ಬೆಂಗಳೂರು: ಕಾಂಗ್ರೆಸ್ ಪಕ್ಷದ ಯುವ ಶಾಸಕ ಕಂಪ್ಲಿ ಕ್ಷೇತ್ರದ ಗಣೇಶ್ ಅವರು ಆನಂದ್ ಸಿಂಗ್ ಬಗ್ಗೆ ಅಭಿಮಾನ ಹೊಂದಿದ್ದರು. ಆದರೆ ಇತ್ತೀಚೆಗೆ ಕ್ಷೇತ್ರದಲ್ಲಿ ನಡೆಯುತ್ತಿದ್ದ ಹಸ್ತಕ್ಷೇಪದ ಬಗ್ಗೆ ಗಣೇಶ್ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.
ಶಾಸಕ ಗಣೇಶ್ ಅವರು ಸಕ್ರಿಯ ರಾಜಕಾರಣಕ್ಕೆ ಬಂದ ವೇಳೆ ಶಾಸಕ ಆನಂದ್ ಸಿಂಗ್ ಅವರ ಬೆಂಬಲವಾಗಿ ಅಭಿಮಾನ ಹೊಂದಿದ್ದರು. ಆದರೆ ಕಂಪ್ಲಿ ಕ್ಷೇತ್ರದಲ್ಲಿ ಶಾಸಕರಾಗಿ ಗಣೇಶ್ ಆಯ್ಕೆ ಆಗಿದ್ದರೂ ಆನಂದ್ ಸಿಂಗ್ ಅವರ ಅಳಿಯ ಸಂದೀಪ್ ಸಿಂಗ್ ಕ್ಷೇತ್ರದ ಕಾರ್ಯಗಳಲ್ಲಿ ಹಸ್ತಕ್ಷೇಪ ನಡೆಸುತ್ತಿದ್ದರು. ಇದರಿಂದ ಗಣೇಶ್ ಅವರು ಅಸಮಾಧಾನಗೊಂಡಿದ್ದರು ಎನ್ನಲಾಗಿದೆ. ಅಲ್ಲದೇ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನಗೊಂಡಿದ್ದ ಗಣೇಶ್ ಅವರು ಬಿಜೆಪಿ ನಾಯಕರ ಸಂಪರ್ಕದಲ್ಲಿ ಇದ್ದರು ಎಂಬ ಮಾಹಿತಿಯೂ ಲಭಿಸಿದ್ದು, ಈ ಕುರಿತು ಶಾಸಕ ಆನಂದ್ ಸಿಂಗ್ ಕಾಂಗ್ರೆಸ್ ಮುಖಂಡರಿಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ.
ಬಿಜೆಪಿ ಆಪರೇಷನ್ ಕಮಲ ಬಗ್ಗೆ ಮಾಹಿತಿ ಪಡೆದ ಕಾಂಗ್ರೆಸ್ ಮುಖಂಡರು ವಿಧಾನಸೌಧದಲ್ಲಿ ನಡೆದ ಸಿಎಲ್ಪಿ ಸಭೆಯ ಬಳಿಕ ಶಾಸಕರನ್ನು ನೇರ ರೆಸಾರ್ಟಿಗೆ ಶಿಫ್ಟ್ ಮಾಡಿದ್ದರು. ಆದರೆ ಶಾಸಕಾಂಗ ಸಭೆಗೆ ಹಾಜರಾಗಿ ಬಳಿಕ ಗಣೇಶ್ ಅವರು ಸೀದಾ ಅತೃಪ್ತ ಶಾಸಕರ ಕೂಟ ಸೇರಲು ಮುಂದಾಗಿದ್ದರು ಎನ್ನಲಾಗಿತ್ತು. ಇದರಿಂದ ಗಣೇಶ್ ಅಸಮಾಧಾನಗೊಂಡಿದ್ದರು ಎಂಬ ಮಾಹಿತಿ ಪಕ್ಷದ ವಲಯದಿಂದಲೇ ಕೇಳಿ ಬಂದಿದೆ.
ಸದ್ಯ ಆನಂದ್ ಸಿಂಗ್ ಅವರು ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದ್ದು, ಶಾಸಕ ಗಣೇಶ್ ಅವರು ರೆಸಾರ್ಟಿನಲ್ಲೇ ತಂಗಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಆನಂದ್ ಸಿಂಗ್ ಅಥವಾ ಗಣೇಶ್ ಯಾವುದೇ ಸ್ಪಷ್ಟನೆ ನೀಡಿಲ್ಲ. ಆದರೆ ಶಾಸಕ ಮಾರಾಮಾರಿ ವರದಿಯನ್ನು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ಅಲ್ಲಗೆಳೆದಿದ್ದು, ಶಾಸಕರು ಒಗ್ಗಟ್ಟಿನಿಂದ ಇದ್ದಾರೆ. ಯಾವುದೇ ಅಸಮಾಧಾನ ಇಲ್ಲ ಎಂದು ಹೇಳಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv