ಅಕ್ರಮ ಮರಳು ದಂಧೆ ಬಗ್ಗೆ ತನಿಖೆ ಮಾಡ್ತಿದ್ದ ಪತ್ರಕರ್ತನ ಮೇಲೆ ಲಾರಿ ಹರಿದು ಸಾವು

Public TV
1 Min Read
sandeep sharma truck

ಭೋಪಾಲ್: ಅಕ್ರಮ ಮರಳು ದಂಧೆ ಬಗ್ಗೆ ತನಿಖೆ ಮಾಡುತ್ತಿದ್ದ ಪತ್ರಕರ್ತರೊಬ್ಬರ ಮೇಲೆ ಲಾರಿ ಹರಿದು ಸಾವನ್ನಪ್ಪಿರುವ ಘಟನೆ ಇಂದು ಮಧ್ಯಪ್ರದೇಶದಲ್ಲಿ ನಡೆದಿದೆ.

35 ವರ್ಷದ ಸಂದೀಪ್ ಶರ್ಮಾ ಮೃತ ಪತ್ರಕರ್ತ. ಸಂದೀಪ್ ಅವರು ಬೈಕ್‍ನಲ್ಲಿ ಹೋಗುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಸಂದೀಪ್ ಮೃತಪಟ್ಟಿದ್ದು, ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.

ಪೊಲೀಸ್ ಠಾಣೆಯ ಬಳಿಯೇ ಅಪಘಾತ ಸಂಭವಿಸಿದ್ದು, ಪೊಲೀಸರು ಕೂಡಲೇ ಸ್ಥಳಕ್ಕೆ ದೌಡಾಯಿಸಿ ಸಂದೀಪ್ ಅವರನ್ನು ಆಸ್ಪತ್ರೆಗೆ ರವಾನಿಸಿದರು ಎಂದು ವರದಿಯಾಗಿದೆ. ಆದ್ರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಸಂದೀಪ್ ಸಾವನ್ನಪ್ಪಿದ್ದಾರೆಂದು ವೈದ್ಯರು ಹೇಳಿದ್ದಾರೆ. ಅಪಘಾತದ ದೃಶ್ಯ ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದರ ವಿಡಿಯೋವನ್ನ ಸುದ್ದಿಸಂಸ್ಥೆ ಹಂಚಿಕೊಂಡಿದೆ.

ರಾಷ್ಟ್ರೀಯ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಸಂದೀಪ್ ಶರ್ಮಾ ಈ ಹಿಂದೆ ನಡೆಸಿದ ಕುಟುಕು ಕಾರ್ಯಾಚರಣೆಯಿಂದಾಗಿ ತನಗೆ ಜೀವ ಬೆದರಿಕೆ ಇದೆ ಎಂದು ಪೊಲೀಸರಿಗೆ ದೂರು ನೀಡಿದ್ದರು ಎಂದು ವರದಿಯಾಗಿದೆ. ಸಂದೀಪ್ ಅವರು ಮಾಡಿದ್ದ ಕುಟುಕು ಕಾರ್ಯಾಚರಣೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಮಾಫಿಯಾದವರಿಂದ ಲಂಚ ಪಡೆಯುತ್ತಿರುವುದನ್ನು ತೋರಿಸಲಾಗಿತ್ತು.

ಈ ಬಗ್ಗೆ ತನಿಖೆ ನಡೆಸಲು ಜಿಲ್ಲಾ ಎಸ್‍ಪಿ ವಿಶೇಷ ತನಿಖಾ ತಂಡವನ್ನ ರಚಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *