸೊರೇನ್
ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳನ್ನು ಮಾತುಕತೆಯ ಮೂಲಕ ಪರಿಹರಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಹೇಮಂತ್ ಸೊರೇನ್ ಮನವಿ ಮಾಡಿದ್ದಾರೆ. ಸರ್ಕಾರ ವಿದ್ಯಾರ್ಥಿಗಳ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿದ್ದು, ಪರೀಕ್ಷಾ ವ್ಯವಸ್ಥೆಯನ್ನು ಮತ್ತಷ್ಟು ಪಾರದರ್ಶಕ ಮತ್ತು ಸುರಕ್ಷಿತಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ವಿದ್ಯಾರ್ಥಿಗಳ ಶಾಂತಿಯುತ ಪ್ರತಿಭಟನೆಯ ನಡುವೆ ವಿರೋಧ ಪಕ್ಷಗಳು ರಾಜಕೀಯ ಲಾಭಕ್ಕಾಗಿ ವಿದ್ಯಾರ್ಥಿಗಳನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಿವೆ ಎಂದು ಸೊರೇನ್ ಆರೋಪಿಸಿದ್ದಾರೆ.
ವಿದ್ಯಾರ್ಥಿಗಳು ಯಾವುದೇ ರಾಜಕೀಯ ನಿರೂಪಣೆಗೆ ಒಳಗಾಗದೆ ಸರ್ಕಾರದೊಂದಿಗೆ ಮಾತುಕತೆ ನಡೆಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ‘ನೀವು ಜಾರ್ಖಂಡ್ನ ಭವಿಷ್ಯ. ನಿಮ್ಮ ಧ್ವನಿಯನ್ನು ನಿರ್ಲಕ್ಷಿಸುವುದಲ್ಲ, ಆಲಿಸಿ ಸಮಸ್ಯೆ ಪರಿಹರಿಸುವುದು ಸರ್ಕಾರದ ಜವಾಬ್ದಾರಿ’ ಎಂದು ಸೊರೇನ್ ಹೇಳಿದ್ದಾರೆ. ಇದನ್ನೂ ಓದಿ: ರಾಯಚೂರು | ಎಪಿಎಂಸಿಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ರೂ.ಮೌಲ್ಯದ ವಸ್ತುಗಳು ಬೆಂಕಿಗಾಹುತಿ
ಇತ್ತ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವನ್ನು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೂಡ ಟೀಕಿಸಿದ್ದಾರೆ. ಹೀಗಾಗಿ ಜಾರ್ಖಂಡ್ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಬಿಜೆಪಿ ಕರೆ ನೀಡಿರುವ ಬಂದ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಿಯಾಗುವ ಸಾಧ್ಯತೆ ಇದೆ.

