ಮಂಗಳೂರು: ತೀವ್ರ ಅನಾರೋಗ್ಯ ಕಾರಣದಿಂದ ಮಾಹೆ ವಿವಿಯಲ್ಲಿ ಪತ್ರಿಕೋದ್ಯಮ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಸುನಿಲ್ ಬಾದ್ರಿ ನಿಧನರಾಗಿದ್ದಾರೆ.
ಸುನಿಲ್ ಬಾದ್ರಿ ಅವರು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಎಲ್.ಬಿ & ಎಸ್.ಬಿ.ಎಸ್ ಕಾಲೇಜಿನಲ್ಲಿ ಪತ್ರಿಕೋದ್ಯಮ ಉಪನ್ಯಾಸಕರಾಗಿ ವೃತ್ತಿಜೀವನ ಆರಂಭಿಸಿದ್ದರು. ಪ್ರಸ್ತುತ ಮಾಹೆ ವಿಶ್ವವಿದ್ಯಾಲಯದ ಕಮ್ಯುನಿಕೇಷನ್ ವಿಭಾಗದಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಾಹೆ ವಿವಿಯಲ್ಲಿ ಹದಿನಾಲ್ಕು ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ಹಲವು ಪತ್ರಕರ್ತರನ್ನು ಪತ್ರಿಕೋದ್ಯಮಕ್ಕೆ ನೀಡಿದ ಹೆಮ್ಮೆ ಇವರದ್ದಾಗಿದೆ.
ಸುನಿಲ್ ಬಾದ್ರಿ ಅವರು ಹೈದರಾಬಾದ್ ಸೆಂಟ್ರಲ್ ಯೂನಿವರ್ಸಿಟಿಯಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದರು. ಇವರು ತಬಲಾ ವಾದಕರೂ ಆಗಿದ್ದರು.
ತಮ್ಮ ನಿಸ್ವಾರ್ಥ ಸೇವೆಯಿಂದ ವಿದ್ಯಾರ್ಥಿಗಳು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಬೆಳೆಯುವಂತೆ ಮಾಡಿದ್ದರು. ಇವರ ನಿಧನಕ್ಕೆ ಅನೇಕ ಗಣ್ಯರು, ಪತ್ರಿಕೋದ್ಯಮ ವಿದ್ಯಾರ್ಥಿಗಳು ಹಾಗೂ ಇವರ ಬಳಿ ಕಲಿತ ಹಳೆಯ ವಿದ್ಯಾರ್ಥಿಗಳು ಕಂಬನಿ ಮಿಡಿದಿದ್ದಾರೆ.